ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು, ಜೂ. 18: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಪ್ರಕಟ ಮಾಡಿದ್ದರಿಂದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತೀವ್ರ ಕುತೂಹಲ ಮೂಡಿಸಿತ್ತು. ನಿರೀಕ್ಷೆಯಂತೆ ಹೈಕಮಾಂಡ್ ಒಬ್ಬ ಅಚ್ಚರಿಯ ಅಭ್ಯರ್ಥಿಯನ್ನು ಸೇರಿಸಿ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.
ಮೊನ್ನೆ ನಡೆದಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿತ್ತು. ಇದೀಗ ಹೈಕಮಾಂಡ್ ಅಣತಿಯಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾಗಿದ್ದ ಮೂವರಿಗೆ ವಿಧಾನ ಪರಿಷತ್ ಪ್ರವೇಶಿಸಲು ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ.
ಪಟ್ಟಿ ಬದಲಿಸಿದ ಹೈಕಮಾಂಡ್: ಸಿಎಂ ಯಡಿಯೂರಪ್ಪಗೆ ಮತ್ತೆ ಹಿನ್ನಡೆ?
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್ ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ, ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಅವರುಗಳ ಹೆಸರುಗಳನ್ನು ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳೆಂದು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ ಮಾಜಿ ಶಾಸಕ ಸುನಿಲ್ ವಲ್ಯಾಪುರೆ ಅವರಿಗೆ ರಾಜ್ಯದಲ್ಲಿ ಸರ್ಕಾರ ರಚನೆಗೆ ಕಾರಣರಾಗಿದ್ದ ಕೋಟಾದಲ್ಲಿ ಹಾಗೂ ಪ್ರತಾಪ್ ಸಿಂಹ ನಾಯಕ್ ಅವರಿಗೆ ಪಕ್ಷದ ಕಾರ್ಯಕರ್ತ ಕೋಟಾದಡಿ ಟಿಕೆಟ್ ಕೊಡಲಾಗಿದೆ.
ಇನ್ನು ವಿಧಾನ ಪರಿಷತ್ ಆಯ್ಕೆ ಬಯಸಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಮತ್ತೆ ಅತಂತ್ರರಾಗಿದ್ದಾರೆ. ವಿಧಾನ ಪರಿಷತ್ ಟಿಕೆಟ್ಗೆ ತೀವ್ರ ಪ್ರಯತ್ನ ನಡೆಸಿದ್ದ ವಿಶ್ವನಾಥ್ ಅವರ ಹೆಸರನ್ನು ಹೈಕಮಾಂಡ್ ಪರಿಗಣಿಸಿಲ್ಲ. ಹೀಗಾಗಿ ಅದು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಮೇಲೆ ಪರಿಣಾಮ ಬೀರಿದರೂ ಅಚ್ಚರಿಯಿಲ್ಲ.