ಅಗ್ನಿಪಥ್ ಹೋರಾಟಗಾರರಿಗೆ ಮಾಜಿ ಸಿಎಂ ಬೆಂಬಲ
ಬೆಂಗಳೂರು, ಜೂ.20: ಅಗ್ನಿ ಪಥ್ ಯೋಜನೆ ದೇಶದ ಯುವಕರನ್ನು ನಿಗಿ ನಿಗಿ ಕೆಂಡವಾಗುವಂತೆ ಮಾಡಿದೆ. ಅಗ್ನಿಪಥ್ ಯೋಜನೆಯ ವಿರುದ್ದ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ರಾಜ್ಯದಲ್ಲೂ ಅಗ್ನಿಪಥ್ ವಿರುದ್ದದ ದನಿ ಏರುತ್ತಿದೆ. ಇದೇ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೋರಾಟಗಾರಿಗೆ ಬೆಂಬಲ ಘೋಷಿಸಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಅಗ್ನಿಪಥ್ ಯೋಜನೆಯಡಿ ಯುವಕರನ್ನು ಕೇವಲ 4 ವರ್ಷಕ್ಕೆ ಸೈನ್ಯಕ್ಕೆ ನೇಮಕ ಮಾಡಿಕೊಳ್ತೀವಿ ಎಂದು ಸರ್ಕಾರ ಹೇಳುತ್ತಿದೆ. 4 ವರ್ಷ ಕೆಲಸ ಮಾಡಿದ ಮೇಲೆ ಅವರಿಗೆ ಪಿಂಚಣಿ ಸಿಗಲ್ಲ, ಆಮೇಲೆ ನಮ್ಮ ಭವಿಷ್ಯವೇನು ಎಂದು ಯುವಕರು ಪ್ರಶ್ನೆ ಮಾಡುತ್ತಿದ್ದಾರೆ. ಸೈನ್ಯ ಸೇರಲು ಯುವಕರು 10ನೇ ತರಗತಿ ಪಾಸ್ ಆಗಿರಬೇಕು ಎಂದು ಇದೆ, ಸೈನ್ಯದಲ್ಲಿ 4 ವರ್ಷ ಕೆಲಸ ಮಾಡಬಹುದು, ಅದು ಮುಗಿದ ಮೇಲೆ ಅವರನ್ನು ಕೆಲಸದಿಂದ ತೆಗೆಯಲಾಗುತ್ತೆ ಎಂದು ಅಗ್ನಿಪಥ್ ಯೋಜನೆ ಬಗ್ಗೆ ಸಿದ್ದು ತಿಳಿಸಿದ್ದಾರೆ.
ಅಗ್ನಿಪಥ್ ಪ್ರತಿಭಟನೆ; ಎಚ್ಚರಿಕೆ ನೀಡಿದ ಏರ್ ಚೀಫ್ ಮಾರ್ಷಲ್
ಸೈನ್ಯದಿಂದ ತೆಗೆದ ಮೇಲೆ ಅಗ್ನಿಪಥ್ನ ಯೋಧರು ಶಿಕ್ಷಣವನ್ನು ಮುಂದುವರೆಸಲು ಆಗಿಲ್ಲ, ಪಿಂಚಣಿಯೂ ಸಿಗಲ್ಲ. ಇದು ಬಹಳ ಅವೈಜ್ಞಾನಿಕವಾಗಿದೆ ಹಾಗಾಗಿ ಯುವ ಜನರು ಈ ಯೋಜನೆ ಬೇಡ ಎಂದು ಹೇಳ್ತಿದ್ದಾರೆ. ಆದರೆ ಸರ್ಕಾರ ನಾವು ಇದನ್ನು ಮಾಡಿಯೇ ಮಾಡ್ತೀವಿ ಎಂದು ಹಠ ಹಿಡಿದು ಕೂತಿದ್ದಕ್ಕೆ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಸಿದ್ದರಾಮಯ್ಯ ಅಗ್ನಿಪಥ್ ಯೋಜನೆಯ ವಿರುದ್ಧ ಹೋರಾಟದ ಹಿನ್ನೆಲೆಯನ್ನು ತಿಳಿಸಿದ್ದಾರೆ.
ಸರ್ಕಾರ ಯಾಕೆ ಹಠ ಹಿಡಿದು ಕೂತಿರುವುದು?
