ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಸಿಎಂ ಬೊಮ್ಮಾಯಿ ವಿರುದ್ಧ ಉದ್ಧವ್ ವಾಗ್ದಾಳಿ
ಮುಂಬೈ, ನ.25: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಉಭಯ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿಗಳು ಗಡಿ ಸಮಸ್ಯೆಗಳ ಬಗ್ಗೆ ತಮ್ಮ ಹೇಳಿಕೆಯನ್ನು ನೀಡುತ್ತಿದ್ದಾರೆ. ಮಹಾರಾಷ್ಟ್ರದ 40 ಹಳ್ಳಿಗಳ ಮೇಲೆ ಏಕಾಏಕಿ ಹಕ್ಕು ಚಲಾಯಿಸಿಸುತ್ತಿರುವ ಸಿಎಂ ಬೊಮ್ಮಾಯಿ ಅವರು ಯಾವುದೋ ಶಕ್ತಿಗೆ ವಶವಾದಂತಿದ್ದಾರೆ ಎಂದು ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರದ 40 ಹಳ್ಳಿಗಳು ಕರ್ನಾಟಕಕ್ಕೆ ಸೇರುತ್ತವೆ ಎಂದು ಹೇಳಿಕೆ ನೀಡಿದ ನಂತರ ದಶಕಗಳಷ್ಟು ಹಳೆಯ ಗಡಿ ವಿವಾದದ ಮತ್ತೆ ಚರ್ಚೆಗೆ ಬಂದಿದೆ. ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಡುವಿನ ಮಾತಿನ ಚಕಮಕಿಗಳ ಮಧ್ಯೆ ಉದ್ಧವ್ ಠಾಕ್ರೆಯಿಂದ ಪ್ರತಿಕ್ರಿಯೆ ಬಂದಿದೆ.

ನೀರಿನ ಸಮಸ್ಯೆ ಎದುರಿಸುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕೆಲವು ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳಿಸಲು ನಿರ್ಣಯವನ್ನು ಅಂಗೀಕರಿಸಿವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದಕ್ಕೆ ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಸೇರುವುವುದಿಲ್ಲ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
"ಮಹಾರಾಷ್ಟ್ರದ ಯಾವುದೇ ಗ್ರಾಮ ಕರ್ನಾಟಕಕ್ಕೆ ಸೇರುವುದಿಲ್ಲ! ಬೆಳಗಾವಿ, ಕಾರವಾರ, ನಿಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಬಲ ಹೋರಾಟ ನಡೆಸಲಿದೆ" ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಸಿಎಂ ಬೊಮ್ಮಾಯಿ ಅವರು ಫಡ್ನವೀಸ್ ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ಹೇಳಿ, ಇದು ಪ್ರಚೋದನಕಾರಿ ಹೇಳಿಕೆ ಎಂದು ಆರೋಪಿಸಿದ್ದರು.

"ಕರ್ನಾಟಕ ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ'' ಎಂದಿದ್ದರು.
ಇನ್ನು, ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಯನ್ನು ಖಂಡಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದಿದ್ದರು. ಜೊತೆಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.












Click it and Unblock the Notifications