Karnataka Rain: ಮೂರು ದಿನ ಮಳೆ ಕಡಿಮೆ: ನಂತರ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಕಳೆದ ಒಂದು ವಾರದಿಂದ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಮುಂದಿನ ಮೂರು ದಿನಗಳ ಕಾಲ ಕಡಿಮೆಯಾಗಲಿದೆ. ನಂತರ ಮತ್ತೆ ಮಳೆಯ ಅಬ್ಬರ ಶುರುವಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮುನ್ಸೂಚನೆ ನೀಡಿದೆ.
ಇಂದಿನಿಂದ ಇನ್ನೂ ಎರಡರಿಂದ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ಜುಲೈ 13ರಿಂದ ಜುಲೈ 16ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಹೆಚ್ಚಾಗಲಿದೆ ಎಂದು ಹೇಳಿದೆ.

ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಭಾನುವಾರ ಸಂಜೆಯಿಂದ ಕೊಂಚ ಬಿಡುವು ನೀಡಿದೆ. ಮಲೆನಾಡು, ಕರಾವಳಿಯ ಭಾಗದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು, ಮಳೆಯ ಅಬ್ಬರ ಕಡಿಮೆಯಾಗಿರುವುದು ಈ ಭಾಗದ ಜನರಿಗೆ ಸ್ವಲ್ಪ ನಿರಾಳ ತಂದಿದೆ. ಮಳೆಯ
ಹಲವು ಕಡೆಗಳಲ್ಲಿ ಭೂ ಕುಸಿತ, ನೆರೆ
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾದ ಕಾರಣ ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿತ್ತು. ಕೆಲವು ಕಡೆಗಳಲ್ಲಿ ಮನೆ, ರಸ್ತೆಗಳ ಮೇಲೆ ಭಾರಿ ಮರಗಳು ಉರುಳಿಬಿದ್ದಿವೆ. ಚಿಕ್ಕಮಗಳೂರಿನ ಕಳಸಾ ಸಮೀಪ ರಸ್ತೆಯಲ್ಲಿ ಬಿರುಕು ಮೂಡಿ ಆತಂಕ ಸೃಷ್ಟಿಸಿತ್ತು. ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಶಿವನಗರ ಗ್ರಾಮದ ಬಳಿ ರಾಜ್ಯ ಹೆದ್ದಾರಿ ಮೇಲೆ ಭಾರಿ ಮರ ಉರುಳಿಬಿದ್ದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಉಂಟಾಗಿತ್ತು.
ಭಾರಿ ಮಳೆಯಿಂದಾಗಿ ನೇತ್ರಾವತಿ, ವರಾಹಿ, ಅಘನಾಶಿನಿ, ಶಾಂಭವಿ ಸೇರಿದಂತೆ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗುತ್ತಿದೆ. ಪಶ್ಚಿಮ ಘಟ್ಟಗಳ ಪ್ರಮುಖ ಜಲಪಾತಗಳು ಮೈದುಂಬಿಕೊಂಡಿವೆ.
ಮುರು ದಿನಗಳ ಬಳಿಕ ಮತ್ತೆ ಮಳೆ
ಮೂರು ದಿನಗಳ ಬಳಿಕ ಮತ್ತೆ ಮಳೆ ಜೋರಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ ಜಿಲ್ಲೆಗಳ ಜೊತೆ ಉತ್ತರ ಒಳನಾಡಿನಲ್ಲಿ ಕೂಡ ಮಳೆ ಬಿರುಸು ಪಡೆದುಕೊಳ್ಳಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಕುದುರೆಮುಖ, ಸಾಗರ, ತೀರ್ಥಹಳ್ಳಿ, ಶಿವಮೊಗ್ಗ, ಶಿರಸಿ, ಸಿದ್ದಾಪುರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮೂರು ದಿನಗಳ ಬಳಿಕ ಮಳೆ ಮತ್ತಷ್ಟು ಬಿರುಸಾಗಲಿದೆ. ಸಾಗರ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಜೋಗ ಜಲಪಾತ ಮೈದುಂಬಿಕೊಳ್ಳುತ್ತಿದೆ.
ಉತ್ತರ ಒಳನಾಡಿನಲ್ಲೂ ಉತ್ತಮ ಮಳೆ
ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು ಜನ ಆತಂಕಗೊಂಡಿದ್ದರು, ಜುಲೈ 13ರ ನಂತರ ಉತ್ತರ ಒಳನಾಡಿ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಈ ಭಾಗದ ಜನರಿಗೆ ಕೊಂಚ ನೆಮ್ಮದಿ ತಂದಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಮುಂದಿನ ಮೂರು ದಿನ ಕೂಡ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಹಾಸನ, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.












Click it and Unblock the Notifications