ಹಿಜಾಬ್ ತೀರ್ಪು: ವಿಜಯೋತ್ಸವ, ಸಂಭ್ರಮಾಚರಣೆ ಮಾಡಬೇಡಿ; ಕಾರ್ಯಕರ್ತರಲ್ಲಿ ಬಿಜೆಪಿ ಮನವಿ
ಬೆಂಗಳೂರು, ಮಾರ್ಚ್ 15: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಪೀಠ, ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಮಹತ್ವದ ಆದೇಶ ನೀಡಿದೆ.
ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ ವಜಾಗೊಳಿಸಿದೆ.
ವಿಜಯೋತ್ಸವ, ಸಂಭ್ರಮಾಚರಣೆ ಮಾಡಬೇಡಿ; ಬಿಜೆಪಿ
ಇನ್ನು ಹಿಜಾಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ವಿಚಾರವಾಗಿ ರಾಜ್ಯದ ಜನತೆ ಹಾಗೂ ತನ್ನ ಕಾರ್ಯಕರ್ತರಲ್ಲಿ ಬಿಜೆಪಿ ಪಕ್ಷ ಕೆಲವು ಮನವಿಯನ್ನು ಮಾಡಿದೆ.

ಹಿಜಾಬ್ ತೀರ್ಪು ಕುರಿತು ಯಾವುದೇ ಪ್ರತಿಭಟನೆಯನ್ನು ಮಾಡಬಾರದು. ಜೊತೆಗೆ ಪ್ರತಿಕ್ರಿಯಾತ್ಮಕ ಪತ್ರಿಕೆ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದೆ.

ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದ ಹಿಜಾಬ್ ಕುರಿತು ಎಲ್ಲವನ್ನು ಕೂಲಂಕುಷವಾಗಿ ಗಮನಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು, ಎಲ್ಲರೂ ನ್ಯಾಯಾಲಯದ ಆದೇಶವನ್ನು ಶಾಂತವಾಗಿ ಸ್ವೀಕರಿಸಬೇಕು ಎಂದು ಬಿಜೆಪಿ ಮನವಿ ಮಾಡಿದೆ.
"ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲ ಕಾರ್ಯಕರ್ತರು ಅತ್ಯಂತ ಸಮಚಿತ್ತದಿಂದ ಸ್ವೀಕರಿಸಬೇಕು. ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ವಿಜಯೋತ್ಸವ, ಮೆರವಣಿಗೆ, ಮಾಡಬಾರದು,'' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.












Click it and Unblock the Notifications