Karnataka Rain: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ
ರಾಜ್ಯದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಮುಂದುವರೆದಿದೆ, ಮಳೆಯ ಅನಿಶ್ಚಿತತೆಯಿಂದ ರೈತರು ಕಂಗಾಲಾಗಿದ್ದಾರೆ. ಜುಲೈನಲ್ಲಿ ಉತ್ತಮ ಮಳೆಯಾಗಿದ್ದರೆ, ಆಗಸ್ಟ್ನಲ್ಲಿ ಮಳೆ ಕೊರತೆ ಉಂಟಾಗಿದೆ. ಆದರೂ ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿರುವುದು ಸ್ವಲ್ಪ ನೆಮ್ಮದಿ ತಂದಿದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ (ಆಗಸ್ಟ್ 22) ರಂದು ರಾತ್ರಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಗುಡುಗು ಸಹಿತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ವಿವಿಧ ಜಿಲ್ಲೆಗಳ ಮಳೆ ವರದಿ
ಹಾಸನ, ವಿಜಯಪುರ, ಶಿವಮೊಗ್ಗ, ಬೆಳಗಾವಿ, ಬೀದರ್, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಮಂಡ್ಯ, ಉಡುಪಿ, ಉತ್ತರ ಕನ್ನಡ, ಕೊಡಗು, ಧಾರವಾಡ, ಕಲಬುರಗಿ, ಗದಗ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಯಚೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೊಪ್ಪಳ, ವಿಜಯನಗರ, ಹಾವೇರಿ, ರಾಮನಗರ, ದಾವಣಗೆರೆ, ಬಾಗಲಕೋಟೆ, ಚಾಮರಾಜನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳದಲ್ಲಿ 21.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ವಿಯಪುರ ಜಿಲ್ಲೆಯ ರಾಂಪುರ, ಶಿವಮೊಗ್ಗ ಜಿಲ್ಲೆಯ ಸುಲಗೋಡು, ಬೆಳಗಾವಿ ಜಿಲ್ಲೆಯ ಕಣಕುಂಬಿ, ಬೀದರ್ ಜಿಲ್ಲೆಯ ಅಲ್ಲಂಬರ್, ವಿಜಯಪುರ ಜಿಲ್ಲೆಯ ಚಂದಕವಟೆ, ಹಿಕ್ಕನಗುತ್ತಿ, ದಕ್ಷಿಣ ಕನ್ನಡ ಜಿಲ್ಲೆಯ ಜಲಸೂರು, ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು, ಬೆಂಗಳೂರಿನ ದೊರೆಸಾನಿಪಾಳ್ಯದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ಹವಾಮಾನ
ಬೆಂಗಳೂರಿನಲ್ಲಿ ಒಣಹವೆ ಮುಂದುವರೆದಿದ್ದು ಉಷ್ಣಾಂಶ ಕೂಡ ಏರಿಕೆಯಾಗಿದೆ. ಭಾನುವಾರ, ಸೋಮವಾರ ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಮಂಗಳವಾರ ಸಂಜೆ ಕೂಡ ನಗರದ ಹಲವು ಭಾಗಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications