Karnataka Rain: ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು
ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ವಾರಾಂತ್ಯದಲ್ಲಿ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ಶನಿವಾರ ಮತ್ತು ಭಾನುವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹವಮಾನಾ ಇಲಾಖೆ ವರದಿಯಲ್ಲಿ ಹೇಳಿದೆ. ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ವರದಿಯಲ್ಲಿ ಹೇಳಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ 125 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶವಾಗಿದೆ. ಶನಿವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಮಳೆ ಹೆಚ್ಚು?
ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ. ಗುರುವಾರ ಕೊಡಗು ಜಿಲ್ಲೆಯ ಭಾಗಮಂಡಲ 63ಮಿ.ಮೀ, ನಾಪೋಕ್ಲು 35.6ಮಿ.ಮೀ, ವಿರಾಜಪೇಟೆ 24.4ಮಿ.ಮೀ, ಪೊನ್ನಂಪೇಟೆ 20ಮಿ.ಮೀ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು 61.3ಮಿ.ಮೀ, ಸುಳ್ಯ 54ಮಿ.ಮೀ, ಮಣಿ 43 ಮಿಮೀ, ಧರ್ಮಸ್ಥಳ 40.2ಮಿ.ಮೀ, ಮಂಗಳೂರು 38.6ಮಿ.ಮೀ, ಪುತ್ತೂರು 37ಮಿ.ಮೀ, ಮಂಗಳೂರು ವಿಮಾನ ನಿಲ್ದಾಣ 34.2 ಮಿಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ 39ಮಿ.ಮೀ, ಕಾರ್ಕಳ 31.4ಮಿ.ಮೀ, ಉಡುಪಿ 30.3ಮಿ.ಮೀ ಮಳೆಯಾಗಿದೆ. ಉತ್ತರ ಕನ್ನಡ ಗೋಕರ್ಣ 36.4ಮಿ.ಮೀ, ಕ್ಯಾಸಲ್ ರಾಕ್ 23.4 ಮಿಮೀ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ 23ಮಿ.ಮೀ, ಶೃಂಗೇರಿ 18.6ಮಿ.ಮೀ ಮಳೆ ಸುರಿದಿದೆ. ಹಾಸನದ ಸಕಲೇಶಪುರದಲ್ಲಿ 42.2ಮಿ.ಮೀ, ಚಾಮರಾಜನಗರದ ಬಂಡೀಪುರದಲ್ಲಿ 20 ಮಿಮೀ, ಶಿವಮೊಗ್ಗ ಜಿಲ್ಲೆಯ ಹುಂಚದಕಟ್ಟೆಯಲ್ಲಿ 19.6 ಮಿಮೀ ಮಳೆಯಾಗಿದೆ.
ಜಿಲ್ಲಾವಾರು ಮಳೆ ಮುನ್ಸೂಚನೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಮನಗರ, ಉಡುಪಿ, ಮಂಡ್ಯ, ತುಮಕೂರು, ಕೊಡಗು, ಬೀದರ್, ದಕ್ಷಿಣ ಕನ್ನಡ, ಹಾಸನ, ಯಾದಗಿರಿ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ವಿಜಯನಗರ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ,ಚಿಕ್ಕಮಗಳೂರು, ಕಲಬುರಗಿ, ಶಿವಮೊಗ್ಗ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಕೊಪ್ಪಳ, ವಿಜಯಪುರ, , ಬಾಗಲಕೋಟೆ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications