Karnataka Rain: ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ
ಜುಲೈನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್ನಲ್ಲಿ ಕೈಕೊಟ್ಟಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಅಬ್ಬರಿಸುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್ 2 ಮತ್ತು ಮೂರನೇ ವಾರ ರಾಜ್ಯದಲ್ಲಿ ಮಳೆ ಮತ್ತೆ ಚುರುಕಾಗಲಿದೆ ಎಂದು ವರದಿಯಲ್ಲಿ ಹೇಳಿದೆ.
ಸೋಮವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಹಾಸನ, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಧಾರವಾಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಬಳ್ಳಾರಿ, ದಾವಣಗೆರೆ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ 28ರಂದು ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹೊಸಕೋಟೆಯಲ್ಲಿ 62 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಮಳೆ ಮತ್ತಷ್ಟು ಚುರುಕಾಗುವ ಸಾಧ್ಯತೆ ಇದೆ.
ಸೆಪ್ಟೆಂಬರ್ 2 ಮತ್ತು 3ನೇ ವಾರ ಮಳೆ ಆರ್ಭಟ
ಸೆಪ್ಟೆಂಬರ್ನಲ್ಲಿ ರಾಜ್ಯದಲ್ಲಿ ಮಳೆ ಚುರುಕುಗೊಳ್ಳುವ ಲಕ್ಷಣ ಕಾಣಿಸುತ್ತಿದೆ . ಪಶ್ಚಿಮ ಹಿಂದೂ ಮಹಾಸಾಗರದಲ್ಲಿ ಮಳೆಯ ಮಾರುತಗಳು ವೇಗವಾಗಿ ಅಭಿವೃದ್ಧಿಯಾಗುತ್ತಿವೆ ಎಂದು ಹೇಳಲಾಗಿದೆ. ಆಗಸ್ಟ್ನಲ್ಲಿ ಮಳೆ ಕೊರತೆಯಾದರೂ ಸೆಪ್ಟಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಸೆಪ್ಟೆಂಬರ್ 2 ಮತ್ತು 3ನೇ ವಾರದಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಕೂಡ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು, ನೆಮ್ಮದಿ ಮೂಡಿಸಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಆಗಸ್ಟ್ ತಿಂಗಳಲ್ಲಿ ಮಳೆ ಕೊರತೆ
ಜುಲೈ ತಿಂಗಳಿನಲ್ಲಿ ರಾಜ್ಯದ ಮಲೆನಾಡು, ಕರಾವಳಿ, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾದ ಕಾರಣ ಹಲವು ಜಲಾಶಯಗಳು ಭರ್ತಿಯಾಗುತ್ತವೆ ಎಂದು ಭಾವಿಸಲಾಗಿತ್ತು, ಆದರೆ ನಂತರ ಆಗಸ್ಟ್ ತಿಂಗಳಲ್ಲಿ ಸಂಪೂರ್ಣವಾಗಿ ಮಳೆ ಕೈಕೊಟ್ಟ ಕಾರಣ ಮತ್ತೆ ನೀರಿನ ಅಭಾವ ಎದುರಾಗಿದೆ.
ರಾಜ್ಯದ ಬಹುತೇಕ ಅನಿಶ್ಚಿತ ಮಳೆಯಿಂದಾಗಿ ಮುಂಗಾರು ಕೃಷಿ ಮೇಲೆ ಭಾರಿ ಹೊಡೆತ ಬಿದ್ದಿದೆ. ರಾಜ್ಯದಲ್ಲಿ 100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.












Click it and Unblock the Notifications