ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮುಂಬೈನಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ಪ್ರತಿಭಟನೆ
ಮುಂಬೈ, ಡಿ.07 : ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಎರಡು ರಾಜ್ಯಗಳಲ್ಲಿ ಪರ ವಿರೋಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇದರ ಮಧ್ಯೆ ಬುಧವಾರ ಮುಂಬೈನಲ್ಲಿ ಕರ್ನಾಟಕದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.
ಮಹಾರಾಷ್ಟ್ರ ರಾಜಧಾನಿ ಮುಂಬೈನ ಪೊವೈ ಪ್ರದೇಶದಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೈಯಲ್ಲಿ ಮಹಾರಾಷ್ಟರ ಪರವಾದ ಘೋಷಣೆಗಳಿರುವ ಫೋಸ್ಟರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
ನಡೆಯುತ್ತಿರುವ ಹಿಂಸಾಚಾರ ತಡೆಯಲು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ 24 ಗಂಟೆಗಳ 'ಸಮಯ ನೀಡಿದ್ದು, 48 ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸದಿದ್ದರೆ ಬೆಳಗಾವಿಗೆ ಹೋಗುವುದಾಗಿ ಹೇಳಿದ್ದಾರೆ.

ಮಂಗಳವಾರ ಬೆಳಗಾವಿ ಜಿಲ್ಲೆಯ ಬಳಿ ಕರ್ನಾಟಕ ಪ್ರವೇಶಿಸಿದ ಮಹಾರಾಷ್ಟ್ರದ ಆರು ಟ್ರಕ್ಗಳ ಮೇಲೆ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಮಹಾರಾಷ್ಟ್ರ ಆರೋಪಿಸಿದೆ. ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳ ನಡುವೆ ಅಂತರರಾಜ್ಯ ಗಡಿ ಘರ್ಷಣೆ ತೀವ್ರಗೊಂಡಿದೆ.
ಇತ್ತ, ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಮಹಾರಾಷ್ಟ್ರದ ರಾಜಕೀಯ ನಾಯಕರು ಕೇಂದ್ರದ ಮಧ್ಯಸ್ಥಿಕೆಯನ್ನು ಕೋರಲು ಪ್ರಾರಂಭಿಸಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, "ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದರೆ, ಕೇಂದ್ರ ಮಧ್ಯಪ್ರವೇಶಿಸಲೇಬೇಕು" ಎಂದು ಒತ್ತಾಯಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಪ್ರಾರಂಭವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಬಳಿಗೆ ನಿಯೋಗ ಕೊಂಡೊಯ್ಯಲು ಮಹಾರಾಷ್ಟ್ರದ ಸಂಸದರಿಗೆ ಮನವಿ ಮಾಡುವುದಾಗಿ ಶರದ್ ಪವಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಬೆಳಗಾವಿಗೆ ಮಹಾರಾಷ್ಟ್ರದ ಸಚಿವರ ಆಗಮನ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ನಡೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಪ್ರತಿಭಟನೆ ವೇಳೆ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಂಗಳವಾರ ಬಂಧಿಸಲಾಗಿತ್ತು.












Click it and Unblock the Notifications