PM Modi Praises KS Eshwarappa: ಕ್ಷೇತ್ರ ತ್ಯಾಗ ಮಾಡಿದ ಈಶ್ವರಪ್ಪಗೆ ಕರೆ ಮಾಡಿ ಪ್ರಧಾನಿ ಮೋದಿ ಹೇಳಿದ್ದೇನು?
ಶಿವಮೊಗ್ಗ,ಏಪ್ರಿಲ್ 21 : ರಾಜ್ಯ ರಾಜಕಾರಣದಲ್ಲಿ ಚುನಾವಣಾ ರಣಕಣ ಜೋರಾಗಿದೆ. ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಿಂದಾಗಿ ರಾಜೀನಾಮೆ ಪರ್ವ ಜೋರಾಗಿ ಸದ್ದು ಮಾಡಿದೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಹಲವು ಜನ ನಾಯಕರು ಬಿಜೆಪಿ ಗೆ ಗುಡ್ ಬೈ ಹೇಳಿದ್ದಾರೆ.
ಇತ್ತ ಶಿವಮೊಗ್ಗ ನಗರದಿಂದ ಟಿಕೆಟ್ ನೀಡಲ್ಲ ಎಂದು ಕೆ ಎಸ್ ಈಶ್ವರಪ್ಪ ಅವರಿಗೆ ಹೈಕಮಾಂಡೊ ಸೂಚನೆ ನೀಡಿತ್ತು. ಇತ್ತ ಪುತ್ರನಿಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದ ಈಶ್ವರಪ್ಪ ಪುತ್ರನಿಗೂ ಕೊನೆಗೂ ಹೈಕಮಾಂಡ್ ಟಿಕೆಟ್ ನೀಡದೇ ಹೊಸ ಮುಖವನ್ನ ಕಣಕ್ಕಿಳಿಸಿದೆ.

ಇತ್ತ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಬಿಜೆಪಿ ವಿರುದ್ದ ತಿರುಗಿ ಬಿದ್ದಿದ್ದು, ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿದ್ರೆ ಇತ್ತ ಮಾಜಿ ಸಚಿವ ಕೆ ಎಸ್ಟಿಕೆಟ್ ಕೈತಪ್ಪಿದರೂ ಬೇಸರಗೊಳ್ಳದೇ ಪಕ್ಷ ಸಂಘಟನೆಯನ್ನ ಮುಖ ಮಾಡಿದ್ದಾರೆ. ಹೀಗಾಗಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಶುಕ್ರವಾರ ಮುಂಜಾನೆ ಮಾಜಿ ಸಚಿವ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದರು.
ಶುಕ್ರವಾರ ಮುಂಜಾನೆ ಏಳು ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಈಶ್ವರಪ್ಪ ಗೆ ಕರೆ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ. ನೀವು ನಡೆದುಕೊಂಡ ರೀತಿ ನನಗೆ ಖುಷಿ ತಂದಿದೆ. ಪಕ್ಷ ಸಂಘಟನೆಯಲ್ಲಿ ಪುನಃ ತೊಡಗಿಕೊಂಡಿರುವುದು ಹೆಮ್ಮೆ ಎನಿಸಿದೆ. ನಿಮ್ಮ ಕುಟುಂಬಕ್ಕೆ ಒಳ್ಳೇಯದಾಗಲಿ. ಮುಂದಿನ ದಿನಗಳಲ್ಲಿ ಒಳ್ಳೇಯದಾಗುತ್ತೆ ಎಂದು ಮೋದಿ ಹೇಳಿದ್ದರೆ. ಅದಕ್ಕೆ ಪ್ರತಿಯಾಗಿ ಈಶ್ವರಪ್ಪ, ನೀವು ಹೆಚ್ಚು ಸಮಯ ರಾಜ್ಯ ಪ್ರವಾಸ ಮಾಡಬೇಕು ಎಂದು ಹೇಳಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕೆಂಬ ಕಾರಣಕ್ಕಾಗಿ ನೀವು ತೆಗೆದುಕೊಂಡಿರುವ ನಿರ್ಧಾರವನ್ನು ಪಕ್ಷ ಸದಾ ಸ್ವಾಗತಿಸುತ್ತದೆ. ಬೇರೊಬ್ಬರಿಗೆ ಅವಕಾಶ ಕಲ್ಪಿಸಲು ನಿಮ್ಮ ನಿಲುವು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಶಿವಮೊಗ್ಗ ವಿಧಾನಸಭೆ ಚುನಾವಣೆ ಕುರಿತಂತೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಅಭ್ಯರ್ಥಿಗಳ ಗೆಲುವಿಗೆ ನಿಮ್ಮ ಸೇವೆ ಅಗತ್ಯ ಎಂದು ಮನವಿ ಮಾಡಿಕೊಂಡರು. ಈ ಕುರಿತು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿ, ಶಿವಮೊಗ್ಗ ಸೇರಿದಂತೆ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ನನಗೆ ಪಕ್ಷ ತಾಯಿ ಸಮಾನ. ನಾನು ಸಂಘಪರಿವಾರದಿಂದ ಬೆಳೆದು ಬಂದವನ್ನು ಎಂದಿಗೂ ಪಕ್ಷದ ವಿರೋಧ ಅಥವಾ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ನಿಮ್ಮ ಸೂಚನೆಯನ್ನು ನಾನು ಪಾಲಿಸುತ್ತೇನೆ ಎಂದು ಹೇಳಿದರು.
ಶಿವಮೊಗ್ಗ ಸೇರಿದಂತೆ ರಾಜ್ಯದ ಎಲ್ಲೆಡೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಪೂರಕವಾದ ವಾತಾವರಣವಿದೆ. ಎಲ್ಲರೂ ಗೆಲುವಿಗಾಗಿ ಶ್ರಮಿಸುತ್ತಿದ್ದೇವೆ. ಖಂಡಿತವಾಗಿಯೂ ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಜ್ಜಾಗಿರುವ ರಾಜ್ಯ ಬಿಜೆಪಿಯಲ್ಲಿ ಕೆಲ ಹಿರಿಯ ನಾಯಕರಿಗೆ ಟಿಕೆಟ್ ಮಿಸ್ ಆಗಿದೆ. ಇತ್ತ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್ಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ಸಂಘ ಪರಿವಾರ ಹಿನ್ನೆಲೆಯ ಚನ್ನಬಸಪ್ಪ ಅವರಿಗೆ ಟಿಕೆಟ್ ನೀಡಲಾಗಿದ್ದು, ಈಶ್ವರಪ್ಪ ಅವರ ನಡೆಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications