Karnataka Rain: ರೈತರಲ್ಲಿ ಹರ್ಷ ತಂದ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ
ಮುಂಗಾರು ಆಗಮನ ಈ ಬಾರಿ ವಿಳಂಬವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ರೈತರ ಆತಂಕಕ್ಕೆ ಕಾರಣವಾಗಿತ್ತು. ಆದರೆ ತಡವಾಗಿಯಾದರೂ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವುದು ರೈತರಿಗೆ ಸಂತಸ ತಂದಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಭಾಗಗಳು ಮತ್ತು ಮಲೆನಾಡು ಭಾಗಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಭರವಸೆ ಮೂಡಿಸಿದ್ದು ಕೃಷಿ ಚಟುವಟಿಗೆ ಚುರುಕಾಗಲಿದೆ.
ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ. ಸೊಗಲದಲ್ಲಿನ ಜಲಪಾತವು ಜೀವ ಪಡೆದುಕೊಂಡಿದ್ದು, ಮುರಗೋಡು, ಕರಿಮನಿ, ಹೊಸೂರಿನಲ್ಲೂ ಉತ್ತಮ ಮಳೆಯಾದ ವರದಿಯಾಗಿದೆ.

ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಹಲವು ಹೊಳೆಗಳು ತುಂಬಿ ಹರಿಯುತ್ತಿದ್ದು, ಕೃಷಿ ಭೂಮಿ ಜಲಾವೃತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಉತ್ತಮ ಮಳೆಯಾಗಿದ್ದು, ಬಿಸಿಲಿನಿಂದ ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ
ತುಮಕೂರು ಜಿಲ್ಲೆಯ ಬೋರನಕಣಿವೆ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 80.4 ಮಿ.ಮೀ ಮಳೆ ದಾಖಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ, ಚಿಕ್ಕನಾಯಕನಹಳ್ಳಿ, ಕುಣಿಗಲ್, ಕೊರಟಗೆರೆ ತಾಲೂಕಿನ ಗಲವು ಭಾಗಗಳಲ್ಲಿ ಕಳೆದ ಎರಡು ದಿನದಿಂದ ಉತ್ತಮ ಮಳೆ ಸುರಿದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಗೌರಿಬಿದನೂರು ತಾಲೂಕಿನ ಹಲವು ಕಡೆಗಳಲ್ಲಿ ಸಂಜೆ ಉತ್ತಮ ಮಳೆಸುರಿದಿದೆ.
ಕೊಡಗು ಜಿಲ್ಲೆಯಲ್ಲಿ ಕೂಡ ಮಳೆ ಚುರುಕಾಗಿದ್ದು, ಗೋಣಿಕೊಪ್ಪಲು ಮತ್ತು ಬಲ್ಲಮಾವಟಿಯಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇನ್ನು ಕರ್ನಾಟಕದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 23, 24, ಮತ್ತು 25 ರಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದ ತೀರ ಪ್ರದೇಶಗಳಲ್ಲಿ ವಾಸಿಸುವ ಜನರಿಗೂ ಎಚ್ಚರಿಕೆಯಿಂದ ಇರುವಂತೆ ಹೇಳಲಾಗಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರವಾಸಿಗರಿಗೂ ಸಮುದ್ರದ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಭಾಗಗಳಲ್ಲಿ ಶುಕ್ರವಾರ ಕೂಡ ಉತ್ತಮ ಮಳೆಯಾಗಲಿದೆ. ದಾವಣಗೆರೆ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಮಂಡ್ಯ, ಶಿವಮೊಗ್ಗ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಕೂಡ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಿಗೂ ಮುಂಗಾರು ಪ್ರವೇಶವಾಗಿದ್ದು ಇನ್ನೂ ಮೂರು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾದಗಿರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.












Click it and Unblock the Notifications