ಕರ್ನಾಟಕ: ಸೆ.17ರ ಟಾಪ್ 5 ರಾಜಕೀಯ ಬೆಳವಣಿಗೆಗಳು
ಬೆಂಗಳೂರು, ಸೆಪ್ಟೆಂಬರ್ 17 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸದಿಂದ ಬಂದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟಕದ ಮೈತ್ರಿ ಸರ್ಕಾರದ ಭವಿಷ್ಯ ಏನಾಗಲಿದೆ? ಎಂಬುದು ಸದ್ಯದ ಕುತೂಹಲವಾಗಿದೆ.
ಸೋಮವಾರ ಕರ್ನಾಟಕ ಹಲವಾರು ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಯಿತು. ಸಿದ್ದರಾಮಯ್ಯ ನಿವಾಸ 'ಕಾವೇರಿ', ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸರಣಿ ಸಭೆಗಳು ನಡೆದವು. ಅತ್ತ ಯಡಿಯೂರಪ್ಪ ನಿವಾಸದಲ್ಲಿ ನಾಯಕರು ಸಭೆ ನಡೆಸಿದರು.
ಕರ್ನಾಟಕದ ರಾಜಕೀಯದ ಸುದ್ದಿ ದೆಹಲಿ ತಲುಪಿದೆ. ಕಾಂಗ್ರೆಸ್ ಹೈಕಮಾಂಡ್ ಮಾಜಿ ಸಚಿವ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. ಇತ್ತ ಸಿದ್ದರಾಮಯ್ಯ ರಮೇಶ್ ಜಾರಕಿಹೊಳಿ ಭೇಟಿಗಾಗಿ ಕಾದು ಕುಳಿತಿದ್ದಾರೆ.
ಬಿಜೆಪಿ ಪಾಳಯದಲ್ಲೂ ಚಟುವಟಿಕೆ ಜೋರಾಗಿದೆ. ಆದರೆ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಲಬುರಗಿ ಪ್ರವಾಸದಲ್ಲಿ ಬ್ಯುಸಿಯಾಗಿದ್ದಾರೆ. ಸೋಮವಾರ ರಾಜ್ಯ ರಾಜಕೀಯದಲ್ಲಿ ನಡೆದಿದ್ದೇನು? ಇಲ್ಲಿದೆ ಮಾಹಿತಿ....

ಸಿದ್ದರಾಮಯ್ಯ ನಿವಾಸದಲ್ಲಿ ಸಭೆ
ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸರಣಿ ಸಭೆ ನಡೆಯಿತು. ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಮುಂತಾದ ನಾಯಕರು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ ಸೇರಿದಂತೆ ಅಸಮಾಧಾನಗೊಂಡಿರುವ ಶಾಸಕರಿಗೆ ತಮ್ಮನ್ನು ಭೇಟಿ ಮಾಡುವಂತೆ ಸೂಚಿಸಿ ಮನೆಯಲ್ಲಿಯೇ ಉಳಿದರು. ಹಲವು ಮುಖಂಡರು ಅವರನ್ನು ಭೇಟಿ ಮಾಡಿದರು.

ರಮೇಶ್ ಜಾರಕಿಹೊಳಿ ಬೆಂಗಳೂರಿಗೆ
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ಬಂದರು. ಏರ್ ಇಂಡಿಯಾ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಬಂದ ಅವರು, ಖಾಸಗಿ ಕಾರಿನಲ್ಲಿ ತಮ್ಮ ನಿವಾಸಕ್ಕೆ ಆಗಮಿಸಿದರು. ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು 2 ಸಮಯ ನಿಗದಿಯಾಗಿತ್ತು. ಆದರೆ, ಅವರು ಭೇಟಿಯಾಗಲಿಲ್ಲ.
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಶಾಸಕ ಎಂ.ಟಿ.ಬಿ.ನಾಗರಾಜ್, ನಾಗೇಂದ್ರ ಮುಂತಾದವರು ಭೇಟಿ ನೀಡಿದರು. ರಮೇಶ್ ಜಾರಕಿಹೊಳಿ ಅವರ ಜೊತೆ ಮಾತುಕತೆ ನಡೆಸಿದರು.

ಸತೀಶ್ ಜಾರಕಿಹೊಳಿಗೆ ಹೈಕಮಾಂಡ್ ಕರೆ
ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿಗೆ ಬಂದರೆ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಉಳಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿ ಅವರಿಗೆ ಕರೆ ಮಾಡಿ ಮಂಗಳವಾರ ಅಥವ ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದರು.
ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ. ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ' ಎಂದು ಹೇಳಿದರು.

ಬಿಜೆಪಿ ಪಾಳಯದಲ್ಲೂ ಚಟುವಟಿಕೆ
ಅತ್ತ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಯೂ ಹಲವು ಸಭೆಗಳು ನಡೆದವು. ಪಕ್ಷದ ಎಲ್ಲಾ 104 ಶಾಸಕರಿಗೆ ಯಡಿಯೂರಪ್ಪ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ.
ಮಂಗಳವಾರ ಬೆಳಗ್ಗೆ 10.30ಕ್ಕೆ ಬಿಜೆಪಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಸಹ ಮಂಗಳವಾರ ರಾಜ್ಯಕ್ಕೆ ಬರುತ್ತಿದ್ದು, ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಶಾಸಕರ ಡೆಡ್ ಲೈನ್
ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ನಡೆಸಿದ ಶಾಸಕರಾದ ಎಂ.ಟಿ.ಬಿ.ನಾಗರಾಜ್, ನಾಗೇಂದ್ರ ಮುಂತಾದವರು ಸೆ.30ರೊಳಗೆ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದು ಪಕ್ಷದ ನಾಯಕರಿಗೆ ಗಡುವು ನೀಡಿದರು.











Click it and Unblock the Notifications