ಕರ್ನಾಟಕ; ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ
ಬೆಂಗಳೂರು, ಸೆಪ್ಟೆಂಬರ್ 29: ಕರ್ನಾಟಕ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 1ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ಮಂಗಳವಾರ ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆಗೆ ದಿನಾಂಕಗಳನ್ನು ಘೋಷಣೆ ಮಾಡಿದೆ. ಅಕ್ಟೋಬರ್ 1ರಿಂದ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಜೂನ್ 30ರಂದು ನಾಲ್ವರು ಸದಸ್ಯರು ಅವಧಿ ಅಂತ್ಯಗೊಂಡಿತ್ತು.

ಚೌಡರೆಡ್ಡಿ ತೂಪಲ್ಲಿ, ಎಸ್. ವಿ. ಸಂಕನೂರ, ಶರಣಪ್ಪ ಮಟ್ಟೂರು ಮತ್ತು ಪುಟ್ಟಣ್ಣ ಅವರ ಅವಧಿ ಕೊನೆಗೊಂಡಿತ್ತು. ಈ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ಚುನಾವಣೆ ವೇಳಾಪಟ್ಟಿ : ವಿಧಾನ ಪರಿಷತ್ ಚುನಾವಣೆಗೆ ಅಕ್ಟೋಬರ್ 1ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಕ್ಟೋಬರ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನಾಮಪತ್ರಗಳನ್ನು ವಾಪಸ್ ಪಡೆಯಲು ಅಕ್ಟೋಬರ್ 12 ಕೊನೆಯ ದಿನವಾಗಿದೆ. ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.
ಬೆಂಬಲ ನೀಡುವಂತೆ ಮನವಿ : ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ರಮೇಶ್ ಬಾಬು ಅಭ್ಯರ್ಥಿಯಾಗಿದ್ದಾರೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಯ ಪದವೀಧರರು ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತಾರೆ. ಚುನಾವಣೆಯಲ್ಲಿ ಬೆಂಬಲ ನೀಡಬೇಕು ಎಂದು ರಮೇಶ್ ಬಾಬು ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ.












Click it and Unblock the Notifications