ಬೊಮ್ಮಾಯಿ ನಾಯಕತ್ವದಲ್ಲಿ ರಾಜ್ಯ ಉತ್ತಮ ಸಾಧನೆ ತೋರಲಿದೆ; ಜೋಶಿ
ನವದೆಹಲಿ, ಜುಲೈ 28: ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
"ಬಸವರಾಜ ಬೊಮ್ಮಾಯಿ ವಿದ್ಯಾವಂತ ಹಾಗೂ ಅನುಭವಿ ನಾಯಕ. ಅವರ ನಾಯಕತ್ವದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತದೆ ಎನ್ನುವ ವಿಶ್ವಾಸ ನನಗಿದೆ. ಕರ್ನಾಟಕದಲ್ಲಿ ಉಪ ಮುಖ್ಯಮಂತ್ರಿಗಳ ನೇಮಕದ ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಈ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುತ್ತಾರೆ" ಎಂದು ತಿಳಿಸಿದರು.

ಇಂದು ಸಂಜೆಯೇ ಬೊಮ್ಮಾಯಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ. ಅಲ್ಲಿಯೇ ರಾಜ್ಯ ಸಚಿವ ಸಂಪುಟದ ಕುರಿತು ನಿರ್ಧಾರವಾಗುವ ನಿರೀಕ್ಷೆಯಿದೆ.
ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, "ನನ್ನ ಎದುರು ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಈಗ ಸಚಿವ ಸಂಪುಟ ಸಭೆ ಮಾಡುತ್ತೇನೆ. ಸಂಪುಟ ಸಭೆಯಲ್ಲಿ ರಾಜ್ಯದ ಸ್ಥಿತಿಗತಿ ಕುರಿತು ವಿವರಿಸುತ್ತೇನೆ. ಸದ್ಯದ ಹಣಕಾಸಿನ ಸ್ಥಿತಿ ನೋಡಿಕೊಂಡು ಹಲವು ನಿರ್ಧಾರಗಳನ್ನು ಮಾಡುತ್ತೇನೆ. ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸವಾಲು ಎದುರಿಸುತ್ತೇನೆ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
"ನಾನು ಮುಖ್ಯಮಂತ್ರಿ ಮಾತ್ರವಲ್ಲ ಎಲ್ಲರೊಳಗೊಬ್ಬ ಎಂಬಂತೆ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.












Click it and Unblock the Notifications