Monsoon Rain: ರಾಜ್ಯದಲ್ಲಿ ಚುರುಕುಗೊಳ್ಳುತ್ತಿದೆ ಮಳೆ! ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ
ತಡವಾಗಿಯಾದರೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣ ಕಾಣಿಸುತ್ತಿದೆ. ಅಕ್ಟೋಬರ್ 9 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಭಾನುವಾರವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ.
ಭಾನುವಾರ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಲ್ಲಿ ಚದುರಿದಂತೆ ಉತ್ತಮ ಮಳೆಯಾಗುತ್ತಿದೆ. ಸುಬ್ರಹ್ಮಣ್ಯ, ಕಾರ್ಕಳ, ಧರ್ಮಸ್ಥಳ, ಸೋಮವಾರಪೇಟೆ, ಮಡಿಕೇರಿ, ಮೂಡಬಿದ್ರಿ, ಹೊರನಾಡು, ಕೊಪ್ಪ, ಶೃಂಗೇರಿ, ಕುರಿಂಜಾಲ ಬೆಟ್ಟದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ವರದಿಯಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಮತ್ತು ಕೆಜಿಎಫ್ ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಕೂಡ ಮೋಡ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 9ರಿಂದ 22ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಪೂರಕ ಎನ್ನುವಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತೆ ಶುರುವಾಗಿದೆ.
ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ
ಕೊಡಗು, ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹಲವು ಜಿಲ್ಲೆಗಳ ಮಳೆ ವಿವರ
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಲಕ್ಕೂರು ಎನ್ನುವಲ್ಲಿ 75 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಹಾಸನ ಜಿಲ್ಲೆಯ ಬಸವಪಟ್ಟಣ, ಅಗ್ರಹಾರ, ರುದ್ರಪಟ್ಟಣ, ಬಿರದಹಳ್ಳಿ, ನರ್ವೆಪೇಟೆ, ಕಾಳೇನಹಳ್ಳಿ, ಬೆಳವಾಡಿ, ಗಂಗೂರು, ಬರಗೂರು ಎನ್ನುವಲ್ಲಿ ಉತ್ತಮ ಮಳೆಯಾಗಿದೆ.
ಮೈಸೂರು ಜಿಲ್ಲೆಯ ಗೋವಿಂದನಹಳ್ಳಿ, ಚಕ್ಕೋಡನಹಳ್ಳಿ, ಪುದುಕೋಟೆಕಾವಲ್, ಹೆಗ್ಗಡದೇವನಕೋಟೆ, ಚಂಕಲ್ ಕಾವಲ್, ಚೆನ್ನಮ್ಮಗೆರೆ, ಬೆಳ್ತೂರು, ಉಮ್ಮತ್ತೂರು, ಕೆಂಪಸಿದ್ದನಹುಂಡಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ಮಡಿಕೇರಿ, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸ್ವಲ್ಪ ಸಮಾಧಾನ ತರಿಸಿದೆ. ಮಳೆ ಹೀಗೆ ಮುಂದುವರೆದರೆ ಕಾವೇರಿ ಜಲಾನಯ ವ್ಯಾಪ್ತಿಯಲ್ಲಿರುವ ಜಲಾಶಯಗಳ ಒಳಹರಿವು ಹೆಚ್ಚಾಗಲಿದ್ದು ಸಂಕಷ್ಟ ಕಡಿಮೆಯಾಗಲಿದೆ. ಮುಂಗಾರು ಸಂಪೂರ್ಣವಾಗಿ ಕೈಕೊಟ್ಟ ಕಾರಣ, ಕೃಷಿ, ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿನ ಮೇಲೂ ಪರಿಣಾಮ ಬೀರಿದೆ.












Click it and Unblock the Notifications