ಡಿಸಿಎಂ ಹುದ್ದೆ ಪ್ರಶ್ನಿಸಿದ್ದ ವ್ಯಕ್ತಿಗೆ 10 ಸಾವಿರ ದಂಡ ಹಾಕಿದ ಹೈಕೋರ್ಟ್!
ಬೆಂಗಳೂರು, ಜೂನ್ 29 : ಉಪ ಮುಖ್ಯಮಂತ್ರಿ ಹುದ್ದೆ ಅಸಾಂವಿಧಾನಿಕ ಎಂದು ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪಿಐಎಲ್ ಸಲ್ಲಿಸಿದ್ದ ವ್ಯಕ್ತಿಗೆ 10 ಸಾವಿರ ರೂ. ದಂಡವನ್ನು ವಿಧಿಸಿದೆ.
ಪುತ್ತೂರು ವಿವೇಕಾನಂದ ಕಾಲೇಜಿನ ಪ್ರೊ.ಶೇಖರ್ ಅಯ್ಯರ್ ಅವರು ಕರ್ನಾಟಕ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕರ್ನಾಟಕದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿರುವುದು ಕಾನೂನು ಬಾಹಿರ ಎಂದು ಹೇಳಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಅರ್ಜಿಯನ್ನು ವಜಾಗೊಳಿಸಿತು. ಅರ್ಜಿದಾರರಿಗೆ 10 ಸಾವಿರ ರೂ. ದಂಡ ವಿಧಿಸಿತು.

ಪಿಐಎಲ್ಗಳು ದುರುಪಯೋಗವಾಗುತ್ತಿವೆ. ನಿಜವಾದ ಕಾರಣಕ್ಕೂ ಪಿಐಎಲ್ ಸಲ್ಲಿಕೆಯಾಗುತ್ತಿಲ್ಲ ಎಂದು ನ್ಯಾಯಪೀಠ ಅರ್ಜಿಯ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. 30 ದಿನದಲ್ಲಿ ದಂಡಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಕಟ್ಟಬೇಕು ಎಂದು ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲಾಗಿತ್ತು. ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.












Click it and Unblock the Notifications