Karnataka rain: ಭಾರೀ ಮಳೆ ಹಿನ್ನೆಲೆ ಮೂರು ಜಿಲ್ಲೆಗಳಿಗೆ "ಆರಂಜ್" ಹಾಗೂ ಇನ್ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕ, ಸೆಪ್ಟೆಂಬರ್, 29: ಜುಲೈ ತಿಂಗಳಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಜನರು ತತ್ತರಿಸಿ ಹೋಗಿದ್ದರು. ನಂತರ ಆಗಸ್ಟ್ ಆರಂಭದಿಂದ ಸೆಪ್ಟೆಂಬರ್ ಮುಗಿಯುತ್ತಾ ಬಂದರೂ ಮಳೆಯಿಲ್ಲದ ಕಾರಣ ಈಗಾಗಲೇ ಹಲವು ಜಿಲ್ಲೆಗಳ ರೈತರು ಬಿಸಿಲಿನ ಬೇಗೆಯಿಂದ ಬೆಂದು ಹೋಗಿದ್ದಾರೆ. ಮತ್ತೊಂದೆಡೆ ಇಂದು ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನು ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು (ಸೆಪ್ಟೆಂಬರ್ 29) ರಾಜ್ಯದ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ತಲಾ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದರೆ, ಬೆಳಗಾವಿ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45 ಕಿಲೋ ಮೀಟರ್ನಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳಗೆ ಮಳೆರಾಯ ಅಬ್ಬರಿಸಿದ ಬೊಬ್ಬೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಚಿಕ್ಕಮಗಳೂರು, ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಜಿನುಗು ಮಳೆಯಾಗಿದೆ. ಇನ್ನು ಗುರುವಾರ ಬೆಳಗ್ಗೆ 8:30ಕ್ಕೆ ಅನ್ವಸಯಿಸಿದಂತೆ 24 ಗಂಟೆಗಳಲ್ಲಿ ಪಣಂಬೂರು, ಉಡುಪಿಯ ಕಾರ್ಕಳ, ಕೋಟ ಹಾಗೂ ಗದಗ ಜಿಲ್ಲೆಯ ನರಗುಂದದಲ್ಲಿ ಗರಿಷ್ಠ (ತಲಾ 5 ಸೆಂಟಿ ಮೀಟರ್ ಮಳೆ ಸುರಿದಿದ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications