ಕರ್ನಾಟಕದ ಶುಕ್ರವಾರದ ತುಣುಕು ಸುದ್ದಿಗಳು
ಬೆಂಗಳೂರು, ನ. 7: ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 3 ಗಂಟೆ : 'ನಿನ್ನ ಮಗಳ ಮೇಲೆ ಅತ್ಯಾಚಾರ ನಡೆದಿದ್ದರೆ ಸುಮ್ಮನಿರುತ್ತಿದ್ದೆಯಾ ಜಾರ್ಜ್' ಎಂದು ಹೇಳಿದ್ದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಗುಂಡಪ್ಪ ಶೆಡ್ನಲ್ಲಿರುವ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ. [ಈಶ್ವರಪ್ಪ ಅವರು ಹೇಳಿದ್ದೇನು?]
ಸಮಯ 2 ಗಂಟೆ : ಮಾಂಸದಂಧೆಯಲ್ಲಿ ತೊಡಗಿದ್ದ ಕರ್ನಾಟಕ ಮತ್ತು ಆಂಧ್ರಪ್ರದೇಶ ಮೂಲದ ಆರು ಯುವತಿಯರನ್ನು ಚೆನ್ನೈ ಪೊಲೀಸರು ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅತ್ತಿಪಟ್ಟು, ವಡಪಲನಿ, ಚುಲೈಮೇಡು ನಿವಾಸದ ಮೇಲೆ ದಾಳಿ ನಡೆಸಿ ಮೂವರು ಯುವಕರನ್ನು ಬಂಧಿಸಿದ್ದಾರೆ.
ಸಮಯ 1 ಗಂಟೆ : ಮಾಧ್ಯಮಗಳು ಟಿಆರ್ಪಿಗಾಗಿ ಸುದ್ದಿ ವೈಭವೀಕರಣ ಮಾಡುತ್ತಿವೆ ಎಂಬ ಗೃಹ ಸಚಿವ ಕೆ.ಜೆ.ಜಾರ್ಜ್ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರ ಹೇಳಿಕೆ ಮೂರ್ಖತನದ ಪರಮಾವಧಿ. ಈ ವಿಚಾರದಲ್ಲಿ ಪ್ರಚಾರದ ಉದ್ದೇಶ ಯಾರಿಗೂ ಇರುವುದಿಲ್ಲ. ಕೆ.ಜೆ. ಜಾರ್ಜ್ ಮಾಧ್ಯಮಗಳ ಕ್ಷಮೆ ಕೇಳಬೇಕು ಎಂದು ಯಡಿಯೂರಪ್ಪ ಒತ್ತಾಯಿಸಿದರು.
ಸಮಯ 12 ಗಂಟೆ : 'ನಿನ್ನ ಮಗಳ ಮೇಲೆ ಅತ್ಯಾಚಾರ ಆಗಿದ್ದರೆ ಸುಮ್ಮನಿರುತ್ತಿದ್ದೆಯಾ ಜಾರ್ಜ್' ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.
ಸಮಯ 11 ಗಂಟೆ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ. ಬಿಜೆಪಿ ಸಿದ್ಧಪಡಿಸಿರುವ ವರದಿ ಸತ್ಯಕ್ಕೆ ದೂರವಾದದ್ದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಯಲ್ಲಿ ಹೇಳಿದ್ದಾರೆ.

ಸಮಯ 10 ಗಂಟೆ : ಸುಪ್ರೀಂಕೋರ್ಟ್ ಆದೇಶದಂತೆ ಖಾಸಗಿ ಅನುದಾನಿತ ಶಾಲಾ, ಕಾಲೇಜುಗಳ ಬೋಧಕ, ಬೋಧಕೇತರ ಸಿಬ್ಬಂದಿಗೆ ವೇತನ ನೀಡುವಂತೆ ಆಗ್ರಹಿಸಿ ನ.8ರಂದು ಶಾಲಾ ಕಾಲೇಜು ಬಂದ್ ಮಾಡಿ, ಮುಖ್ಯಮಂತ್ರಿಗಳ ನಿವಾಸದ ಮುಂದೆ ಧರಣಿ ನಡೆಸಲು ರಾಜ್ಯ ಅನುದಾನಿತ ಶಾಲಾ- ಕಾಲೇಜುಗಳ ಬೋಧಕ, ಬೋಧಕೇತರ ಒಕ್ಕೂಟದ ತೀರ್ಮಾನಿಸಿದೆ.
ಸಮಯ 9 ಗಂಟೆ : ತೀರ್ಥಹಳ್ಳಿಯ ನಂದಿತಾ ಸಾವಿನ ಬಗ್ಗೆ ಸಿಐಡಿ ವಿಚಾರಣೆ ತೀವ್ರಗೊಂಡಿದ್ದು ಸಿಐಡಿ ಐಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ನಾಲ್ಕು ತಂಡಗಳು ತನಿಖೆ ನಡೆಸುತ್ತಿವೆ. ನಂದಿತಾ ಮನೆ, ಆಕೆಯ ಶಾಲೆ, ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವು ಸ್ಥಳಗಳಲ್ಲಿ ವಿಚಾರಣೆ ಮುಂದುವರೆದಿದೆ. ನ.10ರವರೆಗೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ಸಮಯ 8 ಗಂಟೆ : ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದು, ನಿಗಮ ಮಂಡಳಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ರಾಹುಲ್ ಗಾಂಧಿ ಅವರ ಜೊತೆ ಉಭಯ ನಾಯಕರು ಸಭೆ ನಡೆಸಲಿದ್ದಾರೆ.
ಸಮಯ 7.30 : ಬೆಂಗಳೂರಿನಲ್ಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಶುಕ್ರವಾರ ಮುಂಜಾನೆ ಬಂಧಿಸಿದ್ದಾರೆ. ಬಂಧಿತರಿಂದ 940 ಗ್ರಾಂ ಬೌನ್ ಶುಗರ್ ವಶಪಡಿಸಿಕೊಳ್ಳಲಾಗಿದ್ದು, ವಿಚಾರಣೆ ಮುಂದುವರೆದಿದೆ.












Click it and Unblock the Notifications