Karnataka Rain: ಧಾರವಾಡ ಸೇರಿ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ
ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿತ್ತು, ಆದರೆ ಇಂದು (ಶನಿವಾರ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಳೆಯಾಗುತ್ತಿದೆ.
ಶನಿವಾರ ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ತಿಂಗಳ ಅಂತ್ಯದ ವೇಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ವಾರಾಂತ್ಯದಲ್ಲಿ ತಂಪೆರೆದ ಮಳೆ
ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಉತ್ತರ ಭಾಗದ ಬೆಟ್ಟದಳ್ಳಿ, ಹೆಗ್ಗುಳ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮಳೆಯಾಗಿದೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಒಂದೂವರೆ ಗಂಟೆಗಳಿಗೂ ಹೆಚ್ಚಿನ ಕಾಲ ಮಳೆ ಸುರಿದಿದ್ದು, ಬಿಸಿಲಿನಿಂದ ಕಾದಿದ್ದ ಭೂಮಿ ತಂಪಾಗಿದೆ.
ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಘಟ್ಟಪ್ರದೇಶಗಳಲ್ಲಿ ಮಳೆಯಾಗುತ್ತಿರುವುದು ನೆಮ್ಮದಿ ತಂದಿದೆ. ಕೊಡಗು ಜಿಲ್ಲೆಯ ಜಂಬೂರು, ನಾಪೊಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಮಡಿಕೇರಿ, ಪೆರಿಯಾಪಟ್ಟಣ, ತಿತಿಮತಿ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಿದೆ.
ಮೂಡಿಗೆರೆಲ್ಲಿ ಮಳೆ 🙏
— Naveen Reddy (@navin_ankampali) March 22, 2024
It’s raining 🌧️ today as well in isolated parts of Chikkamagalur and Udupi. pic.twitter.com/sYBhtBcGyM
ಮೈಸೂರು ಜಿಲ್ಲೆಯ ಕೃಷ್ಣರಾಜನಗರ, ಸಾಲಿಗ್ರಾಮ, ಹುಣಸೂರು ಸೇರಿದಂತೆ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ. ಇನ್ನೂ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಶನಿವಾರ ರಾತ್ರಿ ಮತ್ತು ಭಾನುವಾರ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆ
ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಶನಿವಾರ ಕೂಡ ಶೃಂಗೇರಿಯಲ್ಲಿ ಉತ್ತಮ ಮಳೆಯಾಗಿದೆ. ಮೂಡಿಗೆರೆಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಹೇಮಾವತಿ ಜಲಾನಯನ ಪ್ರದೇಶದಲ್ಲಿ ವರ್ಷದ ಮೊದಲ ಮಳೆಯಾಗಿದೆ.
Finally It is raining here in Dharwad 😍@ravikeerthi22 #karnatakaRains #dharwad #hubli pic.twitter.com/HLwsPHzDRs
— suraj (@surajcoolkarni) March 23, 2024
ಧಾರವಾಡ ಜಿಲ್ಲೆಯಲ್ಲಿ ಮೊದಲ ಮಳೆ
ಇನ್ನು ಧಾರವಾಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯಾಗಿದೆ. ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದರೂ, ಕೊನೆಗೂ ಶನಿವಾರ ಮಳೆರಾಯ ನಗರದ ಜನತೆಗೆ ದರ್ಶನ ನೀಡಿದ್ದಾನೆ.
ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ ಮೊದಲ ಮತ್ತು ಎರಡನೇ ವಾರ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಕೂಡ ಮಾರ್ಚ್ ಅಂತ್ಯದ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ನಗರದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದೆ. ಆದಷ್ಟು ಬೇಗನೆ ಬೆಂಗಳೂರಿಗೂ ಮಳೆ ಬರಲಿ ಎಂದು ಜನ ಪ್ರಾರ್ಥನೆ ಮಾಡುತ್ತಿದ್ದಾರೆ.












Click it and Unblock the Notifications