Karnataka Rains: ರಾಜ್ಯದಲ್ಲಿ ಭರ್ಜರಿ ಮಳೆ: ಉತ್ತರ ಕರ್ನಾಟಕದಲ್ಲಿ ಮತ್ತೆ ನೆರೆ ಹಾವಳಿ,ಜನಜೀವನ ಅಸ್ತವ್ಯಸ್ತ
ಹುಬ್ಬಳ್ಳಿ, ಜುಲೈ 25: ಹುಬ್ಬಳ್ಳಿ ಧಾರವಾಡ ಸೇರಿದಂತೆ ಸತತವಾಗಿ ಸುರಿಯುತ್ತಿರುವ ಪುಷ್ಯ ಮಳೆಯಿಂದ ಕೃಷ್ಣಾ, ದೂಧಗಂಗಾ, ವೇದಗಂಗಾ, ತುಂಗಭದ್ರಾ, ವರದಾ ನದಿಗಳು ಅಪಾಯದ ಮಟ್ಟ ಮೀರಿ ಆರ್ಭಟಿಸುತ್ತಿವೆ. ಮುಂಜಾಗ್ರತೆ ಕ್ರಮವಾಗಿ ನದಿ ತೀರದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ( ಎನ್ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದೆ.
ರಾಜ್ಯದಲ್ಲಿ ಭರ್ಜರಿಯಾಗಿ ಸುರಿಯುತ್ತಿರುವ ಮಳೆ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಯಲ್ಲಾಪುರ ತಾಲೂಕಿನ ಕಬ್ಬಿನಗದ್ದೆಯ ವಿನಯ ಮಂಜುನಾಥ ಗಾಡಿಗ (25) ಮರ ಬಿದ್ದು ಮೃತಪಟ್ಟಿದ್ದಾರೆ. ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಡ್ಯಾಂನಲ್ಲಿ ಈಜಲು ಹೋಗಿದ್ದ ಮುಡಸಾಲಿ ಗ್ರಾಮದ ಶ್ರೀಕಾಂತ ಹರಿಜನ (20) ನೀರು ಪಾಲಾಗಿದ್ದರೆ, ಮುದ್ದೇಬಿಹಾಳ ತಾಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಮಂಜುನಾಥ ಮಾದರ (28) ಮೃತದೇಹ ಯಾದಗಿರಿ ಜಿಲ್ಲೆ ಹೊರಟ್ಟಿ ಗ್ರಾಮದ ಕಾಲುವೆಯಲ್ಲಿ ಬುಧವಾರ ದೊರಕಿದೆ.

ಬೆಳಗಾವಿ ಜಿಲ್ಲೆಯಲ್ಲಿ 22, ಮಹಾಲಿಂಗಪುರ ತಾಲೂಕಿನಲ್ಲಿ 3 ಸೇತುವೆಗಳು ಮುಳುಗಡೆಯಾಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ನದಿ ತೀರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳು ಜನವಸತಿ ಪ್ರದೇಶಗಳಿಗೆ ನುಗ್ಗಿದೆ.
ಮೂಡಲಗಿ ತಾಲೂಕಿನ ಘಟಪ್ರಭಾ ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಿದೆ. ಬೆಳಗಾವಿ ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಬೋಟ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ 2.02 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ಗಡ್ಡೆಗೊಳ್ಳಿ ಬಸವೇಶ್ವರ ದೇವಸ್ಥಾನ ಮುಳಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಜತೆ ಗಾಳಿಯೂ ಜೋರಾ ಗಿದೆ. ಶಿರಸಿ-ಮತ್ತಿಘಟ್ಟ ಮಾರ್ಗವಾಗಿ ಅಂಕೋಲಾಕ್ಕೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗಿ ಸಂಚಾರ ಸ್ಥಗಿತವಾಗಿದೆ. ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ. ಅಘನಾಶಿನಿ, ಗಂಗಾವಳಿ, ವರದಾ ಉಕ್ಕೇರಿದ್ದು, ತೀರ ಪ್ರದೇಶದಲ್ಲಿ ನೆರೆ ಭೀತಿ ಎದುರಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆ ಕಡಿಮೆಯಾದರೂ ನದಿಗಳ ಅಬ್ಬರ ಇನ್ನೂ ತಗ್ಗಿಲ್ಲ.












Click it and Unblock the Notifications