ಪರಿಷತ್ ಚುನಾವಣೆ: ಕಾಂಗ್ರೆಸ್ನಲ್ಲಿ ಭಾರೀ ಪೈಪೋಟಿ! ಒಂದು ಸ್ಥಾನಕ್ಕೆ ಬೋಸರಾಜು ಫಿಕ್ಸ್! ಉಳಿದ ಸ್ಥಾನ ಯಾರಿಗೆ?
ಬೆಂಗಳೂರು, ಜೂನ್ 07: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿ ಸದಸ್ಯರ ರಾಜೀನಾಮೆಯಿಂದ ತೆರವಾದ ಮೂರು ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಲಿದೆ.
ಈಗಾಗಲೇ ಕಾಂಗ್ರೆಸ್ನಲ್ಲಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ಶುರುವಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಚುನಾವಣೆ ನಡೆಯಲಿದ್ದು, ಮೂರು ಸ್ಥಾನಗಳು ಆಡಳಿತ ಪಕ್ಷ ಕಾಂಗ್ರೆಸ್ ನ ಪಾಲಾಗಲಿವೆ.

ಇನ್ನೂ ಎಂಎಲ್ಸಿ ಟಿಕೆಟ್ ಗಿಟ್ಟಿಸಲು ವಿಧಾನಸಭೆ ಚುನಾವಣೆಯ ಟಿಕೆಟ್ ವಂಚಿತರು, ಹಿರಿಯ ನಾಯಕರು, ಮಹಿಳಾ ನಾಯಕರು ಭಾರೀ ಈ ಸ್ಥಾನಕ್ಕಾಗಿ ಲಾಬಿಯಲ್ಲಿ ತೊಡಗಿದ್ದಾರೆ. ಆದರೆ, ಈಗಾಗಲೇ ಒಂದು ಸ್ಥಾನ ಸಚಿವರಾದ ಎನ್ಎಸ್ ಬೋಸರಾಜು ಅವರಿಗೆ ಖಚಿತ ಆಗಿದ್ದು, ಉಳಿದ ಎರಡು ಸ್ಥಾನಗಳಿಗೆ ಹಲವರು ಲಾಬಿ ನಡೆಸುತ್ತಿದ್ದಾರೆ.
ಹೌದು, ವಿಧಾನ ಮಂಡಲದ ಯಾವುದೇ ಸದನದ ಸದಸ್ಯರಾಗದಿದ್ದರೂ ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಎನ್ಎಸ್ ಬೋಸರಾಜು ಅವರು 6 ತಿಂಗಳ ಒಳಗೆ ಪರಿಷತ್ ಪ್ರವೇಶಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಅವರು ವಿಧಾನ ಪರಿಷತ್ ಪ್ರವೇಶಿಸುವುದು ಖಚಿತವಾಗಿದೆ. ಲಕ್ಷ್ಮಣ್ ಸವದಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬೋಸರಾಜು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದೆ. ಲಕ್ಷ್ಮಣ್ ಸವದಿ ರಾಜೀನಾಮೆಯಿಂದ ತೆರವಾದ ಸ್ಥಾನದ ಅವಧಿ 2028ರ ಜೂನ್ 14ರವರೆಗೆ ಇದೆ. ಈ ಹಿನ್ನೆಲೆ ಬೋಸರಾಜು ಆಯ್ಕೆ ಖಚಿತ ಎನ್ನಲಾಗಿದೆ.
ಇನ್ನೂ ಈಗಾಗಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕಾಗಿ ಹೈಕಮಾಂಡ್ ಮೂಲಕವೂ ಲಾಬಿಯನ್ನ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದು ಕುತೂಹಲ ಮೂಡಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್ ಹಾಗೂ ಆರ್ ಶಂಕರ್ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಅದರ ಜೊತೆ ಬಿಜೆಪಿ ಪಕ್ಷಕ್ಕೂ ಕೂಡ ರಾಜೀನಾಮೆ ನೀಡಿದ್ದರು.

ಇದರಲ್ಲಿ ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮಣ್ ಸವದಿ, ಬಾಬುರಾವ್ ಚಿಂಚನಸೂರ್ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರೆ, ಆರ್ ಶಂಕರ್ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಚುನಾವಣೆಯಲ್ಲಿ ಲಕ್ಷ್ಮಣ್ ಸವದಿ ಮಾತ್ರ ಗೆಲುವು ಸಾಧಿಸಿದರು.
ಇನ್ನೂ ವಿಧಾನಸಭೆ ಚುನಾವಣೆಯಲ್ಲಿ ಗುರುಮಿಟಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿರುವ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ಖಾತರಿಯೆಂದು ಪಕ್ಷದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಕೂಡ ಆಗಿರುವುದರಿಂದ ಅವರ ಮರು ಆಯ್ಕೆ ಖಚಿತ ಎನ್ನಲಾಗಿದೆ. ಅಲ್ಲದೇ ಆರ್ ಶಂಕರ್ ರಾಜೀನಾಮೆಯಿಂದ ತೆರವಾದ ಸ್ಥಾನದ ಅವಧಿ 2026ರ ಜೂನ್ 30ರವರೆಗೆ ಇದೆ. ಈ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಇದೆ. ಹಲವರು ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಯಾರಿಗೆ ಟಿಕೆಟ್ ಸಿಗುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications