ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಯಂತ್ ಪಟೇಲ್ ರಾಜೀನಾಮೆ ನೀಡಿದ್ದೇಕೆ?
Recommended Video
ಬೆಂಗಳೂರು, ಸೆಪ್ಟೆಂಬರ್ 26 : ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ನ್ಯಾಯಮೂರ್ತಿ ಜಯಂತ್ ಪಟೇಲ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸೋಮವಾರ (ಸೆಪ್ಟೆಂಬರ್ 25) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ರಾಷ್ಟ್ರಪತಿಯವರಿಗೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ ಹೈಕೋರ್ಟ್ ನಲ್ಲಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಯಂತ್ ಪಟೇಲ್ ಅವರನ್ನು 2016ರ ಫೆಬ್ರವರಿ 13 ರಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿತ್ತು.
ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿಯವರ ಬಳಿಕ ಎರಡನೇ ಸ್ಥಾನದಲ್ಲಿದ್ದ ಜಯಂತ್ ಪಟೇಲ್ ಅವರು 2018ರ ಆಗಸ್ಟ್ 3 ರಂದು ನಿವೃತ್ತಿಯಾಗಬೇಕಿತ್ತು. ಹಿರಿಯ ನ್ಯಾಯಮೂರ್ತಿಯಾಗಿದ್ದರೂ ತಮಗೆ ಉನ್ನತ ಸ್ಥಾನಕ್ಕೆ ಬಡ್ತಿ ನೀಡಿಲ್ಲವೆಂಬ ಕಾರಣಕ್ಕೆ ಅಸಮಧಾನಗೊಂಡು ಜಯಂತ್ ಪಟೇಲ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಗೂ ಇದೇ ಅಕ್ಟೋಬರ್ 9ರಂದು ನಿವೃತ್ತರಾಗಲಿರುವ ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯದೀಶ ಎಸ್.ಕೆ ಮುಖರ್ಜಿ ಅವರ ಸ್ಥಾನಕ್ಕೆ ತಮ್ಮನ್ನು ನೇಮಿಸದಿರುವುದಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ.
1979ರಲ್ಲಿ ಗುಜರಾತಿನ ರಾಜ್ ಕೋಟ್ ನ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ್ದ ಅವರು 2001ರ ಡಿಸೆಂಬರ್ 3ರಂದು ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಸಿಎಂ ಆಗಿದ್ದ ಕಾಲದಲ್ಲಿ ನಡೆದಿದ್ದ ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣವನ್ನು ಅಂದು ಗುಜರಾತ್ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಯಂತ್ ಪಟೇಲ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು.