Karnataka rains: ಕರಾವಳಿಗೆ ಮುಂದುವರಿದ ಯೆಲ್ಲೋ ಅಲರ್ಟ್, ಒಳನಾಡು ಜಿಲ್ಲೆಗಳ ಹವಾಮಾನ ವರದಿ
ಬೆಂಗಳೂರು, ಜುಲೈ 11: ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಜುಲೈ 15ರವರೆಗೆ ನಾಲ್ಕು ದಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ಕೊಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸುಮಾರು ಎರಡು ವಾರಗಳಿಂದಲೂ ವರುಣ ಬಿಟ್ಟು ಬಿಡದೇ ಅಬ್ಬರಿಸಿದ್ದಾನೆ. ಇದರಿಂದಾಗಿ ಕರಾವಳಿ ಭಾಗದ ಜಿಲ್ಲೆಗಳು ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಅಕ್ಷರಶಃ ನಲುಗಿತು. ಹೀಗಾಗಿ ಕೆಲವು ದಿನ ರೆಡ್ ಅಲರ್ಟ್ ಪಡೆದಿದ್ದ ಕರಾವಳಿ ಜಿಲ್ಲೆಗಳು ಇದೀಗ ಜುಲೈ 15 ಯೆಲ್ಲೋ ಅಲರ್ಟ್ ಪಡೆದಿವೆ.

ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನವು ಸಾಧಾರಣದಿಂದ ಭಾರಿ ಮಳೆಯಾಗಲಿದೆ. ನಂತರ ದಿನಗಳಲ್ಲಿ ಈ ಭಾಗದಲ್ಲಿ ಮಳೆ ಪ್ರಭಾವ ತುಸು ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದೇ ಐದು ದಿನದ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕಲುಬುರಗಿ, ಮತ್ತು ಬಿದರ್ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗುವ ಸಂಭವವಿದೆ. ಎಲ್ಲೆಡೆ ಮೋಡ ಕವಿದ ವಾತಾವರಣ ಕಂಡು ಬಂದಿದೆ.

ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಒಂದೆರಡು ವಾರದಿಂದ ಉತ್ತಮ ಮಳೆಯಾಗಿದ್ದು, ಕೃಷಿ ಕೆಲಸಗಳು ಎಂದಿನಂತೆ ನಡೆದಿವೆ. ಬಹುತೇಕ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಬರಗಾಲ ಸ್ಥಿತಿ ಕಂಡಿದ್ದ ಜಮೀನುಗಳಲ್ಲಿ ಹಸಿರ ಪೈರು ತುಂಬಿಕೊಂಡಿದೆ. ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 14 ಮತ್ತು 15ರಂದು ಎರಡು ದಿನ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಈ ಕಾರಣಕ್ಕೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಗುರದಿಂದ ಸಾಧಾರಣವಾಗಿ ಮಳೆ ನಿರೀಕ್ಷೆ
ಇದರ ಹೊರತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಎಲ್ಲ ಕಡೆಗಳಲ್ಲಿಯೂ ಮುಂದಿನ ಐದು ದಿನ ಹಗುರದಿಂದ ಸಾಧಾರಣದಿಂದ ಮಳೆ ಸುರಿಯುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ತುಂತುರು ಮಳೆ ಬೀಳಲಿದೆ. ಇದರ ಹೊರತು ಈ ಭಾಗಕ್ಕೆ ಗಂಭೀರ ಸ್ವರೂಪದ ಮಳೆ ಮುನ್ಸೂಚನೆ ಇಲ್ಲ ಎಂದು ತಿಳಿಸಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿವಿಧೆಡೆ ಮುಂದಿನ ಕೆಲವು ದಿನ ಮೋಡ ಕವಿದ ವಾತಾವರಣ ಕಂಡು ಬರಲಿದೆ. ನಗರದಲ್ಲಿ ತುಂತುರು ಮತ್ತು ಸಾಧಾರಣ ಮಳೆ ಆಗುವ ನಿರೀಕ್ಷೆ ಇದ್ದು, ತಾಪಮಾನ ಇಳಿಕೆಯಾಗಲಿದೆ. ಹೀಗಾಗಿ ನಗರದಲ್ಲಿ ತಂಪು ವಾತಾವರಣ ಮುಂದುವರಿಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.












Click it and Unblock the Notifications