ಜೋಗ ಮೈದುಂಬಿದೆ, ಹೋಗೋಣ ಬರ್ತೀರಾ ಆಕಡೆಗೆ
ಬೆಂಗಳೂರು. ಜು. 20: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಆರ್ಭಟ ನಡೆಸುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಭಟ್ಕಳದಲ್ಲಿ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.(ಜೂನ್ ತಿಂಗಳ ಭಾರೀ ಮಳೆ ಚಿತ್ರಗಳು)
ಜುಲೈ 3ನೇ ವಾರದಿಂದ ಮುಂಗಾರು ಚೇತರಿಸಿಕೊಳ್ಳಲಿದೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 48 ಗಂಟೆ ಕಾಲ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾನುವಾರ ಇಡೀ ದಿನ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಅಂಗಡಿ, ಮನೆಗಳಿಗೂ ನೀರು ನುಗ್ಗಿದೆ. ಅಲ್ಲಲ್ಲಿ ಮರಗಳೂ ರಸ್ತೆಗೆ ಉರುಳಿ ಬಿದ್ದಿವೆ. ಬಂಟ್ವಾಳದ ಕಲ್ಲಡ್ಕದ ನರಹರಿ ಪರ್ವತದ ಬಳಿ ಮರ ರಸ್ತೆಗೆ ಉರುಳಿ ಬಿದ್ದು ಚಲಿಸುತ್ತಿದ್ದ ಎರಡು ವಾಹನಗಳು ಜಖಂಗೊಂಡಿವೆ.

ಮೈದುಂಬಿದ ಜೋಗ ಜಲಪಾತ
ಲಿಂಗನಮಕ್ಕಿ ಹಿನ್ನೀರು ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವುದರಿಂದ ಜೋಗ ಜಲಪಾತ ವೈಭವಕ್ಕೆ ಮರಳಿದೆ. ಪ್ರವಾಸಿಗರು ಭೇಟಿ ನೀಡುತ್ತಿದ್ದು ರಾಜ, ರಾಣಿ, ರಾಕೆಟ್ ಗಳು ಜಲವೈಭವನ್ನು ತೆರೆದಿಟ್ಟಿವೆ.

ತೀರ್ಥಹಳ್ಳಿಯಲ್ಲಿ ಮಳೆ ಆರ್ಭಟ
ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ತುಂಗಾ ನದಿ ತುಂಬಿ ಹರಿಯುತ್ತಿದೆ. ಮಂಡಗದ್ದೆ ಪಕ್ಷಿಧಾಮ ಸಹ ಜಲಾವೃತವಾಗಿದೆ.

ಶೃಂಗೇರಿ ಜಲಾವೃತ
ಶೃಂಗೇರಿ ತಾಲ್ಲೂಕಿನ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗುವ ಭೀತಿ ತಲೆದೋರಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಗಾಳಿಯೊಂದಿಗೆ ಭಾರಿ ಮಳೆ ಸುರಿದಿದೆ. ಚಿಕ್ಕಮಗಳೂರು ಜಿಲ್ಲೆಯ ನೆಮ್ಮಾರು ಬಳಿ ಸೇತುವೆ ನದಿಯಲ್ಲಿ ಮುಳುಗಿದೆ. ಶೃಂಗೇರಿ-ನೆಮ್ಮಾರು ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ.

ಕರವಾಳಿ ತೀರದಲ್ಲಿ ಭಾರೀ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿದೆ. ಕೆಲವು ಕಡೆಗಳಲ್ಲಿ ಗುಡ್ಡಗಳಿಂದ ಮಣ್ಣು ಕುಸಿದುಬಿದ್ದಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ. ಮೂಡುಬಿದಿರೆ, ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ಮತ್ತಿತರ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಮಂಗಳೂರು ನಗರದಲ್ಲೂ ಭಾನುವಾರ ಇಡೀ ದಿನ ಮಳೆ ಸುರಿದಿದೆ.

ಚಾರ್ಮಾಡಿ ಘಾಟ್ ಸಂಚಾರ ಬಂದ್
ಚಾರ್ಮಾಡಿ ಘಾಟಿಯಲ್ಲಿ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು ಸಂಚಾರ ಸ್ಥಗಿತ ಮಾಡಲಾಗಿದೆ. ಕಲ್ಲು ಬಂಡೆಗಳು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಎರಡೂ ಬದಿಯ ಸಂಚಾರ ಸ್ಥಗಿತಗೊಂಡಿದ್ದು ಪ್ರಯಾಣಿಕರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ತೆರವು ಕಾರ್ಯ ನಡೆಯುತ್ತಿದ್ದು ಸಂಜೆ ವೇಳೆಗೆ ಎಲ್ಲ ಸರಿ ಹೋಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕತ್ತಲಲ್ಲಿ ಮಲೆನಾಡು
ಮಲೆನಾಡು ಭಾಗದಲ್ಲಿ ಗಾಳಿ ಮಳೆ ಹೊಡೆತಕ್ಕೆ ಸಿಲುಕಿ ವಿದ್ಯುತ್ ಕಂಬಗಳು ಧರೆಗೆ ಉರುಳಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಜನ ಪರದಾಡುವಂತಾಗಿದೆ. ಕಳಸ, ಬಾಳೆಹೊನ್ನೂರು ಬಳಿ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಕೃಷಿ ಚಟುವಟಿಕೆಗೆ ವೇಗ
ಕುಂಠಿತವಾಗಿದ್ದ ಮುಂಗಾರು ಚುರುಕಾಗಿರುವುದು ಕೃಷಿ ಚಟುವಟಿಕೆಗಳಿಗೆ ವೇಗ ನೀಡಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ಮಳೆ ಸುರಿದರೆ ಮುಂಗಾರು ಫಸಲಿನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ.












Click it and Unblock the Notifications