ಸೆ.18ರಂದು ಕರ್ನಾಟಕ ರಾಜಕಾರಣದಲ್ಲಿ ಏನೇನಾಯ್ತು?
Recommended Video

ಬೆಂಗಳೂರು, ಸೆಪ್ಟೆಂಬರ್ 18 : ಸತತ ಒಂದು ವಾರಗಳ ಕಾಲ ಕರ್ನಾಟಕ ಕಾಂಗ್ರೆಸ್ನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಮಂಗಳವಾರ ತೆರೆ ಬಿದ್ದಿದೆ. ಜಾರಕಿಹೊಳಿ ಸಹೋದರರ ಜೊತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸಿದ ಸಂಧಾನ ಸಭೆ ಸಫಲವಾಗಿದೆ.
ಮಂಗಳವಾರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸತೀಶ್ ಜಾರಕಿಹೊಳಿ ಅವರ ಜೊತೆ ಸಭೆ ನಡೆಸಿದರು. ಸತೀಶ್ ಜಾರಕಿಹೊಳಿ ಅವರು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಅವುಗಳನ್ನು ಈಡೇರಿಸುವ ಭರವಸೆ ಸಿಕ್ಕಿದೆ.
ಜಾರಕಿಹೊಳಿ ಸಹೋದರರು ಬಂಡಾಯ ಕೈ ಬಿಟ್ಟರೂ ಸಚಿವ ಸ್ಥಾನ ಆಕಾಂಕ್ಷಿಗಳಾಗಿರುವ ಶಾಸಕರು ಇನ್ನೂ ತನ್ನ ಚಟುವಟಿಕೆಗಳನ್ನು ನಿಲ್ಲಿಸಿಲ್ಲ. ಅಕ್ಟೋಬರ್ 3ರ ಬಳಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ ಮಾಡಲಾಗಿದೆ.
ಮತ್ತೊಂದು ಕಡೆ ಕರ್ನಾಟಕ ಕಾಂಗ್ರೆಸ್ ಅಸಮಾಧಾನ ದೆಹಲಿಗೆ ಸ್ಥಳಾಂತರವಾಗಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಇಂದು ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಜೊತೆ ಸಭೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಸತೀಶ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಸಂಧಾನ ಸಭೆ ನಡೆಸಿದರು. ಪಕ್ಷ ಬಿಡುವಂತಹ ತೀರ್ಮಾನವನ್ನು ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದರು.
ಜಾರಕಿಹೊಳಿ ಸಹೋದರರು ಬೆಳಗಾವಿ ರಾಜಕಾರಣ ಮತ್ತು ತಮ್ಮ ಬೇಡಿಕೆಗಳನ್ನು ಕುಮಾರಸ್ವಾಮಿ ಅವರಿಗೆ ತಿಳಿಸಿದರು. ಹಂತ-ಹಂತವಾಗಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಸರ್ಕಾರದ ಮಟ್ಟದಲ್ಲಿ ಕೆಲವು ಕೆಲಸಗಳು ಆಗುತ್ತಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸಿದ್ದೇನೆ. ಎಲ್ಲಾ ಕೆಲಸ ಮಾಡಿಕೊಡುವೆ ಎಂದು ಅವರು ಭರವಸೆ ನೀಡಿದ್ದಾರೆ. ಬೆಳಗಾವಿ ರಾಜಕಾರಣದ ಬಗ್ಗೆ ಅಸಮಾಧಾನವಿತ್ತು. ಈಗ ಎಲ್ಲಾ ಸಮಸ್ಯೆ ಬಗೆಹರಿದಿದೆ. ನಮ್ಮ ಸಮುದಾಯದ ಒಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದೇವೆ. ಆದರೆ, ಅದು ಇನ್ನೂ ಅಂತಿಮವಾಗಿಲ್ಲ' ಎಂದರು.

ಸಿದ್ದರಾಮಯ್ಯ ಪತ್ರಿಕಾಗೋಷ್ಠಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. 'ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದ್ದು ನಿಜ. ಆದರೆ, ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರ ಬೀಳಿಸಲು ಬಿಜೆಪಿ ಯೋಜನೆ ರೂಪಿಸಿತ್ತು ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದಾರೆ. ಬಿಜೆಪಿ ಲಜ್ಜೆ, ಮರ್ಯಾದೆ ಬಿಟ್ಟು, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದೆ' ಎಂದು ದೂರಿದರು.

ಸಂಪುಟ ವಿಸ್ತರಣೆಗೆ ಯಾವಾಗ?
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, 'ಸದ್ಯಕ್ಕೆ ಸಂಪುಟ ವಿಸ್ತರಣೆ ಆಗುವುದಿಲ್ಲ. ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗುವುದಿಲ್ಲ. ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಸಂಪುಟ ವಿಸ್ತರಣೆ ಸೂಕ್ತ ಸಮಯದಲ್ಲಿ ಮಾಡುತ್ತೇವೆ. ವಿಧಾನಪರಿಷತ್ ಚುನಾವಣೆ ಬಳಿಕ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ' ಎಂದರು.

ದೆಹಲಿಗೆ ರಾಜಕೀಯ ಶಿಫ್ಟ್
ಕರ್ನಾಟಕ ಕಾಂಗ್ರೆಸ್ ರಾಜಕೀಯ ದೆಹಲಿಗೆ ಶಿಫ್ಟ್ ಆಗಿದೆ. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಬೆಳಗ್ಗೆ 10.30ಕ್ಕೆ ಸಭೆ ನಡೆಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಂಗಳವಾರವೇ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಇಂದು ಸಂಜೆ 7.30ರ ವಿಮಾನದಲ್ಲಿ ದೆಹಲಿಗೆ ಹೋಗಲಿದ್ದಾರೆ. ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ ಅವರು ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.












Click it and Unblock the Notifications