Get Updates
Get notified of breaking news, exclusive insights, and must-see stories!

ರಾಜ್ಯದ ಎಲ್ಲ ಕೈದಿಗಳಿಗೆ ಈ ಮಹತ್ವದ ದಿನಗಳಂದು ಸಿಹಿ ವಿತರಣೆ: ಸರ್ಕಾರದಿಂದ ಆದೇಶ

ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸಿಹಿಸುದ್ದಿ ನೀಡಿದೆ. ಇಲ್ಲಿವರೆಗೆ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ ಸೇರಿ ರಾಷ್ಟ್ರೀಯ ಹಬ್ಬಗಳು ಹಾಗೂ ಪ್ರಮುಖ ಮಹತ್ವದ ದಿನಗಳಂದು ಕೈದಿಗಳಿಗೆ ಸಿಹಿ ವಿತರಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ವರ್ಷ ಏಪ್ರಿಲ್‌ 14ರ ಡಾ.ಬಿ.ಆರ್‌. ಅಂಬೇಡ್ಕರ್‌ ಜನ್ಮದಿನ ಹಾಗೂ ಮೇ 12ರ ಬುದ್ಧ ಪೂರ್ಣಿಮೆಯಂದು ಸಹ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿರುವ ಕೈದಿಗಳಿಗೆ ಸಿಹಿ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾಮಾಜಿಕ ಹೋರಾಟಗಾರ ಟಿ.ನರಸಿಂಹಮೂರ್ತಿ ಅವರು ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆಯಂದೂ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಹಿ ವಿತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಸಿಎಂ ಸೂಚಿಸಿದ್ದರು. ಅದರಂತೆ ಗೃಹ ಇಲಾಖೆಯು ಅಂಬೇಡ್ಕರ್‌ ಜಯಂತಿ, ಬುದ್ಧ ಪೂರ್ಣಿಮೆ ದಿನ ಕೂಡ ಕೈದಿಗಳಿಗೆ ಸಿಹಿ ವಿತರಿಸುವಂತೆ ಆದೇಶಿಸಿದೆ.

Karnataka Govt To Distribute Sweets To Prisoners On Ambedkar Jayanti Buddha Purnima

ಸಂವಿಧಾನ ಇಲ್ಲದಿದ್ರೆ ನನ್ನೂರಿನಲ್ಲಿ ಕುರಿ-ದನ ಕಾಯುತ್ತಾ ಇರುತ್ತಿದ್ದೆ

ಸಿಎಂ ಸಿದ್ದರಾಮಯ್ಯ ಅವರು ಬಾಬಾ ಸಾಹೇಬ್‌ ಡಾ.ಬಿ.ಆರ್.ಅಂಬೇಡ್ಕರ್‌ ಜಯಂತಿಗೆ ಶುಭಕೋರಿದ್ದಾರೆ. ಇದೇ ವೇಳೆ ಅವರು ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನದ ಮಹತ್ವವನ್ನು ಸಾರಿದ್ದಾರೆ. ಬಾಬಾ ಸಾಹೇಬರು ರಚಿಸಿದ ಸಂವಿಧಾನ ಇಲ್ಲದಿದ್ದರೆ, ನಾನು ನನ್ನೂರಿನಲ್ಲಿ ಕುರಿಯನ್ನೋ, ದನವನ್ನೋ ಕಾಯುತ್ತಾ ಇರುತ್ತಿದ್ದೆ. ನಾನು ಎರಡೆರಡು ಬಾರಿ ಮುಖ್ಯಮಂತ್ರಿಯಾಗಿರುವುದು ಸಂವಿಧಾನದಿಂದ. ನನ್ನ ಬದುಕಿನ ಅನುಕ್ಷಣವೂ ಬಾಬಾ ಸಾಹೇಬರಿಗೆ ನಾನು ಋಣಿ. ನಮ್ಮ ಅಂಬೇಡ್ಕರ್ ನಮಗೆ ಆದರ್ಶ ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

Take a Poll

ಶತಮಾನಗಳಿಂದ ಅವಕಾಶ ವಂಚಿತ ಸಮುದಾಯಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನದ ಮೂಲಕ ಘನತೆಯಿಂದ ಬದುಕುವ ಹಕ್ಕನ್ನು ನೀಡಿದರು. ಅಂಬೇಡ್ಕರ‌್ ಅವರ ಹುಟ್ಟು ನಮ್ಮೆಲ್ಲರ ಹುಟ್ಟನ್ನು ಅರ್ಥಪೂರ್ಣವಾಗಿಸಿದೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೂಲಕ ಜಾತ್ಯಾತೀತ ಮತ್ತು ಸಮಾಜವಾದಿ ಪ್ರಜಾಪ್ರಭುತ್ವದ ದೇಶ ಕಟ್ಟಲು ಡಾ.ಬಿ.ಆರ್ ಅಂಬೇಡ್ಕರ್ ಎಳೆದು ತಂದು ನಿಲ್ಲಿಸಿದ ವಿಮೋಚನಾ ರಥವನ್ನು ಮುಂದಕ್ಕೆ ಒಯ್ಯಲು ನಾವೆಲ್ಲ ಕೈಜೋಡಿಸೋಣ ಎಂದು ಕರೆ ನೀಡಿದ್ದಾರೆ. ನಾಡಿನ ಜನತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯ ಶುಭಾಶಯಗಳು ಎಂದು ಕೋರಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ಅನುದಾನ ಮೀಸಲಿಡುವ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಬಾಬಾ ಸಾಹೇಬರ ಆಶಯಗಳು ನಮ್ಮ ಸರ್ಕಾರದ ಯೋಚನೆ ಮತ್ತು ಯೋಜನೆಗಳಿಗೆ ದಾರಿದೀಪ. ಅಂಬೇಡ್ಕರ್‌ ಅವರು ರಚಿಸಿದ ಭಾರತೀಯ ಸಂವಿಧಾನದ ಪ್ರತಿ ಅಕ್ಷರಕ್ಕೂ ನಾವು ಬದ್ಧರಾಗಿದ್ದು, ಅದನ್ನು ಅನುಷ್ಠಾನಗೊಳಿಸಲು ಅನುದಿನವೂ ಶ್ರಮಿಸುತ್ತಿದ್ದೇವೆ. ನಮ್ಮ‌ ಅಂಬೇಡ್ಕರ್ ನಮಗೆ ಮಾದರಿ ಎಂದು ನೆನೆದಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿದರು. ನಮ್ಮ ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತಹ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು. ನಮ್ಮ ಸರ್ಕಾರ ಅತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೆ, ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು ಎಂದು ನೆನೆದಿದ್ದಾರೆ.

ಮಹಾನ್ ಮೇಧಾವಿಯಾಗಿದ್ದ ಅಂಬೇಡ್ಕರ್ ಅವರು ತಮ್ಮ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ ಅವರು. ಎಲ್ಲರೂ ಮನುಷ್ಯರಾಗಿ ಬದುಕಬೇಕು, ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು, ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು, ಅದು ಆದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ.

ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಶುರು ಮಾಡಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ದಿ ಆರ್ಗನೈಜರ್ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರದಲ್ಲೂ ಬರೆದಿದ್ದರು ಎಂದಿದ್ದಾರೆ.

ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಅಂಬೇಡ್ಕರ್ ಅವರು "ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯಲಾರೆ" ಎಂದು ಹೇಳಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದು ಸಿಎಂ ಹೇಳಿದ್ದಾರೆ.

ಬಿಜೆಪಿಯವರು ಜವಾಹರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರಿಗೆ ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್‌ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+