ಕರ್ನಾಟಕ : ಏ.13ರಂದು ನಡೆಯುವ ರಾಜಕೀಯ ಬೆಳವಣಿಗೆಗಳು ಹೀಗಿವೆ
ಬೆಂಗಳೂರು, ಏ.13: ರಾಜ್ಯ ರಾಜಕೀಯದಲ್ಲಿ ಏ.13ರಂದು ಬುಧವಾರ ನಡೆಯುವ ಪ್ರಮುಖ ವಿದ್ಯಮಾನಗಳು ಈ ರೀತಿಯಾಗಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯ ಪ್ರವಾಸದಲ್ಲಿದ್ದು, ಮಂಗಳವಾರ ರಾತ್ರಿಯೂ ಸಹ ಅಲ್ಲಿಯೇ ಉಳಿದುಕೊಂಡಿದ್ದಾರೆ. ಮುಖ್ಯಮಂತ್ರಿ ಕಾರ್ಯಕ್ರಮದ ಅಧಿಕೃತ ಪಟ್ಟಿಯ ಪ್ರಕಾರ ಬುಧವಾರ ಬೆಳಗ್ಗೆ ಉಡುಪಿ ಮತ್ತು ಮಂಗಳೂರಿನ ಕೆಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ಹೊರಡಲಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 4ಕ್ಕೆ ದಲಿತ ಸಂಘಟನೆಗಳ ಮುಖಂಡರ ಭೇಟಿ ಮತ್ತು ಚರ್ಚೆ ಕಾರ್ಯಕ್ರಮವಿದೆ. ಬಳಿಕ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿದ್ದಾರೆ.
ಸಿದ್ದರಾಮಯ್ಯ:
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆ 9ಕ್ಕೆ ಕೆಪಿಸಿಸಿ ವತಿಯಿಂದ ರಾಜ್ಯಪಾಲರ ಭೇಟಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಈ ಸಂದರ್ಭದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ.

ಬೆಳಗ್ಗೆ 10ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನದ ನಂತರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಕೆಪಿಸಿಸಿ:
40% ಕಮಿಷನ್ ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗವು ಏಪ್ರಿಲ್ 13, 2022ರ ಬುಧವಾರ ಬೆಳಗ್ಗೆ 9.00 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಿದ್ದಾರೆ.
ನಿಯೋಗದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಪಕ್ಷದ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಈಶ್ವರ್ ಖಂಡ್ರೆ, ಧೃವನಾರಾಯಣ್, ಸತೀಶ್ ಜಾರಕಿಹೊಳಿ ಅವರು ಇರಲಿದ್ದಾರೆ.
ಡಾ.ಸಿ.ಎನ್. ಅಶ್ವತ್ಥ ನಾರಾಯಣ:
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು, ಮಧ್ಯಾಹ್ನ ಬೆಂಗಳೂರು ತಲುಪಲಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ನಿರ್ಮಿಸಲಾಗುತ್ತಿರುವ 108 ಅಡಿಯ ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆಯ ಕಾಮಗಾರಿ ಪರಿಶೀಲನೆ ಮಧ್ಯಾಹ್ನ 2.30ಕ್ಕೆ ನಡೆಯಲಿದೆ.
ಸಂಜೆ 5ಕ್ಕೆ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಹೃದ್ರೋಗ ಘಟಕದ ಹೊಸ ಕಟ್ಟಡ, ಮಕ್ಕಳ ಐಸಿಯು ಘಟಕ ಸ್ಥಾಪನೆ ಸಂಬಂಧ ಕಾಮಗಾರಿ ಪರಿಶೀಲನೆ. ಮಣಿಪಾಲ್ ಆಸ್ಪತ್ರೆ ಸಹೋಯೋಗದಲ್ಲಿ ಸ್ಥಾಪನೆಯಾಗಲಿರುವ ಹೈಟೆಕ್ ಪ್ರಯೋಗಾಲಯಕ್ಕೂ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಪರಿಶೀಲನೆ ನಡೆಸುವರು.
ಡಾ.ಕೆ. ಸುಧಾಕರ್
ಎಸ್ಟೋನಿಯಾದ ರಾಯಭಾರಿ ಕತ್ರಿನ್ ಕಿವ್ ನೇತೃತ್ವದ ಉನ್ನತ ನಿಯೋಗ ಬೆಂಗಳೂರು ನಗರಕ್ಕೆ ಆಗಮಿಸಿದ್ದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರನ್ನು ಬೆಳಗ್ಗೆ 10ಕ್ಕೆ ವಿಧಾನಸೌಧದಲ್ಲಿ ಭೇಟಿ ಮಾಡಿ ಕೆಲ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಸಭೆಯ ಬಳಿಕ ಮಾನ್ಯ ಸಚಿವರು ಚರ್ಚೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಲಿದ್ದಾರೆ.












Click it and Unblock the Notifications