ವರುಣಾ ಬಗ್ಗೆ ರಾಜಹುಲಿ ಭವಿಷ್ಯ: ಮೈ ಡಿಯರ್ ಫ್ರೆಂಡ್ ಸಿದ್ದರಾಮಯ್ಯ ಸೋಲ್ತಾರೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು,ಮೇ 08: ಸಿದ್ದರಾಮಯ್ಯ ಅವರನ್ನ ತವರು ಕ್ಷೇತ್ರದಲ್ಲಿ ಸೋಲಿಸಲು ಬಿಜೆಪಿ ಪಣ ತೊಟ್ಟಿದೆ. ವರುಣಾ ಕ್ಷೇತ್ರದ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದು, ವರುಣಾದಲ್ಲಿ ಸಚಿವ ವಿ ಸೋಮಣ್ಣ ಗೆಲ್ತಾರೆ ಮತ್ತು ನನ್ನ ಫ್ರೆಂಡ್ ಸಿದ್ದರಾಮಯ್ಯ ಸೋಲ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಈ ಬಾರಿ 130ರಿಂದ 135 ಶಾಸಕ ಸ್ಥಾನ ಗೆಲ್ಲುವುದು ನಿಶ್ಚಿತ. ಇದು ಸೂರ್ಯ ಚಂದ್ರರಿರುವಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಬಿಜೆಪಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲೇಬೇಕೆಂದು ನರೇಂದ್ರ ಮೋದಿಜಿ ಅವರು, ಅಮಿತ್ ಶಾಜಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ಇದು ಫಲ ಕೊಡಲಿದೆ. ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯರೂಪಕ್ಕೆ ತರುವ ಪ್ರಧಾನಿ ನಮ್ಮವರು. ಜಾತಿ, ಧರ್ಮದ ಎಲ್ಲೆ ಮೀರಿ ಜಗಜ್ಯೋತಿ ಬಸವೇಶ್ವರರ ತತ್ವದಂತೆ ಅವರು ಆಡಳಿತ ಮಾಡುತ್ತಿದ್ದಾರೆ. ಅವರ ಹೆಜ್ಜೆಗೆ ಹೆಜ್ಜೆ ಹಾಕುವ ಸರಕಾರ ಕರ್ನಾಟಕದಲ್ಲಿ ಬೇಕಾಗಿದೆ. ರಾಜ್ಯದ ಅಭಿವೃದ್ಧಿ, ರೈತರು, ಮಹಿಳೆಯರು, ಯುವಕರು, ಮಕ್ಕಳ ಭವಿಷ್ಯಕ್ಕಾಗಿ ಮೋದಿಜಿ ಕೈಯನ್ನು ಬಲಪಡಿಸಬೇಕಿದೆ ಎಂದರು.
ರಾಜ್ಯದಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲಾಗಿದೆ. ಇದರಿಂದ ಇತಿಹಾಸ ಸೃಷ್ಟಿಯಾಗಿದೆ. ಶೇ 75-80 ರಷ್ಟು ಎಸ್ಸಿ, ಎಸ್ಟಿ ಸಮುದಾಯ ಬಿಜೆಪಿಯನ್ನು ಬೆಂಬಲಿಸಲಿದೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ, ರೈತರಿಗೆ ಪ್ರತ್ಯೇಕ ಬಜೆಟ್, ಪಂಪ್ಸೆಟ್ಗೆ ಉಚಿತ ವಿದ್ಯುತ್ ನೀಡಿದ್ದೆ. ಇಂದಿನ ನಮ್ಮ ಸರಕಾರ ರೈತ ವಿದ್ಯಾನಿಧಿ ಜಾರಿ ಮಾಡಿದೆ. ಸಂಧ್ಯಾ ಸುರಕ್ಷಾದಡಿ ಮಾಸಿಕ ವೇತನ ಹೆಚ್ಚಿಸಿದ್ದೇವೆ ಎಂದು ವಿವರಿಸಿದರು. ನಾವು ಯಾವತ್ತೂ ಜಾತಿ ರಾಜಕೀಯ ಮಾಡಿಲ್ಲ. ಸರ್ವರಿಗೂ ಸಮಪಾಲು, ಸಾಮಾಜಿಕ ನ್ಯಾಯದಡಿ ಕೆಲಸ ಮಾಡುತ್ತಿದ್ದೇವೆ ಎಂದರು.

ಲಿಂಗಾಯತ, ಒಕ್ಕಲಿಗರಿಗೆ 2ಡಿ ಮೀಸಲಾತಿ ತರಲಾಗಿದೆ ಎಂದ ಅವರು, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು. ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕಳೆದ ಬಾರಿ ಉತ್ತರಪ್ರದೇಶದಲ್ಲಿ ಓಡಾಡಿದರೂ ಬೆರಳೆಣಿಕೆಯ ಸೀಟನ್ನಷ್ಟೇ ಕಾಂಗ್ರೆಸ್ ಪಕ್ಷ ಗೆದ್ದಿದೆ.
ಕಾಂಗ್ರೆಸ್ ಪಕ್ಷ ಸಮರ್ಥ ನಾಯಕರನ್ನು ಹೊಂದಿಲ್ಲ. ರಾಹುಲ್ ಗಾಂಧಿ, ಮೋದಿಜಿ, ಅಮಿತ್ ಶಾ ಅವರಿಗೆ ಸರಿಸಾಟಿಯಾದ ನಾಯಕರಲ್ಲ ಎಂಬುದು ಜಗತ್ತಿಗೇ ಗೊತ್ತಿದೆ ಎಂದರು. ಮೋದಿಜಿ ಅವರು ಪ್ರಧಾನಿಯಾದ ಬಳಿಕ ಸಣ್ಣ ಭ್ರಷ್ಟಾಚಾರದ ಆರೋಪವೂ ಇಲ್ಲದೆ ದೇಶದ ಜನರಿಗಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ ಎಂದು ತಿಳಿಸಿದರು.

ವೀರಶೈವ ಲಿಂಗಾಯತ ಸಮುದಾಯವನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರ ಇದ್ದಾಗ ಕಾಂಗ್ರೆಸ್ಗೆ ಲಿಂಗಾಯತರ ನೆನಪಾಗಲಿಲ್ಲ. ಅಧಿಕಾರ ಇಲ್ಲದಾಗ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ವೀರಶೈವ ಲಿಂಗಾಯತ ಸಮಾಜ, ಎಸ್ಸಿ, ಎಸ್ಟಿ, ಒಬಿಸಿ ಸೇರಿ ಎಲ್ಲರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿದ್ದೆ. ವೀರಶೈವ ಲಿಂಗಾಯತ ಸಮಾಜ ಬಿಜೆಪಿ ಜೊತೆಗಿದೆ. ಕರ್ನಾಟಕದ ಜನರು ದೇಶದ ಅಭಿವೃದ್ಧಿ, ಸಮಗ್ರತೆಗಾಗಿ ಬಿಜೆಪಿಗೆ ಬೆಂಬಲ ಕೊಡುತ್ತಾರೆ. ಕರ್ನಾಟಕಕ್ಕೆ ಡಬಲ್ ಎಂಜಿನ್ ಸರಕಾರ ಬೇಕಿದೆ ಎಂದು ತಿಳಿಸಿದರು.












Click it and Unblock the Notifications