Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ
ಸೆಪ್ಟೆಂಬರ್ ಆರಂಭದಿಂದಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ತಿಂಗಳು ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ, ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನೆರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ದೇವಗಿರಿಯಲ್ಲಿ 165.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಭಾರಿ ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹಳದೀಪುರ 132.5 ಮಿ.ಮೀ, ಕಡ್ಲೆ 130.5 ಮಿ.ಮೀ, ಕಡತೋಕ 127 ಮಿ.ಮೀ, ಚಂದಾವರ 109.5 ಮಿ.ಮೀ ಮಳೆಯಾಗಿದೆ.
ಜಿಲ್ಲಾವಾರು ಮಳೆ ವಿವರ
ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ 165.5 ಮಿ.ಮೀ, ದಕ್ಷಿಣ ಕನ್ನಡ 103 ಮಿ.ಮೀ, ಶಿವಮೊಗ್ಗ 56.5 ಮಿ.ಮೀ, ಉಡುಪಿ 54.5 ಮಿ.ಮೀ, ಕೊಡಗು 43.5 ಮಿ.ಮೀ, ಹಾಸನ 38 ಮಿ.ಮೀ., ಚಿಕ್ಕಮಗಳೂರು 34.5 ಮಿ.ಮೀ. ಮಳೆಯಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್, ಹಾವೇರಿ, ಮೈಸೂರು, ವಿಜಯನಗರ, ಬೆಂಗಳೂರು ನಗರ, ಮಂಡ್ಯ, ಕಲಬುರಗಿ, ಹಾಸನ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಗದಗ, ಕೋಲಾರ, ದಾವಣಗೆರೆ, ಧಾರವಾಡ, ಬಾಗಲಕೋಟೆ, ಚಿಕ್ಕಬಳ್ಳಾಪುರ, ಕೊಪ್ಪಳ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಉತ್ತಮ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ಕೂಡ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶುಕ್ರವಾರ ಮಧ್ಯಾಹ್ನವೇ ನಗರದ ಹಲವು ಭಾಗಗಳಲ್ಲಿ ಮಳೆ ಶುರುವಾಗಿದ್ದು, ರಾತ್ರಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications