ಕರ್ನಾಟಕದ ಶುಕ್ರವಾರದ ತುಣುಕು ಸುದ್ದಿ
ಬೆಂಗಳೂರು, ನ. 14 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 3 ಗಂಟೆ : ಬೆಂಗಳೂರು ಸರಣಿ ಸ್ಫೋಟದ ಪ್ರಮುಖ ಆರೋಪಿ ಅಬ್ದುಲ್ ನಾಸರ್ ಮದನಿ ವಿಚಾರಣೆಯನ್ನು ನಾಲ್ಕು ತಿಂಗಳಲ್ಲಿ ಮುಕ್ತಾಯಗೊಳಿಸಲು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಇಂದು ಮದನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಾಲ್ಕು ತಿಂಗಳಿನಲ್ಲಿ ವಿಚಾರಣೆ ಮುಗಿಯಬೇಕು. ಈ ಅವಧಿಯಲ್ಲಿ ಮದನಿ ಜಾಮೀನು ನೀಡುವಾಗ ವಿಧಿಸಿರುವ ಷರತ್ತುಗಳನ್ನು ಮುರಿಬಾರದು ಎಂದು ಸೂಚನೆ ನೀಡಿದೆ.
ಸಮಯ 2 ಗಂಟೆ : ಅಕ್ಕ-ತಂಗಿ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಅಕ್ಕನೊಂದಿಗೆ ಜಗಳವಾಡಬೇಡ ಎಂದು ಪೊಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಪಟ್ಟ ಬಾಲಕಿಯನ್ನು 10ನೇ ತರಗತಿ ವಿದ್ಯಾರ್ಥಿನಿ ಜಯಶ್ರೀ ಎಂದು ಗುರುತಿಸಲಾಗಿದೆ.

ಸಮಯ 1 ಗಂಟೆ : ಮೈಸೂರಿನಲ್ಲಿ ಭೂ ಹಗರಣವೊಂದು ಬೆಳಕಿಗೆ ಬಂದಿದ್ದು ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ 1238 ಎಕರೆ ಡಿನೋಟಿಫಿಕೇಷನ್ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ಲಕ್ಷ್ಮಣ್ ದಾಖಲೆ ಬಿಡುಗಡೆ ಮಾಡಿದ್ದಾರೆ. ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ಅವರ ಒತ್ತಾಯಿಂದ ಈ ಡಿನೋಟಿಕೇಷನ್ ನಡೆದಿದೆ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ.
ಸಮಯ 12 ಗಂಟೆ : ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಬೇಕು ಮತ್ತು 11 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಮಠದ ಸ್ವಾಮೀಜಿಗಳು ಮೂರುದಿನಗಳ ನಿರಶನವನ್ನು ಬೆಂಗಳೂರಿನಲ್ಲಿ ನಡೆಸಲಿದ್ದಾರೆ. ನ.17ರಿಂದ ಮೂರು ದಿನಗಳ ಕಾಲ ಫ್ರೀಡಂ ಪಾರ್ಕ್ನಲ್ಲಿ ನಿರಶನ ನಡೆಯಲಿದ್ದು, 208 ಸ್ವಾಮೀಜಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಯ 11 ಗಂಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ನಾಲ್ವರು ಸಚಿವರ ವಿರುದ್ಧ ಬಿಜೆಪಿ ಇಂದು ರಾಜ್ಯಪಾಲರಿಗೆ ದೂರು ನೀಡಲಿದೆ. ಮಧ್ಯಾಹ್ನ 1 ಗಂಟೆಗೆ ಬಿಜೆಪಿ ನಾಯಕರು ರಾಜಭವನಕ್ಕೆ ತೆರಳಲಿದ್ದಾರೆ.
ಸಮಯ 10 ಗಂಟೆ : ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಮೃತಪಟ್ಟ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುನಿರಾಜ (43)ಮೃತಪಟ್ಟ ಲೈನ್ಮ್ಯಾನ್ ಆಗಿದ್ದು, ಗ್ರಾಫೈಟ್ ಫ್ಯಾಕ್ಟರಿ ಬಳಿ ಈ ದುರ್ಘಟನೆ ನಡೆದಿದೆ.
ಸಮಯ 9 ಗಂಟೆ : ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕ ದೇವರಾಜ್ (57) ಎಂಬಾತನನ್ನು ಡಿ.ಜೆ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಸಮಯ 8 ಗಂಟೆ : ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಇಂದು ಕೋರ್ ಕಮಿಟಿ ಸಭೆ ಕರೆದಿದ್ದಾರೆ.
ಸಮಯ 7.30 : ನ.14 ರಿಂದ 16ರವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 'ಅಳ್ವಾಸ್ ನುಡಿ ಸಿರಿ - 2014 ನಡೆಯಲಿದೆ. ಸಮ್ಮೇಳನದ ಅಧ್ಯಕ್ಷತೆಯನ್ನು ಕವಿ ನಾಡೋಜ ಡಾ. ಸಿದ್ದಲಿಂಗಯ್ಯ ವಹಿಸಿಕೊಳ್ಳಲಿದ್ದು, ಇಂದು ಡಾ. ನಾ. ಡಿಸೋಜ ಸಮ್ಮೇಳನ ಉದ್ಘಾಟಿಸಲಿದ್ದಾರೆ.












Click it and Unblock the Notifications