ವೈದ್ಯರ ಮುಷ್ಕರ: ರಜೆ ರದ್ದುಗೊಳಿಸಿದ ಆರೋಗ್ಯ ಇಲಾಖೆ
ಬೆಂಗಳೂರು, ಡಿಸೆಂಬರ್ 10: ಅಲೋಪತಿ ಮತ್ತು ಆಯುರ್ವೇದ ವೈದ್ಯ ಪದ್ಧತಿಗಳನ್ನು ವಿಲೀನಗೊಳಿಸಿ, ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಮಾಡಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳು ಹೊರರೋಗಿ ವಿಭಾಗವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ.
ಭಾರತೀಯ ವೈದ್ಯ ಸಂಘ ನೀಡಿರುವ ಮುಷ್ಕರದ ಕರೆಯ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲ ಖಾಸಗಿ ಆಸ್ಪತ್ರೆಗಳ ಒಪಿಡಿ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಆಗಲಿವೆ. ಆದರೆ ತುರ್ತು ಸೇವೆಗಳು ಹಾಗೂ ಕೋವಿಡ್-19 ಸೇವೆಗಳಿಗೆ ತೊಂದರೆಯಾಗುವುದಿಲ್ಲ.
ಕರ್ನಾಟಕ; ಡಿ. 11ರಂದು ಖಾಸಗಿ ಆಸ್ಪತ್ರೆ ಓಪಿಡಿ ಬಂದ್
ಖಾಸಗಿ ಆಸ್ಪತ್ರೆಗಳ ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ಮುಷ್ಕರದ ಅವಧಿಯಲ್ಲಿ ವೈದ್ಯರಿಗೆ ರಜೆಯನ್ನು ಮಂಜೂರು ಮಾಡದಂತೆ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಹೊರರೋಗಿ ವಿಭಾಗ ಸೇರಿದಂತೆ ಎಲ್ಲ ಆರೋಗ್ಯ ಸೇವೆಗಳು ಯಾವುದೇ ವ್ಯತ್ಯಯವಾಗದಂತೆ ಎಂದಿನಂತೆ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆಯು ಸುತ್ತೋಲೆಯಲ್ಲಿ ಸೂಚಿಸಿದೆ.
Recommended Video
ಇತ್ತೀಚಿನ ಗೆಜೆಟ್ ಅಧಿಸೂಚನೆಯಲ್ಲಿ ಕೇಂದ್ರ ಸರ್ಕಾರವು ಶಸ್ತ್ರ ಚಿಕಿತ್ಸೆ ಮಾಡಲು ಆಯುರ್ವೇದ ವೈದ್ಯರಿಗೆ ಅನುಮತಿ ನೀಡಿದೆ. ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅವಕಾಶ ನೀಡಿರುವುದರಿಂದ ಆಗುವ ಅನಾಹುತಗಳನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ನೀಡಿರುವ ಅನುಮತಿಯನ್ನು ತಕ್ಷಣ ಹಿಂಪಡೆಯಬೇಕು. ಸರ್ಕಾರ ಈ ನಿರ್ಧಾರದ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವೈದ್ಯರು ಆರೋಪಿಸಿದ್ದಾರೆ.