ಇನ್ನು ಮುಂದೆ ಇಂದಿರಾ ಕ್ಯಾಂಟಿನ್ಗಳಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ- ಎಷ್ಟು ದರ? ವಿವರ ತಿಳಿಯಿರಿ
ಬೆಂಗಳೂರು, ಮೇ 25: ಕರ್ನಾಟಕದಾದ್ಯಂತ ಇಂದಿರಾ ಕ್ಯಾಂಟೀನ್ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಬಿಜೆಪಿ ಮತ್ತು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಗಳ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ಗಳು ಬಜೆಟ್ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ ನಂತರ ಮುಚ್ಚುವ ಹಂತದಲ್ಲಿದ್ದವು. ಸುಮಾರು 80 ಕ್ಯಾಂಟೀನ್ಗಳನ್ನು ಈಗಾಗಲೇ ಮುಚ್ಚಲಾಗಿದೆ. 94 ಇತರ ಕ್ಯಾಂಟಿನ್ಗಳು ಕಾರ್ಯಾಚರಣೆಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಸುಮಾರು 24 ಮೊಬೈಲ್ ಕ್ಯಾಂಟೀನ್ಗಳನ್ನು ಸಹ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

ಜನರು ಹತ್ತಿರದ ಇಂದಿರಾ ಕ್ಯಾಂಟೀನ್ಗಳನ್ನು ಪತ್ತೆ ಹಚ್ಚಲು ಸಾಧ್ಯವಾಗುವ ಅಪ್ಲಿಕೇಶನ್ ಅನ್ನೂ ಸಹ ಪ್ರಾರಂಭಿಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.
ಇಂದಿರಾ ಕ್ಯಾಟೀನ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017 ರಲ್ಲಿ ಪ್ರಾರಂಭಿಸಿದರು. ಕ್ಯಾಂಟೀನ್ಗಳಿಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹೆಸರನ್ನು ಇಡಲಾಗಿದೆ.
ರಾಜ್ಯಾದ್ಯಂತ ಬಡವರಿಗೆ ಹೆಚ್ಚು ಸಬ್ಸಿಡಿ ದರದಲ್ಲಿ ಆಹಾರ ಒದಗಿಸುವ ಗುರಿಯೊಂದಿಗೆ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಕ್ಯಾಂಟೀನ್ಗಳಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ಪ್ಲೇಟ್ಗೆ 5 ರಿಂದ 10 ರೂ.ಗೆ ನೀಡಲಾಗುತ್ತದೆ.

ನಗರ ಹಾಗೂ ಪಟ್ಟಣಗಳಲ್ಲಿ ವಾಸಿಸುವ ಬಡವರಿಗಾಗಿ ಕರ್ನಾಟಕದಲ್ಲಿ ಹಿಂದಿನ ಕಾಂಗ್ರೆಸ್ ಆಡಳಿತದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ಗಳು ಕಾರ್ಯರೂಪಕ್ಕೆ ತರಲು ಸಿದ್ದರಾಮಯ್ಯ ಭಾರೀ ಕಾಳಜಿ ವಹಿಸಿದ್ದಾರೆ.
ಬುಧವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ವಲಯ ಆಯುಕ್ತರು ಹಾಗೂ ಇತರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಬ್ಸಿಡಿ ದರದಲ್ಲಿ ಆಹಾರ ನೀಡುವ ಕ್ಯಾಂಟೀನ್ಗಳ ಪ್ರಸ್ತುತ ಸ್ಥಿತಿಯ ಕುರಿತು ವರದಿ ಸಲ್ಲಿಸಲು ನಿರ್ಧರಿಸಲಾಯಿತು.
ಅಧಿಕಾರಿಗಳ ಪ್ರಕಾರ, ಬೆಂಗಳೂರಿನಲ್ಲಿರುವ 175 ಇಂದಿರಾ ಕ್ಯಾಂಟೀನ್ಗಳಲ್ಲಿ 163 ಕಾರ್ಯನಿರ್ವಹಿಸುತ್ತಿವೆ. ಈ ಕ್ಯಾಂಟೀನ್ಗಳನ್ನು ಸ್ವಚ್ಛಗೊಳಿಸುವಂತೆ ಹಾಗೂ ಕಸ ವಿಲೇವಾರಿಗೆ ಪೌರಕಾರ್ಮಿಕರನ್ನು ನೇಮಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವಂತೆ ಮತ್ತು ಇಂದಿರಾ ಕ್ಯಾಂಟೀನ್ಗಳ ನಿರ್ವಹಣೆಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕ್ ಚಂದ್ರ ಕೆ ವಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ, ಸಂಚಾರಿ ಇಂದಿರಾ ಕ್ಯಾಂಟೀನ್ಗಳನ್ನು ಪುನರಾರಂಭಿಸಿ ವರದಿ ಸಲ್ಲಿಸುವಂತೆ ವಲಯ ಆಯುಕ್ತರಿಗೆ ಸೂಚಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎರಡನೇ ಅವಧಿಯ ಮೊದಲ ಪತ್ರಿಕಾಗೋಷ್ಠಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಇಂದಿರಾ ಕ್ಯಾಂಟೀನ್ಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ.
ಪೌಷ್ಟಿಕ ಆಹಾರದ ಆಯ್ಕೆಗಳನ್ನು ಅಳವಡಿಸಲು ಮತ್ತು ಬೇಡಿಕೆಯ ಆಧಾರದ ಮೇಲೆ ಭೋಜನವನ್ನು ಲಭ್ಯವಾಗುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.












Click it and Unblock the Notifications