ಈ ಬಾರಿ ನಮ್ಮ ಕಾರ್ಯಕರ್ತರೊಬ್ಬರು ಸಿಎಂ ಆಗ್ತಾರೆ: ಕುತೂಹಲ ಹುಟ್ಟಿಸಿದ ಶೋಭಾ ಕರಂದ್ಲಾಜೆ ಹೇಳಿಕೆ
ಬೆಂಗಳೂರು, ಮೇ11: ಎಕ್ಸಿಟ್ ಪೋಲ್ ಸಮೀಕ್ಷೆಗಳಿಂದ ಬಿಜೆಪಿ ಗೆ ಅಘಾತವಾಗಿದ್ದು, ಈ ಸಮೀಕ್ಷೆಗಳೆಲ್ಲಾ ಸುಳ್ಳು. ಈ ಬಾರೀ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ನಮ್ಮ ಕಾರ್ಯಕರ್ತರೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿರುವ ಹೇಳಿಕೆ ಸಾಕಷ್ಟು ಕುತೂಹಲವನ್ನ ಉಂಟು ಮಾಡಿದೆ.
ಈ ಕುರಿತು ಕ್ಯಾಪಿಟಲ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ನಮ್ಮ ವರದಿ, ಯಡಿಯೂರಪ್ಪ ಅವರ ವರದಿ ಸುಳ್ಳಾಗಿಲ್ಲ. ನಾವು ಈ ಬಾರಿ ಸರಕಾರ ರಚಿಸಲಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ಜನರ ಉತ್ಸಾಹದ ಮತದಾನ, ಬೂತ್ಗಳಲ್ಲಿ ನಮಗೆ ಕಂಡುಬಂದ ವರದಿ ಮತ್ತು ಉತ್ಸಾಹಗಳು ಇದಕ್ಕೆ ಕಾರಣ. ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ ಸರಕಾರವನ್ನು ರಚಿಸುವ ವಿಶ್ವಾಸ ಇದೆ ಎಂದರು.

ನಮ್ಮ ಕಾರ್ಯಕರ್ತರ ಪ್ರಾಥಮಿಕ ವರದಿಯಂತೆ 120-125 ಕಡೆ ನಾವು ಲೀಡ್ನಲ್ಲಿದ್ದೇವೆ. ನಾವು ಬಹುಮತದ ಸರಕಾರ ರಚಿಸುತ್ತೇವೆ. ಜೆಡಿಎಸ್ ಭೂಮಿಕೆ ಕುರಿತು ನನಗೆ ಅರಿವಿಲ್ಲ. ಹಳೆ ಮೈಸೂರು ಭಾಗದಲ್ಲಿ ನಮ್ಮ ಪಕ್ಷದಿಂದ ಸುಶಿಕ್ಷಿತ, ಯುವ ಅಭ್ಯರ್ಥಿಗಳಿದ್ದರು. ಅಲ್ಲಿ ಅತ್ಯುತ್ತಮ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದು ಅವರು ತಿಳಿಸಿದರು.
ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ನಮ್ಮ ವರದಿ, ಯಡಿಯೂರಪ್ಪ ಅವರ ವರದಿ ಸುಳ್ಳಾಗಿಲ್ಲ- ಶೋಭಾ ಕರಂದ್ಲಾಜೆ
— oneindiakannada (@OneindiaKannada) May 11, 2023
ಹೆಚ್ಚಿನ ಮಾಹಿತಿಗಾಗಿ...👇https://t.co/2ep7cUpsDL#KarnatakaAssemblyElection2023 #KarnatakaElections2023 #ExitPolls2023 #BJP #ShobhaKarandlaje pic.twitter.com/W8coi2u5mu
ನಮ್ಮ ವರದಿ, ಯಡಿಯೂರಪ್ಪ ಅವರ ವರದಿ ಸುಳ್ಳಾಗಿಲ್ಲ. ಯಡಿಯೂರಪ್ಪನವರು 120 ಸೀಟು ದಾಟುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದು ನಿಜವಾಗಲಿದೆ. ರಾಜ್ಯದ ಜನರು ಅಭಿವೃದ್ಧಿಗಾಗಿ ಬಹುಮತದ ಬಿಜೆಪಿ ಸರಕಾರ ಕೊಡಲಿದ್ದಾರೆ. ಅತಂತ್ರ ಸ್ಥಿತಿ ಖಂಡಿತವಾಗಿ ಬರುವುದಿಲ್ಲ. ಕಾಯೋಣ ಎಂದು ಹೇಳಿದರು.

ಕೆಲವು ಜಿಲ್ಲೆಗಳಲ್ಲಿ 80- 83 ಶೇಕಡಾ ಮತ ಚಲಾವಣೆ ಆಗಿದೆ. ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮತದಾರರಿಗೆ ಅಭಿನಂದನೆಗಳು ಎಂದು ತಿಳಿಸಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು ಮತ್ತು ಕರ್ತವ್ಯ. ಒಂದು ಒಳ್ಳೆಯ ಸರಕಾರವನ್ನು ರಾಜ್ಯ ಮತ್ತು ದೇಶದಲ್ಲಿ ತರಲು ಹಾಗೂ ನಮ್ಮ ಸ್ಥಳೀಯ ಸಂಸ್ಥೆಯಲ್ಲಿ ಒಳ್ಳೆಯ ವ್ಯವಸ್ಥೆಯನ್ನು ತರಲು ಮತದಾನ ಅಗತ್ಯವಾಗಿ ಬೇಕಾಗಿದೆ ಎಂದರು. ಜನರ ಅಭಿಪ್ರಾಯದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಿಂತಿದೆ ಎಂದು ಹೇಳಿದರು.
65 ವರ್ಷ ದಾಟಿದವರಿಗೆ ಆನ್ಲೈನ್ ಮತದಾನದ ಅವಕಾಶ ಇದ್ದರೂ ಅನೇಕ ಹಿರಿಯರು ಬೂತ್ಗೆ ಬಂದು ಕ್ಯೂನಲ್ಲಿ ನಿಂತು ಮತದಾನ ಮಾಡಿದ್ದಾರೆ. ಅವರಿಗೆ ಮತ್ತು ಪ್ರಚಾರದಲ್ಲಿ ಸಹಕರಿಸಿದ ಮಾಧ್ಯಮಗಳಿಗೂ ಧನ್ಯವಾದಗಳು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಆಯೋಗ, ಪಕ್ಷಗಳ ಪ್ರಯತ್ನದ ಬಳಿಕವೂ ಶೇ 52-53 ಮತದಾನ ಆಗಿದೆ. ಆದರೂ ಕಡಿಮೆ ಮತದಾನ ಆಗಿರುವುದು ಬೇಸರದ ವಿಚಾರ ಎಂದ ಅವರು, ಬೆಂಗಳೂರಿಗರು ಸಾಕಷ್ಟು ಪ್ರಮಾಣದಲ್ಲಿ ಮತದಾನ ಮಾಡುವುದಿಲ್ಲ ಎಂಬ ಬೇರೆ ಜಿಲ್ಲೆಯವರ ಮಾತು ನಿಜವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನತೆ ಪ್ರಜಾತಂತ್ರದ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲಿ. ಇದಕ್ಕಾಗಿ ಇನ್ನಷ್ಟು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಈ ವೇಳೆ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಮಹೇಶ್ ಎಂ.ಜಿ, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಬಿಜೆಪಿ ಮುಖಂಡ ಎಂ.ಆರ್.ವೆಂಕಟೇಶ್ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.












Click it and Unblock the Notifications