Breaking: ಹಿಜಾಬ್ ವಿವಾದ ಕುರಿತು ಮಧ್ಯಂತರ ಆದೇಶ ಪ್ರಕಟಿಸಿದ ಹೈಕೋರ್ಟ್
ಬೆಂಗಳೂರು, ಫೆಬ್ರವರಿ 11: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶವನ್ನು ಪ್ರಕಟಿಸಿದೆ. ಫೆಬ್ರವರಿ 10ರಂದು ಮೌಖಿಕವಾಗಿ ಆದೇಶ ನೀಡಿದ್ದ ಹೈಕೋರ್ಟ್ ಪೂರ್ಣಪೀಠವು ಶುಕ್ರವಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.
"ನಮ್ಮದು ನಾಗರಿಕ ಸಮಾಜವಾಗಿದ್ದು, ಧರ್ಮ, ಸಂಸ್ಕೃತಿ ಹೆಸರಿನಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿಗಳು ಇಂತಹ ಕೃತ್ಯಗಳನ್ನು ನಡೆಸಲು ಅವಕಾಶವಿರುವುದಿಲ್ಲ. ಪ್ರತಿಭಟನೆಗಳಿಂದ ಶಾಲಾ-ಕಾಲೇಜುಗಳನ್ನು ಬಂದ್ ಮಾಡಬಾರದು. ಶಿಕ್ಷಣ ಸಂಸ್ಥೆಯ ಅನಿರ್ಧಿಷ್ಟ ಬಂದ್ ಸಂತಸದ ಸಂಗತಿಯಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನೀಸಾ ಅವರಿದ್ದ ತ್ರಿಸದಸ್ಯ ಪೀಠವು ಗುರುವಾರ ಸುಮಾರು ಎರಡು ಗಂಟೆಗಳ ಕಾಲ ವಾದ-ಪ್ರತಿವಾದವನ್ನು ಆಲಿಸಿತು. ಹೈಕೋರ್ಟ್ನಲ್ಲಿ ವಿಚಾರಣೆ ಇತ್ಯರ್ಥವಾಗುವವರೆಗೂ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಗುರುವಾರವಷ್ಟೇ ಕೋರ್ಟ್ ಮೌಖಿಕ ಆದೇಶ ನೀಡಿತ್ತು.

ಶಾಂತಿ, ಸಾಮರಸ್ಯ ಕಾಪಾಡಿಕೊಳ್ಳಲು ಸೂಚನೆ:
ಕಾಲೇಜಿನ ತರಗತಿಯೊಳಗೆ ಧರ್ಮದನುಸಾರವಾಗಿ ಸ್ಕಾರ್ಫ್, ಹಿಜಾಬ್, ಶಾಲು ಸೇರಿದಂತೆ ಯಾವುದೇ ಬಾವುಟಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ನಾವು ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ತುರ್ತು ಅಗತ್ಯತೆ ಆಧಾರದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪ್ರವೇಶಕ್ಕೆ ಈಗಾಗಲೇ ಸಮಯ ನಿಗದಿಯಾಗಿದೆ. ಈ ಹಂತದಲ್ಲಿ ವಿಳಂಬಧೋರಣೆ ತೋರಿದರೆ ಶಿಕ್ಷಣಕ್ಕೆ ಧಕ್ಕೆ ಆಗಲಿದೆ. ಕರ್ನಾಟಕದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷ ಇನ್ನೇನೂ ಅಂತ್ಯವಾಗುತ್ತಿದೆ. ಈ ಸಂಬಂಧಪಟ್ಟವರು ಶಾಂತಿ ಮತ್ತು ಸಾಮರಸ್ಯ ಕಾಪಾಡಿಕೊಳ್ಳಬೇಕಿದೆ. ಆದ್ದರಿಂದ ಭವಿಷ್ಯದ ಶಿಕ್ಷಣಕ್ಕೆ ಧಕ್ಕೆ ಆಗದಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಆದಷ್ಟು ಬೇಗ ಕಾಲೇಜುಗಳನ್ನು ಆರಂಭಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ:
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ವಿಚಾರಣೆಯನ್ನು ಆರಂಭಿಸಿರುವ ವಿಸ್ತೃತ ನ್ಯಾಯಪೀಠ, ಹಿಜಾಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮವನ್ನು ಸೂಚಿಸುವ ವಸ್ತ್ರವನ್ನು ಧರಿಸಲು ಯಾವ ವಿದ್ಯಾರ್ಥಿ ಮೇಲೂ ಒತ್ತಡ ಹೇರಬಾರದು ಎಂದು ಮೌಖಿಕವಾಗಿ ಹೇಳಿತ್ತು. ಆ ಕುರಿತು ಆದೇಶ ನೀಡುವುದಾಗಿ ಹೇಳಿರುವ ನ್ಯಾಯಪೀಠ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತ್ತು.












Click it and Unblock the Notifications