Karnataka Rain: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ
ಮಂಗಳೂರು, ಏಪ್ರಿಲ್, 20: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದ್ದು, ಬಿಸಿಲಿನ ಬೇಗೆಗೆ ಬೆಂದಿದ್ದ ಜನರ ಮುಖದಲ್ಲಿ ಸಂತಸ ಮೂಡಿದಂತಾಗಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಮಳೆರಾಯ ನಿನ್ನೆಯಿಂದ ಅಬ್ಬರಿಸುತ್ತಿದ್ದಾನೆ. ಇನ್ನು ಇಂದು (ಏಪ್ರಿಲ್ 20) ಕೂಡ ಈ ಎರಡು ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗಿದೆ.
ಹಾಗೆಯೇ ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಮಳೆಯಾಗಿದ್ದು, ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಜಿಲ್ಲೆಯ ಭಟ್ಕಳದ ಮಾವಿನಕುರ್ವಾ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದ್ದು, ಈ ವೇಳೆ 4 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಬೆಳಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಇನ್ನೊಂದು ಬೋಟ್ನವರಿಂದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಇನ್ನು ಬೋಟ್ ದುರ್ಘಟನೆಯಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಇಂದು (ಏಪ್ರಿಲ್ 20) ಬೆಳ್ಳಂಬೆಳಗ್ಗೆಯೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಇಲ್ಲಿನ ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಗುರುವಾರ ರಾತ್ರಿ ಮತ್ತು ಶುಕ್ರವಾರ ಮುಂಜಾನೆ ಮಂಗಳೂರು, ಸುರತ್ಕಲ್ ಮತ್ತು ಬೆಳ್ತಂಗಡಿ ಹೊರವಲಯದಲ್ಲಿ ಸಾಧಾರಣ ಮಳೆಯಾಗಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ ಸುಳ್ಯ, ಕಡಬ, ಬೆಳ್ತಂಗಡಿಯ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು, ಬಂಟ್ವಾಳ, ಪುತ್ತೂರಿನ ಕೆಲವೆಡೆ ಸಾಧಾರಣ ಮಳೆಯಾಗಿದ್ದು, ಈ ಭಾಗದಲ್ಲಿ ಮುಂಜಾಗ್ರತೆಗಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗಿದೆ. ಅಲ್ಲದೆ ಇದೇ ವೇಳೆ ಚಾರ್ಮಾಡಿ, ನೆರಿಯ, ಮುಂಡಾಜೆ, ಉಜಿರೆ, ಗುರಿಪಾಳ್ಯ, ಗೇರುಕಟ್ಟೆ, ತೋಟತ್ತಾಡಿ, ಚಿಬಿದ್ರೆ, ದಿಡುಪೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.
ಚಾರ್ಮಾಡಿಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ನೆರಿಯದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಉಜಿರೆ ಮತ್ತು ಧರ್ಮಸ್ಥಳದಲ್ಲಿ ತುಂತುರು ಮಳೆಯಾಗಿದೆ. ಅಲ್ಲದೇ ಇಂದು ಸಹ ಉಡುಪಿ ನಗರದಲ್ಲಿಯೂ ಮಳೆಯ ಅಬ್ಬರ ಮುಂದುವರೆದಿದೆ. ಬೆಳಗಿನ ಜಾವ ಸುರಿದ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ.
ಉಡುಪಿ ನಗರ ಪಾಲಿಕೆ ವ್ಯಾಪ್ತಿಯ ಕಾಡಬೆಟ್ಟು ವ್ಯಾಪ್ತಿಯ ರಮ್ಮಣ್ಣ ಶೆಟ್ಟಿ ಬಡಾವಣೆಯಲ್ಲಿ ಭಾರೀ ಮಳೆ ಹಿನ್ನೆಲೆ ಚರಂಡಿ ದುರಸ್ತಿ ಕಾಮಗಾರಿ ನಿಂತಿದ್ದು, ರಸ್ತೆ ತೀವ್ರ ಹದಗೆಟ್ಟಿದೆ. ಮತ್ತೊಂದೆಡೆ ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್-ಸೀತು-ಸೋಮಂತಡ್ಕ ಮಾರ್ಗದಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ ಕಾಮಗಾರಿಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಅಂಬಡ್ತ್ಯಾರು ಬಳಿ ರಸ್ತೆಯಲ್ಲಿ ಟ್ಯಾಂಕರ್ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಏಕಾಏಕಿ ಸುರಿದ ಮಳೆಯಿಂದ ಕಡಬುಎಟ್ಟು ಪ್ರದೇಶದಲ್ಲಿ ನಡೆಯುತ್ತಿರುವ ಚರಂಡಿ ದುರಸ್ತಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಕಾಮಗಾರಿ ಸ್ಥಳಕ್ಕೆ ಮಳೆ ನೀರು ನುಗ್ಗಿ ರಸ್ತೆಗೆ ಅಪಾರ ಹಾನಿಯಾಗಿದೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿಬಿಟ್ಟಿದೆ.
ಹವಾಮಾನ ಇಲಾಖೆ ಪ್ರಕಾರ, ಮುಂದಿನ ಮೂರು ದಿನಗಳ ಕಾಲವೂ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆಯಲಿದ ಎಂದು ಮುನ್ಸೂಚನೆ ಇದೆ. ಭಾರೀ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಏಪ್ರಿಲ್ 20 ಮತ್ತು 21ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications