Karnataka Weather: ಇನ್ನೂ ಎರಡು ದಿನ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದು ಈ ಭಾಗದ ರೈತರಲ್ಲಿ ಸಂತಸ ತಂದಿದೆ. ಕಾವೇರಿ ನದಿಯಲ್ಲಿ ಹರಿವು ಹೆಚ್ಚಾಗಬೇಕೆಂದರೆ ಇನ್ನೂ ಹಲವು ದಿನ ಇದೇ ರೀತಿ ಮಳೆಯಾಗಬೇಕಿದೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 112 ಮಿಮೀ ಮಳೆಯಾಗಿದ್ದು ಹೆಚ್ಚು ಮಳೆಯಾದ ಜಿಲ್ಲೆ ಎನಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಮಿ.ಮೀ, ಮೈಸೂರಿನಲ್ಲಿ 93 ಮಿ.ಮೀ, ಮಂಡ್ಯ 84 ಮಿ.ಮೀ, ಉತ್ತರ ಕನ್ನಡ 79 ಮಿಮೀ, ಚಿಕ್ಕಮಗಳೂರು 78.5 ಮಿ.ಮೀ, ಹಾಸನ 67.5 ಮಿ.ಮೀ, ತುಮಕೂರು 63.5 ಮಿ.ಮೀ, ಚಿತ್ರದುರ್ಗ 55.5 ಮಿ.ಮೀ, ಚಾಮರಾಜನಗರ 36.5 ಮಿ.ಮೀ, ಧಾರವಾಡ 36 ಮಿ.ಮೀ, ಬೆಳಗಾವಿ ಜಿಲ್ಲೆಯಲ್ಲಿ 34.5 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲೆಯ ವರಂಗದಲ್ಲಿ 112 ಮಿ.ಮೀ ಮಳೆಯಾಗಿದ್ದರೆ ನೀರೆಯಲ್ಲಿ 82 ಮಿಮೀ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸರಪಾಡಿಯಲ್ಲಿ 97 ಮಿ.ಮೀ, ಪಡುಪಣಂಬೂರು 85.5 ಮಿಮೀ, ಬೆಳಂದೂರಿನಲ್ಲಿ 83 ಮಿಮೀ ಮಳೆಯಾಗಿದೆ. ಮೈಸೂರಿನ ಕರ್ಪೂರವಳ್ಳಿಯಲ್ಲಿ 93 ಮಿ.ಮೀ ಮಳೆಯಾಗಿದೆ. ಮಂಡ್ಯದ ಮಡುವಿನ ಕೋಡಿಯಲ್ಲಿ 84 ಮಿ.ಮೀ ಮಳೆಯಾಗಿದೆ.
ಕೊಡಗಿನ ವಿರಾಜಪೇಟೆಯಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಇನ್ನು ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ರಾಮನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಬೆಂಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.












Click it and Unblock the Notifications