Karnataka Rain Alert: ಭಾರೀ ಮಳೆ- ಕರಾವಳಿ ಜಿಲ್ಲೆಗಳಿಗೆ ರೆಡ್, ಉತ್ತರ ಕರ್ನಾಟಕಕ್ಕೆ ಯೆಲ್ಲೋ, ನಿಮ್ಮ ಜಿಲ್ಲೆಗೆ ಯಾವ ಅಲರ್ಟ್
ಬೆಂಗಳೂರು, ಜುಲೈ 04: ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದಾದ್ಯಂತ ಅಲರ್ಟ್ ಘೋಷಣೆ ಮಾಡಿದೆ. ನಿನ್ನೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ ಮುನ್ಸೂಚನೆ ಲಭ್ಯವಾಗಿದೆ.
ಕರ್ನಾಟಕದ ಯಾವ ಜಿಲ್ಲೆಗೆ ಯಾವ ಅಲರ್ಟ್?
ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು
ಆರೆಂಜ್ ಅಲರ್ಟ್: ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು
ಯೆಲ್ಲೋ ಅಲರ್ಟ್: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆಗಳು

ಬಂಟ್ವಾಳದಲ್ಲಿ ಶಾಲೆಗಳಿಗೆ ರಜೆ
ದಕ್ಷಿನ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಬಂಟ್ವಾಳದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಜುಲೈ 4 ರಂದು ಮೂಲ್ಕಿ, ಮೂಡುಬಿದಿರೆ ಮತ್ತು ಉಳ್ಳಾಲದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, ತಗ್ಗು ಪ್ರದೇಶಗಳು, ಸರೋವರಗಳು, ನದಿ ದಡಗಳು ಮತ್ತು ಕಡಲ ತೀರಗಳಿಗೆ ಮಕ್ಕಳನ್ನು ಬಿಡದಂತೆ ಪೋಷಕರಿಗೆ ಸೂಚಿಸಲಾಗಿದೆ. ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸನ್ನದ್ಧರಾಗಿ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ತಪ್ಪದೆ ಕೈಗೊಳ್ಳುವಂತೆ ತಿಳಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಚಿಕಿತ್ಸಾ ಕೇಂದ್ರವನ್ನು ಸಿದ್ಧವಾಗಿಡಲು ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಚುರುಕಾದ ಮುಂಗಾರು
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಈಗ ಮುಂಗಾರು ಚುರುಕಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವ ಕಾರಣ, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂಗಾರು ಮಳೆಯಾಗುವ ಮೂಲಕ ರೈತರು ಬಿತ್ತನೆ ಶುರು ಮಾಡಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಒಂದು ಅಥವಾ ಎರಡು ಸಾರಿ ಸಾಧಾರಣ ಮಳೆಯಾಗಲಿದೆ. ಮೇಲ್ಮೈ ಗಾಳಿಯು ಕೆಲವೊಮ್ಮೆ ಪ್ರಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ವಾರ ಭಾರೀ ಮಳೆಯ ಮುನ್ಸೂಚನೆ ನೀಡಿದ್ದರೂ ಸಹ, ವಿಳಂಬವಾದ ಮಾನ್ಸೂನ್ನಿಂದ ಜೂನ್ನಲ್ಲಿ ಬೆಂಗಳೂರು ಮಳೆಯ ಕೊರತೆಯನ್ನು ಕಂಡಿದೆ. ಡೆಕ್ಕನ್ ಹೆರಾಲ್ಡ್ನ ವರದಿಯ ಪ್ರಕಾರ, ಕರ್ನಾಟಕದ ರಾಜಧಾನಿ ಬೆಂಗಳೂರು ಕಳೆದ ಆರು ವರ್ಷಗಳಲ್ಲಿ ಜೂನ್ನಲ್ಲಿ ಅತ್ಯಂತ ಕಡಿಮೆ ಮಳೆಯನ್ನು ಕಂಡಿದೆ.

ಬಿಬಿಎಂಪಿ ಅಲರ್ಟ್
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ವರ್ಷ ಮುಂಗಾರು ಮಳೆಯನ್ನು ನಿಭಾಯಿಸಲು ಸಂಪೂರ್ಣ ಸನ್ನದ್ಧವಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಿರಿನಾಥ್ ಸೋಮವಾರ ವಲಯ ಆಯುಕ್ತರೊಂದಿಗೆ ಸಮನ್ವಯ ಸಮಿತಿ ಸಭೆ ನಡೆಸಿ ಮುಂಗಾರು ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್), ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್ಎಸ್ಬಿ), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ), ಬಿಬಿಎಂಪಿ ಮತ್ತು ಇತರ ಇಲಾಖೆಗಳು ಪ್ರವಾಹದ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಲು ವಾಟ್ಸಾಪ್ ಗ್ರೂಪ್ ರಚಿಸಲಾಗಿದೆ ಎಂದು ಗಿರಿನಾಥ್ ಹೇಳಿದರು.












Click it and Unblock the Notifications