Karnataka Rain: ಆಗಸ್ಟ್ 20ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣಾರ್ಭಟದ ಮುನ್ಸೂಚನೆ
ಕರ್ನಾಟಕ, ಆಗಸ್ಟ್, 16: ಜುಲೈ ತಿಂಗಳಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗಿ ನದಿ, ಕೆರೆ, ಜಲಾಶಯಗಳ ಮಟ್ಟ ಏರಿಕೆಯಾಗಿತ್ತು. ಆದರೆ ಆಗಸ್ಟ್ ತಿಂಗಳಿನಲ್ಲಿ ಮಳೆರಾಯನ ಆರ್ಭಟ ಸದ್ದಡಗಿದ್ದು, ಕಳೆದ ಎರಡು-ಮೂರು ವಾರಗಳಿಂದಲೂ ಬಿಸಿಲಿನ ವಾತಾವರಣ ಮುಂದುವರೆದಿದೆ. ಇನ್ನು ಹವಾಮಾನ ಇಲಾಖೆಯು ಆಗಸ್ಟ್ 20ರಿಂದ ರಾಜ್ಯದ ಹಲವೆಡೆ ಭಾರೀ ಮಳೆಯಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಆಗಸ್ಟ್ 20 ರಿಂದ ಮುಂಗಾರು ಮತ್ತೇ ಚುರುಕು ಪಡೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಕರಾವಳಿ ಭಾಗದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ ಮಳೆರಾಯ ಅಬ್ಬರಸಿ ಬೊಬ್ಬೆರೆದು ದೊಡ್ಡ ದೊಡ್ಡ ಅನಾಹುತಗಳನ್ನೇ ಸೃಷ್ಟಿಸಿದ್ದ. ಆದರೆ ಆಗಸ್ಟ್ ತಿಂಗಳಿನಲ್ಲಿ ಮಳೆಯೇ ಇಲ್ಲದಂತಾಗಿದ್ದು, ಇಲ್ಲಿ ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. 2 ವಾರದ ಬಿಸಿಲಿನ ತಾಪಮಾನಕ್ಕೆ ಬೇಸತ್ತ ಇಲ್ಲಿನ ಜನ ಇದೀಗ ಮಳೆರಾಯನ ಆಗಮನಕ್ಕೆ ಕಾದುಕುಳಿತಿದ್ದಾರೆ.
ಬರೀ ಕರಾವಳಿ ಜಿಲ್ಲೆಯಲ್ಲಿ ಅಷ್ಟೇ ಅಲ್ಲದೆ ಇದೀಗ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಇಲ್ಲದೇ ಬಿಸಿಲಿನ ತಾಪಮಾನಕ್ಕೆ ಜನರು ಬೇಸತ್ತು ಹೋಗಿದ್ದಾರೆ. ಜೊತೆಗೆ ಮುಂಗಾರು ನಂಬಿಕೊಂಡು ಬೆಳೆದಿದ್ದ ಬೆಳೆಗಳೆಲ್ಲ ಸೂರ್ಯನ ಶಾಖಕ್ಕೆ ಮುದುಡಿಹೋಗುತ್ತಿದ್ದು, ಇದರಿಂದ ಅನ್ನದಾತ ಆತಂಕಕ್ಕೆ ಒಳಗಾಗಿದ್ದಾನೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಅಬ್ಬರಿಸುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಆಗಸ್ಟ್ 20ರ ಬಳಿಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹಾಗೆಯೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಮಂಗಳವಾರ (ಆಗಸ್ಟ್ 15) ಬೆಳಗ್ಗೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಬಿಸಲಿನ ವಾತಾವರಣ ಮುಂದುವರೆದಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಎಚ್ಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಈ ವರ್ಷ ಮುಂಗಾರು ದುರ್ಬಲಗೊಂಡು ಮಳೆ ಕೊರತೆ ರಾಜ್ಯದ ಜನರನ್ನಯ ಕಾಡುತ್ತಿದೆ.
ಜುಲೈನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ ಅನ್ನದಾತ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ ಆಗಸ್ಟ್ನಲ್ಲಿ ಮತ್ತೆ ಮಳೆ ಅಭಾವ ಎದುರಾಗುದೆ. ಬಿತ್ತಿದ ಬೆಳೆಗಳಿಗೆ ಮಳೆ ಕೊರತೆ ಉಂಟಾಗಿದ್ದು, ಬಹಳಷ್ಟು ಕಡೆಗಳಲ್ಲಿ ಫಸಲು ಒಣಗುತ್ತಿವೆ.
ಇನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕಳೆದ ಒಂದು ವಾರದಲ್ಲಿ ಶಕಡಾ 70ರಷ್ಟು ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. ಈ ವಾರದಲ್ಲಿ 56.3 ಮಿಲಿ ಮೀಟರ್ ವಾಡಿಕೆ ಮಳೆ ಪ್ರಮಾಣ ಇದೆ. ಆದರೆ ಕೇವಲ 16.8 ಮಿಲಿ ಮೀಟರ್ನಷ್ಟು ಮಳೆಯಾಗಿದೆ ಎಂದು ತಿಳಿದುಬಂದಿದೆ.
ಒಟ್ಟಿನಲ್ಲಿ ಒಂದು ವೇಳೆ ಆಗಸ್ಟ್ 20ರ ಮೇಲೂ ಮಳೆರಾಯ ಕರುಣೆ ತೋರದಿದ್ದರೆ ಅನ್ನದಾತ ಬೆಳೆದ ಬೆಳೆಗಳೆಲ್ಲವೂ ಸೂರ್ಯನ ಒಡಲಿಗೆ ಬೀಳುವುದಂತೂ ನಿಶ್ಚಿತ ಎನ್ನುವಂತಾಗಿದೆ.












Click it and Unblock the Notifications