Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರಿ ಮಳೆ!
ಆಗಸ್ಟ್ ತಿಂಗಳಿನಲ್ಲಿ ಕೈಕೊಟ್ಟಿದ್ದ ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಚುರುಕಾಗುವ ಲಕ್ಷಣ ತೋರಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 30, 31ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಆಗಸ್ಟ್ 30ರಂದು ಬುಧವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ ಶಿವಮೊಗ್ಗ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಮತ್ತು ಬಳ್ಳಾರಿ, ವಿಜಯನಗರ, ದಾವಣಗೆರೆ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಿದೆ.
ಸೆಪ್ಟಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ!
ಜುಲೈ ತಿಂಗಳಲ್ಲಿ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ನಂತರ ಆಗಸ್ಟ್ ತಿಂಗಳಿನಲ್ಲಿ ಸಂಪೂರ್ಣವಾಗಿ ಕೈಕೊಟ್ಟಿತ್ತು. ಹಲವು ಜಲಾಶಯಗಳು ಭರ್ತಿಯಾಗುತ್ತವೆ ಎಂದುಕೊಳ್ಳುವಾಗಲೇ ಮಳೆ ಕೈಕೊಟ್ಟ ಕಾರಣ, ಬೆಳೆಗಳಿಗೂ ನೀರು ಇರದ ಪರಿಸ್ಥಿತಿ ಉಂಟಾಗಿತ್ತು. ಮಳೆ ತಡವಾದ ಕಾರಣ ಮುಂಗಾರು ಬಿತ್ತನೆ ಪ್ರಮಾಣ ಕಡಿಮೆಯಾಗಿತ್ತು, ನಂತರ ಬಂದ ಮಳೆ ನಂಬಿ ಹಲವರು ಬಿತ್ತನೆ ಮಾಡಿದರು, ಆಗಸ್ಟ್ನಲ್ಲಿ ಮಳೆ ಕೈಕೊಟ್ಟ ಕಾರಣ ಬೆಳೆ ನಷ್ಟವಾಗಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಎ.ಪ್ರಸಾದ್ ಹೇಳಿದ್ದಾರೆ. ಆಗಸ್ಟ್ 30, 31ರಂದು ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಶುಕ್ರವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಬೆಂಗಳೂರು ಹವಾಮಾನ
ಬೆಂಗಳೂರು ನಗರದಲ್ಲಿ ಮಳೆ ಕೈಕೊಟ್ಟಿದ್ದು ಬಿಸಿಲಿಗೆ ಜನ ಕಂಗೆಟ್ಟಿದ್ದಾರೆ. ಕಳೆದ ಒಂದು ದಶಕದಲ್ಲೇ ಆಗಸ್ಟ್ ತಿಂಗಳಲ್ಲಿ ಹೆಚ್ಚು ಬಿಸಿಲು ಇದ್ದು, 30 ಡಿಗ್ರಿ ಸೆಲ್ಸಿಯಸ್ ಸರಾಸರಿ ತಾಪಮಾನ ದಾಖಲಿಸಿದೆ. ಬುಧವಾರ ನಗರದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವಾರಣ ಇದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಸೆಪ್ಟಂಬರ್ 2 ಮತ್ತು 3ನೇ ವಾರದಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಿದ್ದು, ಕೆಆರ್ ಎಸ್ ಜಲಾನಯನದ ಪ್ರದೇಶದ ರೈತರಿಗೆ ಶುಭ ಸುದ್ದಿ ಸಿಕ್ಕಂತಾಗಿದೆ.












Click it and Unblock the Notifications