Karnataka Rain: ಇಂದು ರಾಜ್ಯದ "ಆ" ಜಿಲ್ಲೆಯಲ್ಲೇ ಭಾರೀ ಮಳೆ ಸುರಿಯುವ ಮುನ್ಸೂಚನೆ
ಕರ್ನಾಟಕ, ಜೂನ್, 08: ಈಗಾಗಲೇ ಮುಂಗಾರು ಪೂರ್ವ ಮಳೆ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದರೆ, ಮತ್ತೊಂದೆಡೆ ಇದೀಗ ಕೆಲವು ಕಡೆ ಬಿಸಿಲಿನ ಧಗೆ ಹೆಚ್ಚಾಗುತ್ತಲೇ ಇದೆ. ಇದರಿಂದ ಬೇಸತ್ತ ಜನರು ಮಳೆರಾಯ ಯಾವಾಗ ಕಾದ ಭೂಮಿಯನ್ನು ತಂಪು ಮಾಡುತ್ತಾನೋ ಎಂದು ಕಾದುಕುಳಿತಿದ್ದಾರೆ. ಹಾಗಾದರೆ ಹವಾಮಾನ ಇಲಾಖೆಯ ಪ್ರಕಾರ ಇಂದಿನ ವಾತಾರಣ ಹೇಗಿರಲಿದೆ. ಹಾಗೆಯೇ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಸಂಜೆ ವೇಳೆಗೆ ಮಳೆ ಮುನ್ಸೂಚನೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಮಳೆಯಾಗಿದ್ದು, ಬುಧವಾರ ಬಿಸಿಲಿನ ವಾತಾವರಣ ಮುಂದುವರೆದಿತ್ತು. ನಗರದಲ್ಲಿ ಮಳೆರಾಯ ಒಂದು ದಿನ ಬಿಡುವು ನೀಡಿದ್ದಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗಿ ಇಲ್ಲಿನ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಕೂಡ ಇಲ್ಲಿ ಬೆಳಗ್ಗೆಯಿಂದ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗುವ ಮುನ್ಸೂಚನೆ ಇದೆ.

ಮತ್ತೊಂದೆಡೆ ಮುಂಗಾರು ಮಳೆ ವಿಳಂಬ ಹಿನ್ನೆಲೆ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದ್ದು, ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಶುಕ್ರವಾರ ಗುಡುಗು ಸಹಿತ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹಾಗೆಯೇ ಮತ್ತೊಂದೆಡೆ ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಸಂದೇಶವನ್ನು ರವಾನಿಸಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಇದರ ಜೊತೆ ಗಾಳಿಯ ವೇಗವು ಕೂಡ ಹೆಚ್ಚಾಗಿದೆ. ಅಲ್ಲದೆ ಬೆಂಗಳೂರ ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ಕೆಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಬೀಳುವ ಸಂಭವ ಇದೆ. ಕರಾವಳಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ತಿಳಿಸಿದೆ.
ಇದೀಗ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಆದರೆ ಸಂಜೆ ವೇಳೆಗೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಲಿದ್ದಾನೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.
ಇನ್ನು ಇಂದು ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಹಾಸನ, ಮೈಸೂರು, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾವಗುವ ಸಂಭವ ಇದೆ ಎನ್ನುವ ಮಾಹಿತಿಯನ್ನು ನೀಡಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 35-45 ಕಿ.ಮೀ.ನಿಂದ 55 ಕಿ.ಮೀ.ನಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯ ಸಂದೇಶವನ್ನು ಸಹ ರವಾನಿಸಲಾಗಿದೆ.
ಇನ್ನು ಬುಧವಾರ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ತಲಾ 3 ಸೆಂ.ಮೀ. ಮಳೆ ಬಿದ್ದಿದೆ. ಕಲಬುರ್ಗಿ ಜಿಲ್ಲೆಯ ಮಹಾಗಾವ್, ಯಾದಗಿರಿ ಜಿಲ್ಲೆಯ ಶೋರಪುರದಲ್ಲಿ ತಲಾ 1 ಸೆಂ.ಮೀ. ಮಳೆ ಬಿದ್ದಿದೆ. ಹಾಗೆಯೆ ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸಿಯಸ್ ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ.
ಮತ್ತೊಂದೆಡೆ ಅರಬ್ಬೀ ಸಮುದ್ರದಲ್ಲಿ ಬಿಪರ್ಜಾಯ್ ಸೈಕ್ಲೋನ್ ಉಂಟಾದ ಹಿನ್ನೆಲೆ ಮುಂದಿನ ಕೆಲವೇ ಕ್ಷಣಗಳಲ್ಲಿ ತೀವ್ರ ಚಂಡಮಾರುತವಾಗಿ ರೂಪಗೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ದೇಶದ ಹಲವೆಡೆ ಮಳೆರಾಯ ಅಬ್ಬರಿಸಲೂಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಿಪರ್ಜಾಯ್ ಚಂಡಮಾರುತ ಹಿನ್ನೆಲೆ ಶುಕ್ರವಾರ ಮುಂಗಾರು ಮಳೆ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ. ಕೇರಳ ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ. ಹಾಗೆಯೇ ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅದರಲ್ಲೂ ಮುಂಗಾರು ವಿಳಂಬ ಹಿನ್ನೆಲೆ ಉಡುಪಿ, ಮಂಗಳೂರಿನಲ್ಲಿ ಹಲವೆಡೆ ನೀರಿನ ಕೊರತೆ ಉಂಟಾಗಿದೆ ಎನ್ನುವ ಮಾಹಿತಿ ಇದೆ. ಆದ್ದರಿಂದ ಇಲ್ಲಿನ ಜನರು ಮಳೆ ಬಂದರೆ ಸಾಕು ಬಿಸಿಲಿನ ಬೇಗೆಯಿಂದ ಹೊರಬಂದು ನೆಮ್ಮದಿಯ ನಿಟ್ಟುಸಿರು ಬಿಡುತ್ತೇವೆ ಎನ್ನುವಷ್ಟರ ಮಟ್ಟಿಗೆ ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ ಕಲಬುರಗಿ, ಬಳ್ಳಾರಿ, ರಾಯಚೂರು ಜಿಲ್ಲೆಯ ಜನರು ಕೂಡ ಬಿಸಿಲಿನ ಬೇಗೆಗೆ ಬೇಸತ್ತು ಹೋಗಿದ್ದು, ಮಳೆರಾಯ ಯಾವಾಗ ಕಾದ ಭೂಮಿಗೆ ತಂಪೆರೆದು ನಮಗೆ ನೆಮ್ಮದಿ ನೀಡುತ್ತಾನೆಯೋ ಎಂದು ಕಾದು ಕುಳಿತಿದ್ದಾರೆ.












Click it and Unblock the Notifications