Karnataka Rain: ಗುಡುಗು, ಸಿಡಿಲು ಸಹಿತ ಅಬ್ಬರದ ಮಳೆಯಿಂದ ರಾಜ್ಯದ ಹಲವೆಡೆ ಸಂಭವಿಸಿದ ಅವಾಂತರಗಳಿವು?
Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪರೂಪಕ್ಕೆ ಅಬ್ಬರದ ಮಳೆಯಾಗಿದೆ. ಇನ್ನು ನಿನ್ನೆ (ಏಪ್ರಿಲ್ 21) ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ಹಾಗಾದರೆ ಎಲ್ಲೆಲ್ಲಿ ಏನಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆಯೂ ನಿನ್ನೆ (ಏಪ್ರಿಲ್ 20) ಮಧ್ಯಾಹ್ನ 3:30ರ ಸುಮಾರಿಗೆ ಗುಡು ಸಹಿತ ಮಳೆಯಾಗಿದ್ದು, ಇಷ್ಟು ದಿನ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರ ಮುಖದಲ್ಲಿ ತುಸು ಮಂದಹಾಸ ಮೂಡಿದಂತಾಗಿದೆ. ಇನ್ನು ಇಂದು (ಏಪ್ರಿಲ್ 21) ಬೆಳಗ್ಗೆಯಿಂದಲೂ ಬಿಸಿಲಿನ ವಾತಾವರಣ ಇದ್ದು, ಮಧ್ಯಾಹ್ನ ಮೋದ ಕವಿದ ವಾತಾವರಣ ನಿರ್ಮಾಣವಾಗಿ, ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಎನ್ನುವ ಮುನ್ಸೂಚನೆ ಇದೆ.

ಅದರಲ್ಲೂ ರಾಜ್ಯದಲ್ಲಿ ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದ್ದುದು ಕಲಬುರಗಿಯಲ್ಲಿ. ಈ ಜಿಲ್ಲೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದು, ಜನರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ. ನಿನ್ನೆ (ಏಪ್ರಿಲ್ 20) ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆರಾಯ ಅಬ್ಬರಿಸಿದ್ದು, ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ. ಮತ್ತೊಂದೆಡೆ ಜಮೀನಿನಿಂದ ಎತ್ತಿನ ಗಾಡಿಯಲ್ಲಿ ಮನೆಗೆ ವಾಪಾಸ್ಸಾಗುತ್ತಿದ್ದಾಗ ಸಿಡಿಲು ಬಡಿದು ಮಹೇಶ್ ಎಂಬಾತ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಕಾಲಿಕ ಮಳೆಯಿಂದಾಗಿ, ಆಳಂದ ತಾಲೂಕಿನಲ್ಲಿ ಹಲವು ಅವಾಂತರ ಸೃಷ್ಟಿಯಾಗಿದೆ. ಒಂದೂ ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಗಾಳಿ ಸಹಿತ ಮಳೆಗೆ ಬೈಕ್ಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ. ಇನ್ನು ಕಲಬುರಗಿಯ ಖಜೂರಿ ಬಳಿ ಬಿರುಗಾಳಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಅಷ್ಟೇ ಅಲ್ಲದೆ, ಬಿರುಗಾಳಿ ಸಹಿತ ಮಳೆಯಿಂದಾಗಿ ಮರಗಳು ಕೂಡ ಧರೆಗುರುಳಿವೆ ಎಂದು ತಿಳಿದುಬಂದಿದೆ.
ಬಿರುಗಾಳಿ ಸಹಿತ ಭಾರೀ ಮಳೆಗೆ ವಿಜಯನಗರದ ಕೊಟ್ಟೂರಿನಲ್ಲಿ ಮನೆ ಮೇಲ್ಛಾವಣಿ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಹಲವೆಡೆಯೂ ಬಿರುಗಾಳಿ ಸಹಿತ ಮಳೆ ಸುರಿದಿದೆ. ಜಕ್ಕಳ್ಳಿ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ಇನ್ನು ಹಾಸನದ ಸಕಲೇಶಪುರದಲ್ಲಿ ಭಾರೀ ಮಳೆಯಿಂದಾಗಿ ಬೃಹತ್ ಮರವೊಂದು ಉರುಳಿ ಮನೆ ಬಿದ್ದ ಘಟನೆಯೂ ನಡೆದಿದೆ.
ರಣಭೀಕರ ಮಳೆಗೆ ಬೀದರ್ನಲ್ಲಿ ರಸ್ತೆಗಳೆಲ್ಲ ಕೆರೆಯಂತೆ ಮಾರ್ಪಟ್ಟಿದ್ದವು. ರಸ್ತೆಗೆ ಮರಗಳು, ವಿದ್ಯುತ್ ಕಂಬಗಳು ಉರುಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಮಲೆನಾಡಿನ ಹೆಬ್ಬಾಗಿಲು ಅಂತಲೇ ಹೆಸರುವಾಸಿಯಾಗಿರುವ ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಭಾರೀ ಮಳೆಯಿಂದಾಗಿ ಮನೆ ಕುಸಿದುಬಿದ್ದರುವ ಘಟನೆ ನಡೆದಿದೆ. ಇನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಅಕಾಲಿಕ ಮಳೆಯಿಂದಾಗಿ ತೋಟಗಾರಿಕಾ ಬೆಳೆಗಳು ನಾಶವಾಗಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಈ ವೇಳೆ ಬೋಟ್ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ನಡೆದಿದೆ. ಹಾಗೆಯೇ ನಿನ್ನೆ ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಅಬ್ಬರದ ಮಳೆಯಾಗಿದ್ದು, ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ತುಸು ನೆಮ್ಮದಿ ಸಿಕ್ಕಂತಾಗಿದೆ.












Click it and Unblock the Notifications