Karnataka Rain: ರಾಜ್ಯ ರಾಜಧಾನಿ ಬಿಟ್ಟರೇ ಇಂದು ಈ ಜಿಲ್ಲೆಯಲ್ಲೇ ಅಧಿಕ ಮಳೆ ದಾಖಲಾಗುವ ಮುನ್ಸೂಚನೆ
ಕರ್ನಾಟಕ, ಜೂನ್, 07: ಈಗಾಗಲೇ ಮುಂಗಾರು ಪೂರ್ವ ಮಳೆ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಹಾಗೆಯೆ ಮುಂಗಾರು ಮಳೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರಿಂದ ಇನ್ನೆಷ್ಟು ಅವಘಡಗಳು ಸಂಭವಿಸುತ್ತವೆಯೋ ಎನ್ನುವ ಆತಂಕ ರಾಜ್ಯದ ಜನರದ್ದಾಗಿದೆ. ಅಲ್ಲದೆ ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ (ಜೂನ್ 06) ಬೆಳಗ್ಗೆಯಿಂದ ಮೋಡ ಕವಿದ ವಾತಾರಣ ಇದ್ದು, ಮಧ್ಯಾಹ್ನ ಒಂದೆರಡು ಗಂಟೆಗಳ ಕಾಲ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ನಂತರ ಸಂಜೆ ಸುಮಾರು 4 ಗಂಟೆ ವೇಳೆಗೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ಇದರಿಂದ ಹಲವೆಡೆ ರಸ್ತೆಗಳಲ್ಲಿ ಸ್ವಲ್ಪಮಟ್ಟಿಗೆ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದ ಘಟನೆಯೂ ನಡೆಯಿತು.

ಮಂಗಳವಾರ ಸಂಜೆ ಕೋರಮಂಗಲ, ಮೆಜೆಸ್ಟಿಕ್, ಜಯನಗರ, ಕೆ.ಆರ್.ಮಾರುಕಟ್ಟೆ, ಶೇಶಾದ್ರಿಪುರಂ ಸೇರಿಂದಂತೆ ನಗರದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾನೆ. ಅಲ್ಲದೆ ಇಂದು ಕೂಡ ರಾಜಧಾನಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗೆಯೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರವೂ ಸಹ ಸಾಧಾರಣ ಮಳೆ ಬೀಳಲಿದೆ. ಕೆಲವೆಡೆ ಗುಡುಗು ಸಹಿತ ಭಾರೀ ಮಳೆ ಬೀಳುವ ಸಂಭವ ಇದೆ ಎಂದು ತಿಳಿಸಿದೆ.
ಇನ್ನು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಮಾಹಿತಿ ಪ್ರಕಾರ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ವಿಳಂಬ ಆಗಲಿದೆ. ಮೊದಲು ಜೂನ್ 4ರಂದು ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಮುನ್ಸೂಚನೆ ನೀಡಲಾಗಿತ್ತು. ಆದರೆ ಇದೀಗ ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಇಂದಿನಿಂದ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿದೆ.
ಮುಂಗಾರು ಹಿನ್ನೆಲೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇಲ್ಲಿ ಬಿರುಗಾಳಿ ಗಂಟೆಗೆ 35-45 ಕಿ.ಮೀ.ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆಯ ಸೂಚನೆಯನ್ನು ನೀಡಿದೆ. ಇನ್ನು ಜೂನ್ 9 ರಿಂದಲೂ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹಾಗೆಯೇ ಮಂಗಳವಾರ ತುಮಕೂರಿನ ಕೊನೇಹಳ್ಳಿಯಲ್ಲಿ 2 ಸೆಂ.ಮೀ. ಮಳೆ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಅಂಕೋಲಾ, ಹಾಸನದ ಸಿಆರ್ ಪಟ್ಟಣ, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ, ತುಮಕೂರು ನಗರ ಮತ್ತು ಜಿಲ್ಲೆಯ ಮಧುಗಿರಿಯಲ್ಲಿ ತಲಾ 1 ಸೆಂ.ಮೀ. ಮಳೆ ದಾಖಲಾಗಿದೆ. ಇನ್ನು ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಮಳೆರಾಯ ಆರ್ಭಟಿಸಿದ್ದಾನೆ.
ಮತ್ತೊಂದೆಡೆ ಇಂದು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೆ ನಗರದ ಕೆಲವು ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಮತ್ತು ನಗರದಲ್ಲಿ ಗರಿಷ್ಠ ಉಷ್ಣಾಂಶ 32, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಮುಂಗಾರು ಮಳೆ ಈ ಬಾರಿ ವಿಳಂಬ ಆದ್ದರಿಂದ ಬಿತ್ತನೆಗೆ ಬೀಜ ಗೊಬ್ಬರಗಳನ್ನು ತಯಾರಿ ಮಾಡಿಕೊಂಡಿದ್ದ ರೈತರು ಕಂಗಾಲಾಗಿದ್ದಾರೆ. ಅಲ್ಲದೆ ಅನ್ನದಾತರು ಮಳೆ ಯಾವಾಗ ಬರುತ್ತದೆಯೋ ಎಂದು ಕಾದುಕುಳಿತಿದ್ದಾರೆ. ಮತ್ತೊಂದೆಡೆ ನೋಡುವುದಾದರೆ ಕೊಡಗು, ಕರಾವಳಿ ಸೇರಿದಂತೆ ಹಲವು ಹಲವು ಭಾಗಗಳ ಜನರಲ್ಲಿ ಪ್ರವಾಹದ ಆತಂಕ ಮನೆ ಮಾಡಿದೆ. ಆದ್ದರಿಂದಲೇ ಈಗಾಗಲೇ ಜಿಲ್ಲಾವಾರು ಪ್ರವಾಹ ನಿಯಂತ್ರಣಕ್ಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.












Click it and Unblock the Notifications