ಪ್ರಶಾಂತ್ ಮಾಡಾಳ್ಗೆ ಜಾಮೀನು ನೀಡಿದ ಹೈ ಕೋರ್ಟ್ ಏಕಸದದ್ಯ ಪೀಠ
ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಹೈ ಕೋರ್ಟ್ ಏಕಸದಸ್ಯ ಪೀಠ ಪ್ರಶಾಂತ್ ಮಾಡಾಳ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ. ಬಿಡಬ್ಲುಎಸ್ಎಸ್ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಕುಮಾರ್ ಎಂವಿ ಅಲಿಯಾಸ್ ಪ್ರಶಾಂತ್ ಮಾಡಾಳ್ ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದರು.
ಮಾರ್ಚ್ 2ರಂದು ಕೆಎಸ್ಡಿಎಲ್ ಟೆಂಡರ್ಗಾಗಿ 40 ಲಕ್ಷ ಲಂಚ ಪಡೆಯುವ ವೇಳೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಿದ್ದರು. ಕೆಎಸ್ಡಿಎಲ್ ಅಧ್ಯಕ್ಷರೂ ಆಗಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. ಪುತ್ರನ ಬಂಧನವಾಗುತ್ತಿದ್ದಂತೆ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ದ ಕಚ್ಚಾವಸ್ತು ಖರೀದಿ ಟೆಂಡರ್ ಅಂತಿಮಗೊಳಿಸುವ ಸಂಬಂಧ 40 ಲಕ್ಷ ಲಂಚ ರುಪಾಯಿ ಪಡೆಯುತ್ತಿದ್ದಾಗ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು. ಕೆಎಸ್ಡಿಎಲ್ಗೆ ರಾಸಾಯನಿಕ ಪೂರೈಕೆ ಮಾಡುವ ಟೆಂಡರ್ ಮತ್ತು ವರ್ಕ್ ಆರ್ಡರ್ ನೀಡಲು ಪ್ರಶಾಂತ್ ಮಾಡಾಳ್ 80 ಲಕ್ಷ ರೂ. ಲಂಚ ಕೇಳಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಪ್ರಶಾಂತ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರುಪಾಯಿ ನಗದು ಪತ್ತೆಯಾಗಿತ್ತು.
ಇದರಲ್ಲಿ 90 ಲಕ್ಷ ರುಪಾಯಿಗಳನ್ನು ಕರ್ನಾಟಕ ಅರೋಮಾಸ್ ಕಂಪನಿಯ ನೌಕರರಾದ ಆಲ್ಬರ್ಟ್ ನಿಕೋಲಸ್ ಮತ್ತು ಗಂಗಾಧರ್ ತಂದಿದ್ದರು. 60 ಲಕ್ಷ ರುಪಾಯಿಗಳನ್ನು ಪ್ರಶಾಂತ್ ಅವರ ಸಂಬಂಧಿಯಾಗಿರುವ ಏಜೆಂಟ್ ಸಿದ್ಧೇಶ್ ತಂದಿದ್ದರು. 12 ಲಕ್ಷ ರುಪಾಯಿ ಕಚೇರಿಯ ಅಕೌಂಟೆಂಟ್ ಸುರೇಂದ್ರ ಬಳಿ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸಂಬಂಧಿ ಸಿದ್ದೇಶ್, ಅಕೌಟೆಂಟ್ ಸುರೇಂದ್ರ ಸಹ ಬಂಧಿಸಲಾಗಿದೆ.
ಟಿಕೆಟ್ ನಿರಾಕರಿಸಿದ ಬಿಜೆಪಿ: ಪಕ್ಷದಿಂದ ಉಚ್ಛಾಟನೆ
ಭ್ರಷ್ಟಾಚಾರದ ಆರೋಪದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪಗೆ ಟಿಕೆಟ್ ನೀಡುವುದಿಲ್ಲ ಎನ್ನುವುದು ಖಚಿತವಾಗಿತ್ತು. ಆದರೆ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಟಿಕೆಟ್ ಪಡೆಯಲು ಪ್ರಯತ್ನಿಸಿದ್ದರೂ, ಹೈ ಕಮಾಂಡ್ ಅದಕ್ಕೆ ಒಪ್ಪಿಗೆ ನೀಡಲಿಲ್ಲ.
ಇದರಿಂದ ಸಿಟ್ಟಿಗೆದ್ದ ಮಾಡಾಳ್ ಮಲ್ಲಿಕಾರ್ಜುನ ಅವರು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇದರಿಂದ ಕುಪಿತಗೊಂಡ ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಅಡಿಯಲ್ಲಿ ಅವರನ್ನು ಬಿಜೆಪಿಯಿಂದ 6 ವರ್ಷಗಳ ಉಚ್ಛಾಟನೆ ಮಾಡಿದೆ.












Click it and Unblock the Notifications