ಮೇಕೆದಾಟು ಪಾದಯಾತ್ರೆ ವೇಳೆ ದಾಖಲಾಗಿದ್ದ ಕೇಸ್ ಹಿಂಪಡೆದ ರಾಜ್ಯ ಸರ್ಕಾರ; ಇಲ್ಲಿವೆ ಸಂಪುಟ ಸಭೆಯ ಹೈಲೈಟ್ಸ್
ಬೆಂಗಳೂರು, ಆಗಸ್ಟ್ 10: ಮೇಕೆದಾಟು ಯೋಜನೆಯ ಪಾದಯಾತ್ರೆ ಸಮಯದಲ್ಲಿ ದಾಖಲಾಗಿದ್ದ ಪ್ರಕರಣಗಳ ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್ ಸೇರಿದಂತೆ ಕೈ ನಾಯಕರ ಮೇಲಿನ ಕೇಸ್ ಗಳನ್ನ ಸಚಿವ ಸಂಪುಟ ಸಭೆಯಲ್ಲಿ ಹಿಂಡೆಯಲಾಗಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆಯಾಗಿದೆ. ಮೇಕೆದಾಟು ಪಾದಯಾತ್ರೆ ಹಿನ್ನಲೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸಿದ್ದು, ಈ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪ ದಡಿ ಕೇಸ್ ದಾಖಲಾಗಿದ್ದು, ಇದೀಗ ಕೇಸ್ ಗಳನ್ನ ರಾಜ್ಯ ಸರ್ಕಾರ ಹಿಂಪಡೆದಿದೆ.

ಇನ್ನೂ ರಾಜ್ಯದ ಐದು ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್, 15 ಜಿಲ್ಲಾ ಆಸ್ಪತ್ರೆಗಳಲ್ಲಿ ಎಂಆರ್ಐ ಘಟಕ ಅಳವಡಿಕೆ ಮಾಡುವ ಪಿಪಿಪಿ ಮಾಡೆಲ್ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದಕ್ಕೆ 47 ಕೋಟಿ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಪೌಷ್ಟಿಕ ಆಹಾರ ತಯಾರಿಕೆಗೆ ಪಾಮ್ ಆಯಿಲ್ ಬದಲು ಸೂರ್ಯಕಾಂತಿ ಎಣ್ಣೆ ಬಳಕೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಪಾಮ್ ಆಯ್ಲ್ ವಿಶ್ವಾಸಾರ್ಹತೆಯ ಪ್ರಶ್ನೆ ಎದುರಾದ ಹಿನ್ನೆಲೆ ಈ ಬದಲಾವಣೆಗೆ ನಿರ್ಣಯ ಕೈಗೊಳ್ಳಲಾಗಿದೆ.
ಕರ್ನಾಟಕ ಸಹಕಾರಿ ಕೃಷಿ ಅಭಿವೃದ್ಧಿ ಗ್ರಾಮೀಣಾಭಿವೃದ್ದಿ ಬ್ಯಾಂಕ್ಗೆ ನಬಾರ್ಡ್ ಮೂಲಕ 1600 ಕೋಟಿ ಹಣ ಪಡೆಯಲು ಸರ್ಕಾರದ ಖಾತರಿ ವಿಸ್ತರಣೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಅಲ್ಲದೆ, ಈ ಬ್ಯಾಂಕ್ನ ಶೇ.1 ರಷ್ಟು ಗ್ಯಾರಂಟಿ ಶುಲ್ಕ ವಿಧಿಸುವುದನ್ನು ನಿರ್ಣಯಿಸಲು ಮುಖ್ಯಮಂತ್ರಿಗೆ ಅಧಿಕಾರ ನೀಡಿದ ಕ್ಯಾಬಿನೆಟ್ ಅಸ್ತು ಎಂದಿದೆ. ಕೆಎಸ್ಆರ್ಟಿಸಿ ವಾಹನಗಳಲ್ಲಿ ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆ ಅಳವಡಿಕೆಗೆ 30.74 ಕೋಟಿ ರೂ. ವೆಚ್ಚದ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ದೊರಕಿದೆ.
ಹಣಕಾಸು ದುರುಪಯೋಗ ಬೇಜವಾಬ್ದಾರಿ ಬಗ್ಗೆ ಕೋರ್ಟ್ನಿಂದ ಶಿಕ್ಷೆ ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ವಜಾ ಮಾಡಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೆಚ್ ಕೆ ಪಾಟೀಲ್ ಹೇಳಿದರು. ಇನ್ನೂ ಲೋಕಯುಕ್ತಾ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಲೋಕಾಯುಕ್ತ ಪ್ರಕರಣ ಸಂಬಂಧ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಡಾ.ಎಂ. ಎಚ್. ನಾಗೇಶ್ ಅವರಿಗೆ ಐದು ವರ್ಷಗಳ ಶಿಕ್ಷೆ ಆಗಿರುವ ಹಿನ್ನೆಲೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.
ಇನ್ನೂ ಲೋಕಾಯುಕ್ತ ಟ್ರ್ಯಾಪ್ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ.ಎಸ್.ಟಿ ನಾಗಮಣಿ ಅವರಿಗೆ ಕಡ್ಡಾಯ ನಿವೃತ್ತಿ ದಂಡನೆಗೆ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಸಚಿವರು ಹೇಳಿದರು. ಅಲ್ಲದೆ, ಪೋಕ್ಸೋ ಕೇಸಿನಲ್ಲಿ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಹೂವಿನಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯವನ್ನ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಮಾಡಲು ಸಚಿವ ಸಂಪುಟ ತಿರ್ಮಾನ ಕೈಗೊಂಡಿದ್ದು, ಸೈಬರ್ ಕ್ರೈಮ್ ತಡೆಯಲು ಅನುಕೂಲ ಆಗುವಂತೆ ನೀತಿಯಲ್ಲಿ ಹೊಸ ಕ್ರಮಕೈಗೊಳ್ಳಲಾಗಿದೆ. ಇನ್ನೂ ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಿಧಿಸಲು ಸಂಪುಟ ಸಭೆಯಲ್ಲಿ ಸಹಮತ ವ್ಯಕ್ತವಾಗಿದ್ದು, ಈ ಕುರಿತು ಸಾಧಕ ಭಾದಕ ತಿಳಿಯಲು ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ.












Click it and Unblock the Notifications