ಕರ್ನಾಟಕದ ಮಂಗಳವಾರದ ತುಣುಕು ಸುದ್ದಿ
ಬೆಂಗಳೂರು, ನ. 11 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 3 ಗಂಟೆ : ರಜೆ ನೀಡಲು ಅಧಿಕಾರಿಗಳು ನಿರಾಕರಿಸಿದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ. ಚಾಲಕ ವಸಂತ್ ಕುಮಾರ್ ತುರುವೇಕೆರೆ ಡಿಪೋದಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.
ಸಮಯ 2 ಗಂಟೆ : 1988ರ ಕೆಪಿಎಸ್ಸಿ ನೇಮಕಾತಿಗೆ ಸಂಬಂಧಿಸಿದಂತೆ 94 ಅನರ್ಹ ಅಭ್ಯರ್ಥಿಗಳನ್ನು ಕೈ ಬಿಟ್ಟು ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿ ಎಂದು ಹೈಕೋರ್ಟ್ ಕೆಪಿಎಸ್ಸಿಗೆ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆಯನ್ನು ನ.19ಕ್ಕೆ ಮುಂದೂಡಿರುವ ಕೋರ್ಟ್, ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಪರಿಗಣಿಸುವಂತೆ ಆದೇಶ ನೀಡಿದೆ.
ಸಮಯ 1 ಗಂಟೆ : ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಕುಟುಂಬದ ತೇಜೋವಧೆ ಮಾಡಲು ಯತ್ನಿಸುತ್ತಿದ್ದು, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಪರಿಶೀಲಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಅಕ್ರಮ ಮರಳುದಂಧೆಯಲ್ಲಿ ತಮ್ಮ ಪುತ್ರ ಭಾಗಿಯಾಗಿದ್ದಾರೆ ಎಂದು ಈಶ್ವರಪ್ಪ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
ಸಮಯ 12 ಗಂಟೆ : ರಾಜರಾಜೇಶ್ವರಿ ನಗರದ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ಆಡಳಿತ ಸುಧಾರಣಾ ಸಮಿತಿ ದಾಳಿ ನಡೆಸಿದೆ. ಕಚೇರಿಗೆ ಸಂಬಂಧವಿಲ್ಲದ ಕಡತಗಳು ಪತ್ತೆ ಈ ವೇಳೆ ಪತ್ತೆಯಾಗಿವೆ. ದಾಳಿಯ ವೇಳೆ ಯಾವುದೇ ಅಧಿಕಾರಿಗಳು ಕಚೇರಿಯಲ್ಲಿರಲಿಲ್ಲ. ಗೈರಾಗಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಸಮಯ 11 ಗಂಟೆ : ಬೆಂಗಳೂರಿನ ನವರತ್ನ ಅಗ್ರಹಾರದ ಬಳಿ ಸಚಿವ ದಿನೇಶ್ ಗುಂಡೂರಾವ್ ಕುಟುಂಬದವರು 11 ಎಕರೆ ಭೂ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿದಂತೆ ತಹಶೀಲ್ದಾರ್ ಬಾಳಪ್ಪ ಅವರು ಇಂದು ಲೋಕಾಯುಕ್ತಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಮಯ 10 ಗಂಟೆ : ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯಲಿರುವ ಸಂತ ಸಮ್ಮೇಳನದಲ್ಲಿ ಪೇಜಾವರ ಶ್ರೀಗಳು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮುಂತಾದವರು ಪಾಲ್ಗೊಳ್ಳಿದ್ದಾರೆ. ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.
ಸಮಯ 9 ಗಂಟೆ : ವಿಶ್ವಹಿಂದೂ ಪರಿಷತ್ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಆಚರಿಸಲಾಗುತ್ತಿರುವ ಸ್ವರ್ಣಜಯಂತಿ ಉತ್ಸವ ಮತ್ತು ಸಂತ ಸಮ್ಮೇಳನಕ್ಕೆ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಚಾಲನೆ ನೀಡಲಿದ್ದಾರೆ.
ಸಮಯ 8 ಗಂಟೆ : ಜೆಡಿಎಸ್ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.
ಸಮಯ 7.30 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಚಾಲಯ ಮೋಹನ್ ಭಾಗವತ್ ಇಂದು ತುಮಕೂರಿಗೆ ಆಗಮಿಸಲಿದ್ದಾರೆ. ವಿಶ್ವಹಿಂದೂ ಪರಿಷತ್ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸಲಾಗುತ್ತಿರುವ ಸ್ವರ್ಣಜಯಂತಿ ಉತ್ಸವ ಮತ್ತು ಸಂತ ಸಮ್ಮೇಳನ ಇಂದು ಮತ್ತು ಬುಧವಾರ ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.












Click it and Unblock the Notifications