ಉಡುಪಿಯಲ್ಲಿ ಅಧ್ಯಾಪಕರ ಜವಾಬ್ದಾರಿ ನೆನಪಿಸಿದ ಕಿಮ್ಮನೆ
ಉಡುಪಿ, ಫೆಬ್ರವರಿ 26: ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆಗಾಗಿ ಉತ್ತಮ ಶಿಕ್ಷಣ ಕೊಡುವ ಹೊಣೆ ಅಧ್ಯಾಪಕರ ಮೇಲಿದೆ. ಈ ಸಂಬಂಧ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದ್ದು ಪರಿಣಾಮಕಾರಿ ಅನುಷ್ಠಾನದ ಅಗತ್ಯವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಇಲಾಖೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಶಿಕ್ಷಣ ಕುರಿತು ಹಲವು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಿಗೆ ಶಿಕ್ಷಕರನ್ನು ನೇಮಿಸುವ ವೇಳೆ ಅವರ ವಿದ್ಯಾರ್ಹತೆ, ಅನುಭವಗಳನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.[ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ]

ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಜ್ಜಾಗುತ್ತಿರುವ ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಉತ್ತೀರ್ಣರಾಗಲು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಉಡುಪಿ ಜಿಲ್ಲೆಯನ್ನು ಐದು ಶೈಕ್ಷಣಿಕ ವಿಭಾಗಗಳನ್ನಾಗಿ ವಿಂಗಡಿಸಿದ್ದು ಶೈಕ್ಷಣಿಕ ವರ್ಷದ ಆರಂಭ ಜೂನ್ 14 ರಿಂದಲೇ ಮಕ್ಕಳಿಗೆ ಉತ್ತಮ ತರಬೇತಿ ನೀಡಲು ಶಿಕ್ಷಕರಿಗೆ ಕನಿಷ್ಟ ಆರು ಸುತ್ತಿನ ತರಬೇತಿಗಳನ್ನು ನೀಡಲಾಗಿದೆ ಎಂದು ಉಪನಿರ್ದೇಶಕ ದಿವಾಕರ ಶೆಟ್ಟಿ ಹೇಳಿದರು.
ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಸಮಾಜವಿಜ್ಞಾನ, ಗಣಿತ, ಹಾಗೂ ಇಂಗ್ಲೀಷ್ ವಿಷಯಗಳ ಮಾದರಿ ಪ್ರಶ್ನೆಪತ್ರಿಕೆ 'ಸಾಧನೆಯ ಹಾದಿ' ಉಚಿತ ಪುಸ್ತಕಗಳನ್ನು ಹಂಚಲಾಗಿದೆ. ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರಗಳು, ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಹಿಂದುಳಿದ ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ವಸತಿ ಶಿಬಿರ, ಹತ್ತನೇ ತರಗತಿಯ ಸಮಾಜವಿಜ್ಞಾನ ಸಿಡಿಯನ್ನು ರಚಿಸಿ ಎಲ್ಲಾ ಪ್ರೌಢಶಾಲೆಗಳಿಗೆ ಉಚಿತವಾಗಿ ವಿತರಿಸಲಾಗಿದೆ ಎಂದರು.[ಎಂಎಸ್ ಇನ್ನೋವೇಟರ್ಸ್ ಪ್ರೋಗ್ರಾಂಗೆ ಕರ್ನಾಟಕದ ಶಾಲೆ ಆಯ್ಕೆ]
ಪ್ರೌಢಶಾಲಾ ವಿದ್ಯಾರ್ಥಿನಿಯರು ಕಲಿಕೆಯನ್ನು ಮುಂದುವರಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರ ಮಾರ್ಗದರ್ಶನದಡಿ 'ಪ್ರೇರಣಾ' ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರಿಗೆ ಜಿಲ್ಲಾ ಮಟ್ಟದ ಮಹಿಳಾ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ರೂಪಿಸಲಾಗಿದೆ ಎಂಬ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನ ಪರಿಷತ್ ಶಾಸಕ ಪ್ರತಾಪ್ಚಂದ್ರ ಶೆಟ್ಟಿ ಸಭೆಯಲ್ಲಿ ಪಾಲ್ಗೊಂಡರು.












Click it and Unblock the Notifications