ರಾಘವೇಶ್ವರ ಶ್ರೀಗಳ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಫೆ. 9 : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕರ್ನಾಟಕ ಹೈಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಸೋಮವಾರ ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಮತ್ತು ಎನ್. ಆನಂದ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಕುರಿತ ತೀರ್ಪನ್ನು ನೀಡಿದೆ. ತಾಂತ್ರಿಕ ಕಾರಗಳಿಂದಾಗಿ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಕೋರ್ಟ್ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ರಿಟ್ ಅಥವ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್ ಮೇಲೆ ಅತ್ಯಾಚಾರ ನಡೆಸಿದ ಆರೋಪವನ್ನು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಎದುರಿಸುತ್ತಿದ್ದಾರೆ. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಶ್ರೀಗಳು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರು ವಜಾಗೊಳಿಸಿದ್ದರು. [ರಾಘವೇಶ್ವರಶ್ರೀಗಳಿಗೆ ಮತ್ತೆ ಸಂಕಟ]
ಈ ಆದೇಶವನ್ನು ಪ್ರಶ್ನಿಸಿ ರಾಘವೇಶ್ವರ ಶ್ರೀಗಳು ಪುನಃ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯಿಂದ ಐವರು ನ್ಯಾಯಮೂರ್ತಿಗಳು ವಿವಿಧ ಕಾರಣಗಳಿಗಾಗಿ ಹಿಂದೆ ಸರಿದಿದ್ದರು. ಆದ್ದರಿಂದ ಕೋರ್ಟ್ ಹೊಸ ಪೀಠವನ್ನು ರಚಿಸಿ ವಿಚಾರಣೆಗೆ ಸೂಚನೆ ನೀಡಿತ್ತು. ವಿಚಾರಣೆ ಮುಗಿಸಿದ ನ್ಯಾಯಪೀಠ ಇಂದು ತೀರ್ಪನ್ನು ನೀಡಿದೆ. [ಶ್ರೀಗಳ ಪ್ರಕರಣದ ವಿಚಾರಣೆಗೆ ಹೊಸ ಪೀಠ ರಚನೆ]
ತೀರ್ಪಿನ ಸಾರಾಂಶ : ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಮತ್ತು ಎನ್. ಆನಂದ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಅರ್ಜಿಯನ್ನು ವಜಾಗೊಳಿಸಲಾಗುತ್ತಿದೆ. ಮೇಲ್ಮನವಿ ಸಲ್ಲಿಸಿರುವುದಕ್ಕಾಗಿ ದಂಡ ವಿಧಿಸಬಹುದು. ಆದರೆ, ಸ್ವಾಮೀಜಿಗಳ ಪ್ರಕರಣವಾದ್ದರಿಂದ ದಂಡ ವಿಧಿಸುತ್ತಿಲ್ಲ ಎಂದು ಕೋರ್ಟ್ ಹೇಳಿದೆ.
ಕ್ರಿಮಿನಲ್ ಪ್ರಕರಣದಲ್ಲಿ ರಿಟ್ ಅಥವ ಮೇಲನ್ಮವಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿ ಸಲ್ಲಿಸಿರುವುದಕ್ಕೆ ದಂಡ ವಿಧಿಸಬಹುದಾಗಿದೆ. ಸ್ವಾಮೀಜಿಗಳ ಬಳಿ ವೈಯಕ್ತಿಕವಾದ ಹಣವಿರುವುದಿಲ್ಲ. ಮಠದ ಆಸ್ತಿಯಿಂದ ದಂಡದ ಮೊತ್ತವನ್ನು ಪಾವತಿ ಮಾಡಬೇಕಾಗುತ್ತದೆ. ಆದ್ದರಿಂದ ಮೇಲ್ಮನವಿ ಸಲ್ಲಿಸಿರುವುದಕ್ಕೆ ದಂಡ ವಿಧಿಸುತ್ತಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.












Click it and Unblock the Notifications