Karnataka monsoon: ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 27ರವರೆಗೂ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ಜುಲೈ, 23: ಈ ಮೊದಲು ಕರಾವಳಿ ಭಾಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಷ್ಟೇ ಮುಂಗಾರು ಚುರುಕು ಪಡೆದಿತ್ತು. ಆದರೆ ಇದೀಗ ಕಳೆದ ಒಂದು ವಾರದಿಂದಲೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಇಂದಿನಿಂದ ಜುಲೈ 27ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಇಂದಿನಿಂದ ಜುಲೈ 27ರವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಅಲ್ಲದೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ರಾಜ್ಯದಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿಲೋ ಮೀಟರ್ ಇರಲಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಗಂಟೆಗೆ 40-45 ರಿಂದ 55 ಕಿ.ಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.
ಹಾಗೆಯೇ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿನ ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಮುನ್ಸೂಚನೆ ಇದೆ.
ಮತ್ತೊಂದೆಡೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ನದಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಕೆಲವೆಡೆ ಸೇತುವೆಗಳು ಜಲಾವೃತವಾಗಿ ಸಂಪರ್ಕ ಸ್ಥಗಿತಗೊಂಡಿದೆ. ಇನ್ನು ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಇಲ್ಲಿನ ಹಲವು ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.
ಶನಿವಾರ (ಜುಲೈ 22) ಮಳೆರಾಯ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿದ್ದಾನೆ. ಬೃಹತ್ ಮರಗಳು ಧರೆಗುರುಳಿದರೆ, ಮತ್ತೊಂದೆಡೆ ಮನೆಗಳ ಮೇಲ್ಛಾವಣಿಗಳು ಕುಸಿದಿರುವ ಘಟನೆಗಳು ನಡೆದಿವೆ.
ಇನ್ನು ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ 28 ಸೆಂಟಿ ಮೀಟರ್, ಯಲ್ಲಾಪುರದಲ್ಲಿ 12 ಸೆಂ.ಮೀಟರ್ ಮಳೆ ಬಿದ್ದರೆ, ಇನ್ನು ಕಾರ್ಕಳ, ಸಿದ್ದಾಪುರ, ಕದ್ರಾ, ಮಂಚಿಕೆರೆ ತಲಾ 11 ಸೆಂ.ಮೀಟರ್ ಮಳೆಯಾಗಿದೆ. ಜೋಯಿಡಾ, ಬೆಳಗಾವಿ ಜಿಲ್ಲೆಯ ಲೋಂಡಾ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪದಲ್ಲಿ ತಲಾ 10 ಸೆಂ. ಮೀ. ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಲ್ಲೂರು, ಲಿಂಗನಮಕ್ಕಿಯಲ್ಲಿ ತಲಾ 9 ಸೆಂ.ಮೀಟರ್, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಸಿದ್ದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಶಿವಮೊಗ್ಗ ಜಿಲ್ಲೆಯ ತಾಳಗುಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಕೊಟ್ಟಿಗೆಹಾರ, ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಲಾ 8 ಸೆಂ. ಮೀಟರ್ ಮಳೆಯಾಗಿದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಪುತ್ತೂರಿನಲ್ಲಿ ತಲಾ 7 ಸೆಂ.ಮೀ. ಮಳೆ ಬಿದ್ದಿದೆ. ಬನವಾಸಿ, ಅಫಜಲಪುರ, ಹಾನಗಲ್, ಹಳಿಯಾಳ, ಶಿರಾಲಿ, ಕಾರವಾರ, ಅಂಕೋಲಾ, ಬೇಲಿಕೇರಿ, ಕಲಬುರಗಿ, ಗಲಘಟಗಿ, ಸಕಲೇಶಪುರ, ಹುಂಚದ ಕಟ್ಟೆ, ಭಾಗಮಂಗಲ, ಕಳಸದಲ್ಲಿ ತಲಾ 6 ಸೆಂ.ಮೀ. ಮಳೆ ಸುರಿದಿದೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ಒಂದು ವಾರದಿಂದ ಮಳೆ ಚುರುಕು ಪಡೆದ ಹಿನ್ನೆಲೆ ರಾಜ್ಯದ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ರೈತರ ಮುಖದಲ್ಲೂ ಮಂದಹಾಸ ಮೂಡಿದಂತಾಗಿದೆ.












Click it and Unblock the Notifications