Karnataka Rain: ರಾಜ್ಯಕ್ಕೆ ಮುಂಗಾರು ಆಗಮನ : ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ತಡವಾಗಿಯಾದರೂ ಈ ಬಾರಿ ಮುಂಗಾರು ರಾಜ್ಯಕ್ಕೆ ಕಾಲಿಟ್ಟಿದೆ, ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸಿದ್ದು, ಇಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಬಾರಿ ಮುಂಗಾರು ಆಗಮನ ತಡವಾಗಿದ್ದರೂ, ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಬಿಪರ್ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಂಡಮಾರುತದ ಪರಿಣಾಮ ಮುಂದಿನ ಮೂರು-ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ, ಕೇರಳ, ಗೋವಾ, ಆಂಧ್ರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಮೇಘಾಯಲ, ಅರುಣಾಚಲ ಪ್ರದೇಶ, ಲಕ್ಷದ್ವೀಪಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಚಂಡಮಾರುತದ ಪರಿಣಾಮ ರಾಜ್ಯದ ತುಮಕೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಕೂಡ ಶುಕ್ರವಾರ ಸಂಜೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯ ಹಗದೂರಿನಲ್ಲಿ 38 ಮಿಮೀ ಮಳೆಯಾಗಿದೆ. ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಾಲುವೇಹಳ್ಳಿಯಲ್ಲಿ 86 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಸಿಲ ಧಗೆಗೆ ನಲುಗಿರುವ ಕರಾವಳಿ
ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಬಿಸಿಲ ಬೇಗೆಯಿಂದ ಜನ ತತ್ತರಿಸಿದ್ದರು. ನದಿ, ಕಾಲುವೆಗಳು ಬತ್ತಿ ಹೋಗಿದ್ದು ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಮಂಗಳೂರಿನ ಹಲವು ಶಾಲಾ, ಕಾಲೇಜು, ಹಾಸ್ಟೆಲ್ಗಳಲ್ಲಿ ನೀರಿನ ಹಾಹಾಕಾರದಿಂದಾಗಿ ಟ್ಯಾಂಕರ್ ನೀರಿನ ಮೊರೆ ಹೋಗುವಂತಾಗಿದೆ.
ಕಟೀಲು, ಶೃಂಗೇರಿ ಸೇರಿದಂತೆ ಪುಣ್ಯ ಕ್ಷೇತ್ರಗಳಲ್ಲಿ ಕೂಡ ನೀರಿಗೆ ಹಾಹಾಕರ ಉಂಟಾಗಿದ್ದು, ಭಕ್ತರು ಪರದಾಡುವಂತಾಗಿದೆ. ಈ ನಡುವೆ ಜೂನ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದು, ಜನರಿಗೆ ನಿಟ್ಟುಸಿರು ಬಿಡುವಂತಾಗಿದೆ.












Click it and Unblock the Notifications