ಯುವಕರ ಮುಖ್ಯ ಬೇಡಿಕೆ ನಾಲ್ಕು ವರ್ಷದ ನಂತರ ನಾವು ನಿರುದ್ಯೋಗಿ ಆಗುತ್ತೇವೆ, ನಮಗೆ ಪಿಂಚಣಿ ಕೂಡ ಸಿಗಲ್ಲ ಎಂಬುದು. ನನ್ನ ಪ್ರಕಾರ ಇದು ನ್ಯಾಯಯುತ ಬೇಡಿಕೆ. ಯೋಜನೆ ಕೈಬಿಡಬೇಕು, ಸರ್ಕಾರ ಯಾಕೆ ಹಠ ಹಿಡಿದು ಕೂತಿರುವುದು? ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಆರಂಭವಾದ ನಂತರದಿಂದ ಮೀಸಲಾತಿ ಎಲ್ಲಿ ಸಿಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೂ ಮೀಸಲಾತಿ ಕೊಡಲು ಆರಂಭವಾದ ಮೇಲೆ ಮೀಸಲಾತಿಯ ಅರ್ಥವೇ ಹೊರಟು ಹೋಗಿದೆ. ನಿರುದ್ಯೋಗವನ್ನು ಹೆಚ್ಚು ಮಾಡುವುದು ಸರ್ಕಾರದ ಉದ್ದೇಶ ಅನ್ನಿಸುತ್ತೆ ಎಂದು ಸಿದ್ದರಾಮಯ್ಯ ಗುಡುಗಿದರು.
ಶಾಂತಿಯಿಂದ ಹೋರಾಟ ಮಾಡಬೇಕು
ಅಗ್ನಿಪಥ್ ವಿರುದ್ಧದ ಯುವಕರ ಹೋರಾಟ ನ್ಯಾಯಯುತವಾಗಿದೆ ಎಂದು ನಾವು ಬೆಂಬಲ ನೀಡಿದ್ದೇವೆ, ಆದರೆ ಈ ಹೋರಾಟವನ್ನು ಹಿಂಸಾತ್ಮಕವಾಗಿ ನಡೆಸಬಾರದು. ಶಾಂತಿಯಿಂದ ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
10 ಪಥಗಳ ರಾಷ್ಟ್ರೀಯ ಹೆದ್ದಾರಿಗೆ ಅನುಮೋದನೆ ಕೊಟ್ಟಿದ್ದು ಆಸ್ಕರ್
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ಅಂಬೇಡ್ಕರ್ ಅವರ 125ನೇ ಜಯಂತಿ ಆಚರಣೆ ಸಂದರ್ಭದಲ್ಲಿ ನಮ್ಮ ಸರ್ಕಾರ ಮಂಜೂರು ಮಾಡಿದ್ದು, ಜಾಗ, ಅನುದಾನ ನೀಡಿದ್ದು ನಾನು. ಬೆಂಗಳೂರು - ಮೈಸೂರು ಹೆದ್ದಾರಿಯನ್ನು ತಾನೇ ಮಾಡಿಸಿದ್ದು ಎಂದು ಪ್ರತಾಪ್ ಸಿಂಹ ಬಹಳ ಸಲ ಹೇಳಿದ್ದಾರೆ. ವಾಸ್ತವವೆಂದರೆ ನಾನು ಮುಖ್ಯಮಂತ್ರಿಯಾಗಿದ್ದೆ, ಮಹದೇವಪ್ಪನವರು ಸಚಿವರಾಗಿದ್ದರು, ಆಗ ಕೇಂದ್ರದಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ಭೂಸಾರಿಗೆ ಸಚಿವರಾಗಿದ್ದರು. ರಾಜ್ಯ ಹೆದ್ದಾರಿಯಾಗಿದ್ದ ಮೈಸೂರು - ಬೆಂಗಳೂರು ಹೆದ್ದಾರಿಯನ್ನು 10 ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲು ಅನುಮೋದನೆ ಮಾಡಿಕೊಟ್ಟವರು ಆಸ್ಕರ್ ಫರ್ನಾಂಡೀಸ್. ಯೋಜನೆ ಅನುಮೋದನೆಯೇ ಆಗದಿದ್ದರೆ ಈ ಸರ್ಕಾರ ಕೆಲಸ ಮಾಡುತ್ತಿತ್ತಾ? ಎಂದು ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಿದ್ದರಾಮಯ್ಯ ಮಾತಿನಲ್ಲೇ ಕುಟುಕಿದ್ದಾರೆ.
ಮೋದಿ ಉತ್ತರ ನೀಡುವ ಆಶಾ ಭಾವನೆ ಇದೆ
ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಡಾಕ್ಟರ್ ಆಫ್ ಸೈನ್ಸ್ ಓದಿದ್ದರು. ಇದಕ್ಕಾಗಿ ಅವರ 125ನೇ ಹುಟ್ಟು ಹಬ್ಬದ ಸ್ಮರಣಾರ್ಥ ನಮ್ಮ ಸರ್ಕಾರ ಕರ್ನಾಟಕದಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಸ್ಥಾಪನೆ ಮಾಡಿದ್ದು ಎಂದು ಸಂಸ್ಥೆ ಸ್ಥಾಪನೆಯ ಹಿನ್ನೆಲೆಯನ್ನು ಸಿದ್ದರಾಮಯ್ಯನವರು ನೆನಪಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದೇನೆ, ಅವುಗಳಿಗೆ ಉತ್ತರ ಕೊಡುತ್ತಾರೆ ಎಂಬ ಆಶಾ ಭಾವನೆ ಇದೆ. ನೋಡೋಣ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
Recommended Video