ಕರ್ನಾಟಕದ ಮಂಗಳವಾರದ ತುಣುಕು ಸುದ್ದಿಗಳು
ಬೆಂಗಳೂರು, ಅ. 10 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.
ಸಮಯ 6 ಗಂಟೆ : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿಚಾರಣೆಯನ್ನು ಸಿಐಡಿ ಮುಕ್ತಾಯಗೊಳಿಸಿದೆ. ಇಂದು ಮಧ್ಯಾಹ್ನ 2 ಗಂಟೆಯಿಂದ ಸಿಐಡಿ ಅಧಿಕಾರಿಗಳು ಶ್ರೀಗಳ ವಿಚಾರಣೆ ನಡೆಸಿದರು. ಸಿಐಡಿ ಎಸ್ಪಿ ಸಿರಿಗೌರಿ ನೇತೃತ್ವದಲ್ಲಿ ಸಿಐಡಿ ಕಚೇರಿಯ ಕಾನ್ಫರೆನ್ಸ್ ಹಾಲ್ನಲ್ಲಿ ವಿಚಾರಣೆ ನಡೆಸಲಾಗಿದೆ.
ಸಮಯ 3 ಗಂಟೆ : ರಾಘವೇಶ್ವರ ಶ್ರೀಗಳಿಗೆ ಜಾಮೀನು ನೀಡಿದ ಬೆಂಗಳೂರು ಸೆಷೆನ್ಸ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಐಡಿ ಪೊಲೀಸರು ಹೈಕೋರ್ಟ್ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಸಮಯ 2 ಗಂಟೆ : ರಾಘವೇಶ್ವರ ಶ್ರೀಗಳ ಮಧ್ಯಂತರ ಜಾಮೀನು ಅರ್ಜಿಯನ್ನು ರದ್ದುಗೊಳಿಸುವಂತೆ ಕೋರಿ ಸಿಐಡಿ ಪೊಲೀಸರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದೇ ಅರ್ಜಿಯ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ ಸೆಷೆನ್ಸ್ ನ್ಯಾಯಾಲಯ ಗುರುವಾರ ಶ್ರೀಗಳಿಗೆ ಮಧ್ಯಂತರ ಜಾಮೀನು ನೀಡಿತ್ತು.
ಸಮಯ 1 ಗಂಟೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳು ಬೆಂಗಳೂರಿನ ಸಿಐಡಿ ಕಚೇರಿಗೆ ಆಗಮಿಸಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ವಿಚಾರಣೆಗೆ ಆಗಮಿಸುವಂತೆ ಸಿಐಡಿ ಶ್ರೀಗಳಿಗೆ ಭಾನುವಾರ ನೋಟಿಸ್ ಜಾರಿಗೊಳಿಸಿತ್ತು.
ಸಮಯ 12 ಗಂಟೆ : ಮಾಜಿ ಸಚಿವ ಎಸ್.ಎ.ರಾಮ್ದಾಸ್ ಹಾಗೂ ಪ್ರೇವಕುಮಾರಿ ನಡುವಿನ ದೂರವಾಣಿ ಸಂಭಾಷಣೆಯ ಪರೀಕ್ಷೆ ನಡೆಸಿದ ವಿಧಿ ವಿಜ್ಞಾನ ಪ್ರಯೋಗಾಲಯ ತನ್ನ ವರದಿಯನ್ನು ಸಿಐಡಿಗೆ ಸಲ್ಲಿಕೆ ಮಾಡಿದೆ. ಸಂಭಾಷಣೆಯಲ್ಲಿ ಇರುವ ಧ್ವನಿ ರಾಮ್ದಾಸ್ ಅವರದ್ದು ಎಂಬದು ಪರೀಕ್ಷೆಯಲ್ಲಿ ಸಾಬೀತಾಗಿದೆ ಎಂದು ತಿಳಿದುಬಂದಿದ್ದು, ರಾಮ್ದಾಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. [ರಾಮದಾಸ್ ಪ್ರಕರಣದ ವಿವರ ಇಲ್ಲಿದೆ]

ಸಮಯ 11 ಗಂಟೆ : ಬೆಂಗಳೂರಿನಲ್ಲಿ ಚಲಾವಣೆಯಲ್ಲಿಲ್ಲದ ಬ್ರೆಜಿಲ್ ಕರೆನ್ಸಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸಮಯ 10 ಗಂಟೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳು ಸೋಮವಾರ ವಿಚಾರಣೆಗೆ ಹಾಜರಾಗಿಲ್ಲ. ಮಂಗಳವಾರ ಅವರು ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗುವ ಸಾಧ್ಯತೆ ಇದೆ. ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಈಗಾಗಲೇ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಸಮಯ 9 ಗಂಟೆ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಾರಟಗಿಯಲ್ಲಿ ಏಷ್ಯಾದ ಮೊದಲ ರೈಸ್ ಟೆಕ್ನಾಲಜಿ ಪಾರ್ಕ್ ಸ್ಥಾಪನೆಯಾಗುತ್ತಿದೆ. ತುಂಗಭದ್ರ ಅಚ್ಚುಕಟ್ಟು ಪ್ರದೇಶದ ಭತ್ತ ಬೆಳೆಗಾರರ ಆಶಾಕಿರಣವಾದ ಈ ಪಾರ್ಕ್ಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಸಮಯ 8 ಗಂಟೆ : ಇಂದು ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕನಕಗಿರಿಯಲ್ಲಿ ಸಕಲ ಸಿದ್ಧತೆಗಳನ್ನು ಜಿಲ್ಲಾ ಆಡಳಿತ ಕೈಗೊಂಡಿದೆ.
ಸಮಯ 7.30 : ಬೆಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿವೇಕ್ ಹೆಬ್ಬಾರ್ ಅವರಿಗೆ ಸೋಮವಾರ ಸಿಬಿಐ ವಿಶೇಷ ನ್ಯಾಯಲಯ ಜಾಮೀನು ಮಂಜೂರು ಮಾಡಿದೆ. ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ಉದ್ಯಮಿ ವಿವೇಕ್ ಹೆಬ್ಬಾರ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು ಇಂದು ಬಿಡುಗಡೆಯಾಗಲಿದ್ದಾರೆ.












Click it and Unblock the Notifications